ವಿಧಾನ ಪರಿಷತ್ ಚುನಾವಣೆ ಶಾಂತಿಯುತ ಅಂತ್ಯ: ನ.2ರ ಫಲಿತಾಂಶದತ್ತ ಎಲ್ಲರ ಚಿತ್ತ

Update: 2020-10-28 15:49 GMT

ಬೆಂಗಳೂರು, ಅ. 28: ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿಂದು ನಡೆದ ಮತದಾನ ಕೆಲ ಸಣ್ಣಪುಟ್ಟ ಗೊಂದಲಗಳನ್ನು ಹೊರತುಪಡಿಸಿದರೆ ಶಾಂತಿಯುತ ಅಂತ್ಯ ಕಂಡಿದೆ. ಘಟಾನುಘಟಿ ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆ ಸೇರಿದ್ದು, ನ.2ರ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ.

ಪರಿಷತ್ತಿನ ಬೆಂಗಳೂರು ಶಿಕ್ಷಕರ, ಈಶಾನ್ಯ ಶಿಕ್ಷಕರ, ಆಗ್ನೇಯ ಪದವೀಧರರ ಹಾಗೂ ಪಶ್ವಿಮ ಪದವೀಧರ ಕ್ಷೇತ್ರಗಳಿಗೆ ಬೆಳಗ್ಗೆ 8ಗಂಟೆಯಿಂದ ಸಂಜೆ 5ಗಂಟೆಯ ವರೆಗೆ ಮತದಾನ ನಡೆದಿದ್ದು, ಒಟ್ಟಾರೆ ಶೇ.70ಕ್ಕೂ ಅಧಿಕ ಮತದಾನವಾಗಿದೆ ಎಂದು ಆಯೋಗ ತಿಳಿಸಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿ ಮೂರು ರಾಜಕೀಯ ಪಕ್ಷಗಳು ನಾಲ್ಕು ಕ್ಷೇತ್ರಗಳಲ್ಲಿ `ಶತಾಯ-ಗತಾಯ' ಗೆಲುವು ಸಾಧಿಸುವ ಮೂಲಕ ಮೇಲ್ಮನೆಯಲ್ಲಿ ಸಂಖ್ಯಾಬಲ ಹೆಚ್ಚಿಸಿಕೊಳ್ಳಲು ಮುಂದಾಗಿದ್ದರೆ, ಪಕ್ಷೇತರ ಸದಸ್ಯರು ವಿಧಾನ ಪರಿಷತ್ ಪ್ರವೇಶದ ಕನಸಿನಲ್ಲಿದ್ದಾರೆ.

ಕೆಲ ತಾಂತ್ರಿಕ ದೋಷ, ಮತದಾರರ ಪಟ್ಟಿಯಲ್ಲಿ ಹೆಸರು ನಾಪತ್ತೆ ಸೇರಿದಂತೆ ಇನ್ನಿತರ ಸಣ್ಣಪುಟ್ಟ ವಿಚಾರಗಳಿಗೆ ಕೆಲವು ಕಡೆಗಳಲ್ಲಿ ಗೊಂದಲ ಉಂಟಾಗಿ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿರುವುದನ್ನು ಹೊರತುಪಡಿಸಿದರೆ ವಿಧಾನ ಪರಿಷತ್ ಚುನಾವಣೆ ರಾಜ್ಯದ ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ಮುಕ್ತಾಯ ಕಂಡಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್, ಅಬಕಾರಿ ಸಚಿವ ಎಚ್.ನಾಗೇಶ್, ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ಸೇರಿದಂತೆ ಸಚಿವರು, ಶಾಸಕರು, ಶಿಕ್ಷಕ ಮತ್ತು ಪದವೀಧರರು ಬೆಳಗ್ಗೆಯಿಂದಲೇ ಆಯಾ ತಾಲೂಕು ಕೇಂದ್ರಗಳಲ್ಲಿ ಸ್ಥಾಪಿಸಿದ್ದ ಮತಗಟ್ಟೆಗಳಲ್ಲಿ ಅತ್ಯಂತ ಉತ್ಸಾಹದಿಂದಲೇ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.

ಮಾರಕ ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ಚುನಾವಣಾ ಇದಾಗಿದ್ದು, ಮಾಸ್ಕ್ ಕಡ್ಡಾಯ, ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಇನ್ನಿತರ ಮುನ್ನಚ್ಚರಿಕೆ ಕೈಗೊಳ್ಳಲಾಗಿತ್ತು. ರಾಜ್ಯದಲ್ಲಿ ಒಟ್ಟು 549 ಮತಗಟ್ಟೆ ಸ್ಥಾಪಿಸಲಾಗಿತ್ತು. 20 ಇತರೆ ಮತದಾರರು, 1.42 ಲಕ್ಷಕ್ಕೂ ಅಧಿಕ ಪುರುಷರು, 91 ಸಾವಿರಕ್ಕೂ ಅಧಿಕ ಮಹಿಳೆಯರು ಸೇರಿದಂತೆ ಒಟ್ಟು 2.34 ಲಕ್ಷಕ್ಕೂ ಅಧಿಕ ಮತದಾರರಿದ್ದರು.

ಆಗ್ನೇಯ ಪದವೀಧರರ ಕ್ಷೇತ್ರ-ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ದಾವಣಗೆರೆ ಜಿಲ್ಲೆ. ಪಶ್ಚಿಮ ಪದವೀಧರರ ಕ್ಷೇತ್ರ-ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆ. ಈಶಾನ್ಯ ಶಿಕ್ಷಕರ ಕ್ಷೇತ್ರ-ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆ. ಬೆಂಗಳೂರು ಶಿಕ್ಷಕರ ಕ್ಷೇತ್ರ-ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿನ ಶಿಕ್ಷಕರು ಮತ್ತು ಪದವೀಧರರ ಹಕ್ಕು ಚಲಾಯಿಸಿದ್ದಾರೆ.

ಪುಟ್ಟಣ್ಣ, ಪ್ರವೀಣ್ ಪೀಟರ್, ಎ.ಪಿ.ರಂಗನಾಥ್, ಶಶಿಲ್ ನಮೋಶಿ, ಶರಣಪ್ಪ ಮಟ್ಟೂರು, ತಿಮ್ಮಯ್ಯ ಪುರ್ಲೆ, ಚಿದಾನಂದಗೌಡ, ರಮೇಶ್ ಬಾಬು, ಚೌಡರೆಡ್ಡಿ ಸೇರಿದಂತೆ ಒಟ್ಟು 40 ಅಭ್ಯರ್ಥಿಗಳ ಭವಿಷ್ಯವನ್ನು `ಪ್ರಜ್ಞಾವಂತ' ಮತದಾರ ಬರೆದಿದ್ದಾನೆ.

ಎಣಿಕೆ ಕೇಂದ್ರಗಳು: ಧಾರವಾಡದ ಕೃಷಿ ವಿಜ್ಞಾನ ವಿಶ್ವ ವಿದ್ಯಾಲಯದಲ್ಲಿ ಪಶ್ವಿಮ ಪದವೀಧರ ಕ್ಷೇತ್ರ, ಗುಲ್ಬರ್ಗ ವಿವಿಯ ಗಣಿತ ವಿಭಾಗದಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರ, ಆಗ್ನೇಯ ಪದವೀಧರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯವು ಬೆಂಗಳೂರಿನ ಸರಕಾರಿ ಕಲಾ ಕಾಲೇಜಿನಲ್ಲಿ ನಡೆಯಲಿದೆ. ಪ್ರತಿ ಮತಗಟ್ಟೆಯಲ್ಲಿ ಮತ ಎಣಿಕೆ ಕಾರ್ಯಕ್ಕೆ ಏಳು ಟೇಬಲ್ ವ್ಯವಸ್ಥೆ ಕಲ್ಪಿಸಲಾಗಿದೆ. ನ.2ರಂದು ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ. ಮತಯಂತ್ರಗಳನ್ನು ಇರಿಸಲಾಗಿರುವ ಸ್ಟ್ರಾಂಗ್ ರೂಂ ಮತ್ತು ಏಣಿಕೆ ಕೇಂದ್ರಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಶೇಕಡವಾರು ಮತದಾನ

ಪಶ್ಚಿಮ ಪದವೀಧರರ ಕ್ಷೇತ್ರ-ಶೇ.70.11

ಆಗ್ನೇಯ ಪದವೀಧರರ ಕ್ಷೇತ್ರ-ಶೇ.74.84

ಈಶಾನ್ಯ ಶಿಕ್ಷಕರ ಕ್ಷೇತ್ರ-ಶೇ.73.32

ಬೆಂಗಳೂರು ಶಿಕ್ಷಕರ ಕ್ಷೇತ್ರ-ಶೇ.66.02

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News