ಕುಸುಮಾ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಆರ್ಆರ್ ನಗರ ಇನ್ಸ್ಪೆಕ್ಟರ್ ವರ್ಗಾವಣೆ
Update: 2020-10-24 14:01 GMT
ಬೆಂಗಳೂರು, ಅ.24: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆ ಆಯೋಗದ ಸೂಚನೆ ಮೇರೆಗೆ ಪೊಲೀಸ್ ಇಲಾಖೆಯು ಆರ್.ಆರ್.ನಗರ ಠಾಣೆಯ ಇನ್ಸ್ಪೆಕ್ಟರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಆರ್.ಆರ್.ನಗರ ಠಾಣೆಯ ಇನ್ಸ್ಪೆಕ್ಟರ್ ನವೀನ್ ಸುಪೇಕರ್ ವಿ. ಅವರನ್ನು ರಾಜ್ಯ ಗುಪ್ತವಾರ್ತೆ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಮಲ್ಲೇಶ್ವರಂ ಸಂಚಾರಿ ಠಾಣೆ ಇನ್ಸ್ಪೆಕ್ಟರ್ ಅನಿಲ್ರನ್ನು ಆರ್.ಆರ್.ನಗರ ಠಾಣೆಗೆ ವರ್ಗಾವಣೆ ಮಾಡಿ ರಾಜ್ಯ ಪೊಲೀಸ್ ಇಲಾಖೆಯ ಐಜಿಪಿ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.
ಎಫ್ಐಆರ್ ದಾಖಲಿಸಿದ್ದ ಇನ್ಸ್ಪೆಕ್ಟರ್
ಆರ್ಆರ್ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕುಸುಮಾ ವಿರುದ್ಧ ಚುನಾವಣೆ ನಿಯಮ ಉಲ್ಲಂಘನೆ ಆರೋಪದಡಿ ಆರ್ಆರ್ ನಗರ ಠಾಣೆಯ ಇನ್ಸ್ಪೆಕ್ಟರ್ ನವೀನ್ ಸುಪೇಕರ್ ಅವರು ಎಫ್ಐಆರ್ ದಾಖಲಿಸಿದ್ದರು. ಇದಾದ ಬಳಿಕ ಕಾಂಗ್ರೆಸ್ ನಾಯಕರು ಭಾರೀ ಪ್ರತಿಭಟನೆ ನಡೆಸಿದ್ದರು.