ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಸಾರ್ವಜನಿಕ ಚರ್ಚೆ ಏರ್ಪಡಿಸಿ: ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಸವಾಲು

Update: 2020-10-26 14:07 GMT

ಬೆಂಗಳೂರು, ಅ.26: ನಾನು ಮುಖ್ಯಮಂತ್ರಿಯಾಗಿದ್ದ ಐದು ವರ್ಷಗಳ ಅವಧಿಯಲ್ಲಿ ರಾಜ್ಯದ ಜನರ ತಲೆ ಮೇಲೆ ಸಾಲದ ಹೊರೆ ಹೊರಿಸಿದ್ದೇನೆ ಎಂದು ಬಿಜೆಪಿಯವರು ನಿರಾಧಾರವಾಗಿರುವ ಅಂಕಿ-ಅಂಶಗಳನ್ನು ಹುಟ್ಟುಹಾಕಿ ರಾಜ್ಯದ ಜನತೆಯ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸತ್ಯ ಸಂಗತಿಯನ್ನು ಜನತೆಯ ಮುಂದಿಡುವುದು ನನ್ನ ಕರ್ತವ್ಯವೆಂದು ಭಾವಿಸಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಿಜೆಪಿಗೆ ತಾನು ಮಾಡಿರುವ ಆರೋಪದ ಮೇಲೆ ಅಷ್ಟೊಂದು ವಿಶ್ವಾಸ ಇದ್ದರೆ ಕಾಂಗ್ರೆಸ್ ಮತ್ತು ಬಿಜೆಪಿಯ ತಲಾ ಐದು ವರ್ಷಗಳ ಆಡಳಿತಾವಧಿಯ ಹಣಕಾಸು ಸ್ಥಿತಿ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಏರ್ಪಡಿಸಿ ಸ್ಥಳ, ಸಮಯ ತಿಳಿಸಿದರೆ ನಾನು ಬಂದು ಅದರಲ್ಲಿ ಭಾಗವಹಿಸುತ್ತೇನೆ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಬಿಜೆಪಿ ತನ್ನ ನಾಯಕರಿಗೆ ದೇಶ, ಧರ್ಮ, ಸಮಾಜ ಒಡೆಯುವ ತರಬೇತಿಯನ್ನಷ್ಟೇ ನೀಡದೆ ಆಡಳಿತ ಮತ್ತು ಆರ್ಥಿಕ ನಿರ್ವಹಣೆ ಬಗ್ಗೆಯೂ ಪಾಠ ಮಾಡಿದ್ದರೆ ಅವರಿಂದ ಇಂತಹ ಅಜ್ಞಾನದ ಮುತ್ತುಗಳು ಉದುರಿ ಬೀಳುತ್ತಿರಲಿಲ್ಲ. ತರಬೇತಿದಾರರ ಕೊರತೆಯಿದ್ದರೆ ನಾನೇ ಬಂದು ಪಾಠ ಮಾಡುತ್ತೇನೆ ಎಂದು ಅವರು ತಿರುಗೇಟು ನೀಡಿದ್ದಾರೆ.

2008-09ರಿಂದ 2013-14ರ ವರೆಗಿನ ಬಿಜೆಪಿ ಸರಕಾರದ ಐದು ವರ್ಷಗಳ ಅವಧಿಯಲ್ಲಿ ಸಾಲದ ಪ್ರಮಾಣ ಶೇ.212ರಷ್ಟು ಹೆಚ್ಚಿತ್ತು. 2013-14ರಿಂದ 2018-19ರ ನಮ್ಮ ಸರಕಾರದ ಅವಧಿಯಲ್ಲಿ ಸಾಲದ ಪ್ರಮಾಣ ಹೆಚ್ಚಿದ್ದು ಕೇವಲ ಶೇ. 65ರಷ್ಟು ಮಾತ್ರ. ಹಿಂದಿನ ಅವಧಿಯ ಸಾಲವನ್ನು ಸೇರಿಸಿ ರಾಜ್ಯದ ಒಟ್ಟು ಸಾಲದ ಪ್ರಮಾಣ 2008-09ರಿಂದ 2013-14ರ ಅವಧಿಯಲ್ಲಿ ಶೇ.94.18ರಷ್ಟು ಹೆಚ್ಚಿದ್ದರೆ, 2013-14ರಿಂದ 2018-19ರ ಅವಧಿಯಲ್ಲಿ ಒಟ್ಟು ಸಾಲದ ಪ್ರಮಾಣ ಹೆಚ್ಚಿದ್ದು ಕೇವಲ ಶೇ. 78.19ರಷ್ಟು ಮಾತ್ರ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಸಕ್ತ ಸಾಲಿನ ಬಜೆಟ್ ಅಂದಾಜಿನ ಪ್ರಕಾರ ರಾಜ್ಯದ ಸಾಲ 53,000 ಕೋಟಿ ರೂ. ಕೊರೋನದಿಂದಾಗಿ ಆಗಿರುವ ಆದಾಯ ಖೋತಾ ತುಂಬಲು ಹೆಚ್ಚುವರಿ 33,000 ಕೋಟಿ ರೂ.ಸಾಲದ ಜೊತೆ, ಜಿಎಸ್‍ಟಿ ಪರಿಹಾರ ಭರಿಸಲು ಮತ್ತೆ 12,000 ಕೋಟಿ ರೂ.ಸಾಲ ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ. ಒಂದೇ ವರ್ಷದಲ್ಲಿ ಸಾಲದ ಮೊತ್ತ ದುಪ್ಪಟ್ಟು ಮಾಡಿರುವುದು ಬಿಜೆಪಿಯ ಸಾಧನೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಸಾಲದ ಹೊರೆಯ ಸುಳ್ಳು ಆರೋಪ ಮಾಡುವುದಕ್ಕಿಂತ ಮೊದಲು ರಾಜ್ಯದ ಬಿಜೆಪಿ ನಾಯಕರು ವಿತ್ತೀಯ ಹೊಣೆಗಾರಿಕೆ ಅಧಿನಿಯಮವನ್ನೊಮ್ಮೆ ಓದಿಕೊಳ್ಳಬೇಕಿತ್ತು. ಅದರ ಪ್ರಕಾರ ನಮ್ಮ ಸಾಲ ರಾಜ್ಯದ ಆಂತರಿಕ ಉತ್ಪನ್ನದ ಶೇ.25ರ ಮಿತಿಯಲ್ಲಿರಬೇಕಾಗುತ್ತದೆ. ನನ್ನ ಕೊನೆಯ ಬಜೆಟ್ ನಲ್ಲಿ ರಾಜ್ಯದ ಸಾಲ ಶೇ. 0.36ರ ಮಿತಿಯೊಳಗೆ ಇತ್ತು. ಈಗಿನ ಬಿಜೆಪಿ ಆಡಳಿತದಲ್ಲಿ ಅದು ಶೇ.33ರ ಮಿತಿ ದಾಟಲಿದೆ ಎಂದು ಅವರು ಆರೋಪಿಸಿದ್ದಾರೆ.

ರಾಜ್ಯದ ವಿತ್ತೀಯ ಕೊರತೆ ನಮ್ಮ ಆಂತರಿಕ ಉತ್ಪನ್ನದ(ಉSಆP) ಶೇಕಡಾ ಮೂರನ್ನು ಮೀರಬಾರದು ಎಂದು ವಿತ್ತೀಯ ಹೊಣೆಗಾರಿಕೆ ಅಧಿನಿಯಮ ಹೇಳಿದೆ. ಮುಖ್ಯಮಂತ್ರಿಯಾಗಿ ನಾನು ಮಂಡಿಸಿದ್ದ ಆರು ಆಯವ್ಯಯಪತ್ರಗಳಲ್ಲಿ ವಿತ್ತೀಯಕೊರತೆ ಎಂದೂ ಶೇಕಡಾ ಮೂರರ ಮಿತಿಯನ್ನು ಮೀರಿರಲಿಲ್ಲ. ನನ್ನ ಕೊನೆಯ ಬಜೆಟ್ ನಲ್ಲಿ ಈ ಮಿತಿ ಶೇಕಡಾ 2.49ರಷ್ಟಿತ್ತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದ ಬಿಜೆಪಿ ಸರಕಾರ ವಿತ್ತೀಯ ಕೊರತೆಯ ಮಿತಿಯನ್ನು ಶೇ.3 ರಿಂದ ಶೇ.5ಕ್ಕೆ ಏರಿಕೆ ಮಾಡುವ ಅಪಾಯಕಾರಿ ನಿಲುವು ತೆಗೆದುಕೊಂಡಿದೆ. ಶೇ.5ಕ್ಕೆ ಏರಿಕೆಯಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಲಿದೆ. ಹೆಚ್ಚೆಂದರೆ 3.5 ಕ್ಕೆ ಏರಿಕೆ ಮಾಡಿ, ಮುಂದಿನ ದಿನಗಳಲ್ಲಿ ಮತ್ತೆ ಇಳಿಕೆ ಮಾಡಬಹುದಿತ್ತು. ಈ ಕಿವುಡು ಸರಕಾರಕ್ಕೆ ಹೇಳುವವರು, ಕೇಳುವವರು ಯಾರೂ ಇಲ್ಲದಂತಾಗಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

2020-21ರ ಆಯವ್ಯಯದಲ್ಲಿ ನಮ್ಮ ಒಟ್ಟು ಆಂತರಿಕ ಉತ್ಪನ್ನ 18 ಲಕ್ಷ ಕೋಟಿ ರೂ.ಎಂದು ಅಂದಾಜು ಮಾಡಲಾಗಿದೆ. ಆದರೆ ಕೊರೋನ ಹಾವಳಿ ಮತ್ತು ರಾಜ್ಯ ಸರಕಾರದ ಆರ್ಥಿಕ ಎಡವಟ್ಟುಗಳ ಕಾರಣದಿಂದ ಅದು 12 ಲಕ್ಷ ಕೋಟಿ ರೂ.ಗಿಂತಲೂ ಕೆಳಗಿಳಿಯಬಹುದು. ಆಗ ನಮ್ಮ ಸಾಲದ ಸಾಮಥ್ರ್ಯ ಕೂಡಾ ಕಡಿಮೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ಸಂವಿಧಾನದ 101ನೇ ತಿದ್ದುಪಡಿ ಮೂಲಕ ಕಾರ್ಯರೂಪಕ್ಕೆ ಬಂದಿರುವ ಜಿಎಸ್ ಟಿ ಕಾಯ್ದೆಯ ಸೆಕ್ಷನ್ 18ರ ಪ್ರಕಾರ 5 ವರ್ಷಗಳ ಕಾಲ ಜಿಎಸ್ ಟಿ ಪರಿಹಾರ ನೀಡಬೇಕಾಗಿರುವುದು ಸಂವಿಧಾನಾತ್ಮಕ ಕರ್ತವ್ಯ. 2020-2021ರ ಆರ್ಥಿಕ ವರ್ಷದ ಅಂತ್ಯಕ್ಕೆ ಕೇಂದ್ರ ಸರಕಾರ ರಾಜ್ಯಕ್ಕೆ ಜಿಎಸ್ ಟಿ ಪರಿಹಾರವಾಗಿ 30,000 ಕೋಟಿ ರೂ.ನೀಡಬೇಕಾಗುತ್ತದೆ. ಈ ಪರಿಹಾರದ ನಿರಾಕರಣೆ ನಮ್ಮ ಸಾಂವಿಧಾನಿಕ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

14ನೇ ಹಣಕಾಸು ಆಯೋಗದಲ್ಲಿ ಶೇ.4.71ರಷ್ಟು ಇದ್ದ ರಾಜ್ಯದ ಪಾಲನ್ನು 15ನೇ ಹಣಕಾಸು ಆಯೋಗದಲ್ಲಿ ಶೇ.3.64ಕ್ಕೆ ಇಳಿಸಲಾಗಿದೆ. ಇದರಿಂದ ರಾಜ್ಯಕ್ಕೆ 12 ಸಾವಿರ ಕೋಟಿ ರೂ.ನಷ್ಟವಾಗುತ್ತಿದೆ. ಇದಕ್ಕೆ ಪರಿಹಾರವಾಗಿ ಆಯೋಗ ಶಿಫಾರಸು ಮಾಡಿದ್ದ 5495 ಕೋಟಿ ರೂ.ವಿಶೇಷ ಅನುದಾನವನ್ನು ಹಣಕಾಸು ಸಚಿವೆ ತಿರಸ್ಕರಿಸಿ ರಾಜ್ಯಕ್ಕೆ ದ್ರೋಹ ಬಗೆದಿದ್ದಾರೆ ಎಂದು ಸಿದ್ದರಾಮಯ್ಯ ದೂರಿದ್ದಾರೆ.

ಈಗಿನ ಆರ್ಥಿಕ ಸಂಕಷ್ಟದಿಂದ ಪಾರಾಗಬೇಕಾದರೆ ರಾಜ್ಯ ಸರಕಾರ ಬದ್ಧತಾ ವೆಚ್ಚಕ್ಕೆ ಕಡಿವಾಣ ಹಾಕಬೇಕಾಗಿದೆ. ದುಂದು ವೆಚ್ಚಗಳನ್ನು ನಿಲ್ಲಿಸಬೇಕು, ಅನಗತ್ಯ ಹುದ್ದೆಗಳನ್ನು ರದ್ದುಮಾಡಬೇಕು, ತೆರಿಗೆಯೇತರ ಆದಾಯವನ್ನು ಹೆಚ್ಚಿಸಬೇಕು. ಆರ್ಥಿಕ ಶಿಸ್ತನ್ನು ಪಾಲಿಸಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ರಾಜ್ಯ ಸರಕಾರ ಒಂದು ಲಕ್ಷ ಕೋಟಿ ರೂಪಾಯಿ ಸಾಲ ಎತ್ತಲು ಹೊರಟರೂ ಪ್ರವಾಹದಿಂದ ಬದುಕು ಕಳೆದುಕೊಂಡು ಬೀದಿಗೆ ಬಿದ್ದಿರುವ ಜನರಿಗೆ ಪರಿಹಾರ ಕೊಡಲು ರಾಜ್ಯ ಸರಕಾರದಲ್ಲಿ ದುಡ್ಡಿಲ್ಲ, ಕೊರೋನ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡಲು ಸಾಧ್ಯವಾಗಿಲ್ಲ. ಜನರ ತೆರಿಗೆಯ ದುಡ್ಡಿನ ಜೊತೆ ಸಾಲದ ದುಡ್ಡು ಕೂಡ ಯಾರ ಜೇಬಿಗೆ ಹೋಗಿದೆ ಎನ್ನುವುದನ್ನು ಮುಖ್ಯಮಂತ್ರಿ ತಿಳಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಬಿಜೆಪಿ ಆಡಳಿತದ ಹಿಂದಿನ ಅವಧಿಯಲ್ಲಿ ದೇಶದ ಅತ್ಯಂತ ಭ್ರಷ್ಟ ಸರಕಾರ ಕರ್ನಾಟಕದ್ದು ಎಂದು ಮಾಧ್ಯಮಗಳು ತುಚ್ಚೀಕರಿಸುತ್ತಿತ್ತು. ನಮ್ಮ ಆಡಳಿತದ ಕಾಲದಲ್ಲಿ ಅತ್ಯಂತ ಸಮರ್ಥವಾಗಿ ಹಣಕಾಸನ್ನು ನಿರ್ವಹಿಸಿದ ರಾಜ್ಯ ಕರ್ನಾಟಕವೆಂದು ದೇಶ ಕೊಂಡಾಡುತ್ತಿತ್ತು. ಇಂತಹ ಕರ್ನಾಟಕವನ್ನು ಭಾರತೀಯ ಜನತಾ ಪಕ್ಷದ ಸರಕಾರ ಮತ್ತೆ ಭಿಕ್ಷುಕ ರಾಜ್ಯವನ್ನಾಗಿ ಮಾಡಲು ಹೊರಟಿದೆ.
-ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News