ಸೊರಬದಲ್ಲಿ ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ.: ಸಿಎಂ ಯಡಿಯೂರಪ್ಪ ಘೋಷಣೆ

Update: 2020-10-26 07:22 GMT

ಶಿವಮೊಗ್ಗ, ಅ.26: ಸಮಾಜಮುಖಿ ಚಿಂತನೆಯ ನಾಯಕರಾಗಿದ್ದ ಬಂಗಾರಪ್ಪ ಜಾರಿಗೊಳಿಸಿದ ಜನಪರ ಹಾಗೂ ದೂರದೃಷ್ಟಿಯ ಯೋಜನೆಗಳಿಂದಾಗಿ ಇಂದಿಗೂ ಅವರು ಜನಮಾನಸದಲ್ಲಿ ಚಿರಸ್ಥಾಯಿಯಾಗಿದ್ದಾರೆ. ಸೊರಬ ಪಟ್ಟಣದಲ್ಲಿ ಬಂಗಾರಪ್ಪರ ಸ್ಮಾರಕ ನಿರ್ಮಿಸಲು ಈಗಾಗಲೇ ಒಂದು ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪರ 87ನೇ ಜನ್ಮಸ್ಮರಣೆ ಹಾಗೂ ಸೊರಬ ಪಟ್ಟಣದಲ್ಲಿ 21.15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಉದ್ಯಾನವನವನ್ನು ಸೋಮವಾರ ಆನ್‍ಲೈನ್ ಸಮಾರಂಭದ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕೃಷಿ ಕಾರ್ಮಿಕರು, ರೈತರು, ದೀನ ದಲಿತರು ಮತ್ತು ಗ್ರಾಮೀಣ ಜನತೆಯ ಅಭ್ಯುಧಯಕ್ಕಾಗಿ ನಿರಂತರವಾಗಿ ಶ್ರಮಿಸಿದ ಬಂಗಾರಪ್ಪ ಜನಪರ ಚಿಂತನೆಯ ನಾಯಕ ಎಂದು ಯಡಿಯೂರಪ್ಪ ಬಣ್ಣಿಸಿದರು.

ಸೊರಬ ಪಟ್ಟಣದಲ್ಲಿ ಉದ್ಘಾಟಿಸಲಾಗಿರುವ ಉದ್ಯಾನವನ್ನು ಪಟ್ಟಣ ಪಂಚಾಯತ್ ಆಡಳಿತ ಸರಿಯಾಗಿ ನಿರ್ವಹಣೆ ಮಾಡಬೇಕು ಎಂದು ಹೇಳಿದರು.

ಕೋವಿಡ್ ಸಂಕಷ್ಟದ ನಡುವೆಯೂ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ರಾಜ್ಯದ ಎಲ್ಲಾ ಭಾಗಗಳನ್ನು ಸಮಾನವಾಗಿ ಅಭಿವೃದ್ಧಿಪಡಿಸಲು ನಾವು ಕಾರ್ಯಪ್ರವೃತ್ತರಾಗಿದ್ದೇವೆ ಎಂದರು.

ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಎಸ್ಪಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಮತ್ತಿತರರು ಉಪಸ್ಥಿತರಿದ್ದರು.

ಸೊರಬ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಮಾರಂಭದಲ್ಲಿ ಶಾಸಕ ಕುಮಾರ ಬಂಗಾರಪ್ಪ ಅಧ್ಯಕ್ಷತೆ ವಹಿಸಿದ್ದರು. ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News