ದಸರಾ ಗಜಪಡೆಗೆ ಪೂಜೆ ಸಲ್ಲಿಸಿದ ಸಚಿವ ಎಸ್.ಟಿ.ಸೋಮಶೇಖರ್

Update: 2020-10-25 14:09 GMT

ಮೈಸೂರು,ಅ.25: ನಾಡಹಬ್ಬ ದಸರಾ ಅಂಗವಾಗಿ ನಡೆಯುವ ಆಯುಧ ಪೂಜೆ ಹಿನ್ನೆಲೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಜಂಬೂ ಸವಾರಿಯಲ್ಲಿ ಭಾಗವಹಿಸುವ ಗಜಪಡೆಗೆ ವಿಶೇಷ ಪೂಜೆ ಸಲ್ಲಿಸಿದರು.

ರವಿವಾರ ಸೋಮೇಶ್ವರ ದೇವಾಲಯದ ಮುಂಭಾಗ ಅಭಿಮನ್ಯು ಮತ್ತು ತಂಡಕ್ಕೆ ಪೂಜಾ ಕಾರ್ಯ ನೆರವೇರಿಸಿದ ಅವರು, ಜಂಬೂ ಸವಾರಿ ನಿರ್ವಿಘ್ನವಾಗಿ ನೆರವೇರಲೆಂದು ಪ್ರಾರ್ಥನೆ ಸಲ್ಲಿಸಿ, ಗಜಪಡೆಗೆ ಹಣ್ಣುಬೆಲ್ಲ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪ್ರದಾಯದಂತೆ ನಾಡಹಬ್ಬ ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಭಾಗವಹಿಸುವ ಗಜಪಡೆಗೆ ಪೂಜೆ ಸಲ್ಲಿಸಲಾಗಿದೆ. ತಾಯಿ ಚಾಮುಂಡೇಶ್ವರಿ ಕೊರೋನ ಮುಕ್ತವಾಗಿಸಲಿ ಎಂದು ಪ್ರಾರ್ಥಿಸಲಾಗಿದೆ ಎಂದರು.

ಸೋಮವಾರ ನಡೆಯಲಿರುವ ದಸರಾ ಜಂಬೂ ಸವಾರಿಗೆ ಎಲ್ಲಾ ರೀತಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್ ರಾಜ್ಯ ಮಟ್ಟದ ಸಲಹಾ ಸಮಿತಿಯ ಸಲಹೆಯಂತೆ ಅರಮನೆ ಆವರಣದಲ್ಲಿ 300 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ದಸರಾ ಸಂದರ್ಭದಲ್ಲಿ ಕೊರೋನ ಸೋಂಕು ಹರಡದಂತೆ ಅನೇಕ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಜನಸಂದಣಿ ಉಂಟಾಗದಂತೆ ಮುನ್ನೆಚ್ಚರಿಕೆಯಿಂದ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮವನ್ನು ವರ್ಚುಯಲ್ ಆಗಿ ನಡೆಸಿದ್ದು, ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿವೆ ಎಂದರು.

ಕಳೆದ ಎಂಟು ದಿನಗಳಲ್ಲಿ ಆರಮನೆ ಆವರಣದಲ್ಲಿ ಜರುಗಿದೆ ಎಲ್ಲಾ ಕಾರ್ಯಕ್ರಮಗಳನ್ನು 6 ಲಕ್ಷ ಮಂದಿ ವೀಕ್ಷಿಸಿದ್ದಾರೆ. ಅದರಂತೆ ಜಂಬೂ ಸವಾರಿ ಮೆರವಣಿಗೆಯು ಕೂಡ ವರ್ಚುಯಲ್‍ನಲ್ಲಿ ನಡೆಯಲಿದ್ದು, ಸಾರ್ವಜನಿಕರು ಮನೆಯಲ್ಲಿ ಕುಳಿತು ವೀಕ್ಷಿಸಬೇಕು ಎಂದರು.

ಈ ಸಂದರ್ಭದಲ್ಲಿ ಶಾಸಕ ಎಲ್.ನಾಗೇಂದ್ರ, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಡಿಸಿಎಫ್ ಅಲೆಕ್ಸಾಂಡರ್, ಗಜಪಡೆಯ ವೈದ್ಯ ಡಾ.ನಾಗರಾಜ್ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News