ಕಬ್ಬು ಎಫ್ಆರ್ಪಿ ದರ ಪುನರ್ ಪರಿಶೀಲನೆಗೆ ಕುರುಬೂರು ಶಾಂತಕುಮಾರ್ ಆಗ್ರಹ
ಬೆಂಗಳೂರು, ಅ.24: ಕಬ್ಬು ಎಫ್ಆರ್ಪಿ ದರವನ್ನು 2020-21 ಸಾಲಿಗೆ ಶೇ.10ರಷ್ಟು ಇಳುವರಿಗೆ ಪ್ರತಿ ಟನ್ಗೆ 2850 ರೂ.ನಿಗದಿ ಮಾಡಿರುವುದು ಅವೈಜ್ಞಾನಿಕ. ಆದುದರಿಂದ, ಸರಕಾರ ಎಫ್ಆರ್ಪಿ ದರವನ್ನು ಪುನರ್ ಪರಿಶೀಲಿಸಬೇಕೆಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.
ಎಫ್ಆರ್ಪಿ ದರವನ್ನು ಪುನರ್ ಪರಿಶೀಲಿಸುವಂತೆ ಅ.15ರಂದು ನಡೆದ ಕಬ್ಬು ಖರೀದಿ ಮಂಡಳಿ ಸಭೆಯಲ್ಲಿ ಒತ್ತಾಯಿಸಲಾಗಿದೆ ಈ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಿ ತೀರ್ಮಾನಿಸುವುದಾಗಿ ಸಕ್ಕರೆ ಸಚಿವರು ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕಳೆದ ಮೂರು ವರ್ಷಗಳಿಂದ ಸಕ್ಕರೆ ಕಾರ್ಖಾನೆಗಳು ಸಕ್ಕರೆ ಇಳುವರಿಯನ್ನು ಕಡಿಮೆ ತೋರಿಸುವ ಮೂಲಕ ರೈತರನ್ನು ವಂಚಿಸುತ್ತಿವೆ. ಈ ಬಗ್ಗೆ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಕಬ್ಬು ಬೆಳೆಗಾರರು ಹಾಗೂ ಕಾರ್ಖಾನೆ ನಡುವೆ ದ್ವಿಪಕ್ಷೀಯ ಒಪ್ಪಂದ ಪತ್ರ ಜಾರಿ ಮಾಡಬೇಕೆಂದು ಆದೇಶಿಸಿದ್ದರು ಯಾವುದೇ ಕಾರ್ಖಾನೆಗಳು ಈ ಆದೇಶ ಪಾಲನೆ ಮಾಡುತ್ತಿಲ್ಲ ಎಂದು ಅವರು ಪ್ರಕಟಣೆಯಲ್ಲಿ ದೂರಿದ್ದಾರೆ.