ಉಪಚುನಾವಣೆ: ಶಿರಾ, ಆರ್.ಆರ್.ನಗರ ಕ್ಷೇತ್ರಗಳಲ್ಲಿ ನ.3ರಂದು ಮತದಾನ
ಬೆಂಗಳೂರು, ನ. 2: ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ತೀವ್ರ ಪೈಪೋಟಿ ಸೃಷ್ಟಿಸಿರುವ, ಮುಂಬರುವ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ವಿಶ್ಲೇಷಿಸಲಾಗುತ್ತಿರುವ ತುಮಕೂರು ಜಿಲ್ಲೆಯ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ನ.3 ರಂದು ನಡೆಯಲಿದೆ. ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಆಯೋಗ ಸಕಲ ಸಿದ್ದತೆ ಕೈಗೊಂಡಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಜೆಡಿಎಸ್ ಶಾಸಕ ಸತ್ಯನಾರಾಯಣ ಅಕಾಲಿಕ ನಿಧನದಿಂದ ತೆರವಾಗಿರುವ ಶಿರಾ ಹಾಗೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಮುನಿರತ್ನ ಅವರಿಂದ ತೆರವಾಗಿದ್ದ ಆರ್.ಆರ್.ನಗರ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಪ್ರಮುಖ ರಾಜಕೀಯ ಪಕ್ಷಗಳ ಘಟಾನುಘಟಿ ಅಭ್ಯರ್ಥಿಗಳ ಭವಿಷ್ಯವನ್ನು ನಾಳೆ(ನ.3)ಬೆಳಗ್ಗೆ 7ರಿಂದ ಸಂಜೆ 5ಗಂಟೆಯ ವರೆಗೆ ಮತದಾರ ಬರೆಯಲಿದ್ದಾನೆ. ಕೋವಿಡ್-19 ಆತಂಕದ ನಡುವೆ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಸೂಕ್ತ ಮುನ್ನಚ್ಚರಿಕೆ ವಹಿಸಲಾಗಿದೆ.
ಶಿರಾ ಕ್ಷೇತ್ರದಲ್ಲಿ 6 ಅತಿಸೂಕ್ಷ್ಮ, 64 ಸೂಕ್ಷ್ಮ ಸಹಿತ ಒಟ್ಟು 330, ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ 11 ಅತಿಸೂಕ್ಷ್ಮ, 82 ಸೂಕ್ಷ್ಮ ಸಹಿತ ಒಟ್ಟು 678 ಸೇರಿದಂತೆ ಎರಡೂ ಕ್ಷೇತ್ರಗಳಲ್ಲಿ ಒಟ್ಟು 1,008 ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಎರಡೂ ಕ್ಷೇತ್ರದ ತಲಾ ಮೂರು ಸಶಸ್ತ್ರ ಮೀಸಲು ಪಡೆ ಸಿಬ್ಬಂದಿ, ಸಂಚಾರಿ ಸ್ವಾಡ್ ಸೇರಿ ಎಲ್ಲೆಡೆ ಬಿಗಿ ಭದ್ರತೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಚುನಾವಣಾ ಸಿಬ್ಬಂದಿ ಸೋಮವಾರ ಸಂಜೆಯೆ ಚುನಾವಣಾ ಸಾಮಗ್ರಿಗಳೊಂದಿಗೆ ಮತಗಟ್ಟೆ ತಲುಪಿದ್ದು, ಬೆಳಗ್ಗೆ 7ಗಂಟೆಯಿಂದಲೇ ಮತದಾನಕ್ಕೆ ವ್ಯವಸ್ಥೆ ಮಾಡಲಿದ್ದಾರೆ.
ಕಾಂಗ್ರೆಸ್ನ ಕುಸುಮಾ ಎಚ್., ಬಿಜೆಪಿಯ ಮುನಿರತ್ನ, ಜೆಡಿಎಸ್ನ ವಿ.ಕೃಷ್ಣಮೂರ್ತಿ ಆರ್.ಆರ್.ನಗರ ಕ್ಷೇತ್ರದಲ್ಲಿದ್ದು, ಅತ್ತ ಶಿರಾ ಕ್ಷೇತ್ರದಲ್ಲಿ ಬಿಜೆಪಿಯ ರಾಜೇಶ್ಗೌಡ, ಕಾಂಗ್ರೆಸ್ನ ಟಿ.ಬಿ.ಜಯಚಂದ್ರ ಹಾಗೂ ಜೆಡಿಎಸ್ನ ಅಮ್ಮಾಜಮ್ಮ ಸೇರಿದಂತೆ ಒಟ್ಟು 31 ಮಂದಿ ಘಟಾನುಘಟಿ ಅಭ್ಯರ್ಥಿಗಳಿದ್ದಾರೆ. ಶಿರಾದಲ್ಲಿ 2.15ಲಕ್ಷಕ್ಕೂ ಅಧಿಕ ಮತ್ತು ರಾಜರಾಜೇಶ್ವರಿ ನಗರದಲ್ಲಿ ಒಟ್ಟು 4.62 ಲಕ್ಷಕ್ಕೂ ಅಧಿಕ ಮತದಾರರಿದ್ದು, ತಮ್ಮ ಹಕ್ಕು ಚಲಾಯಿಸಲಿದ್ದಾರೆ.
ಎಡಗೈ ಮಧ್ಯದ ಬೆರಳಿಗೆ ಶಾಹಿ: ಉಪಚುನಾವಣೆ ನಡೆಯಲಿರುವ ಎರಡೂ ಕ್ಷೇತ್ರಗಳಲ್ಲಿ ಹಕ್ಕು ಚಲಾಯಿಸುವ ಮತದಾರರಿಗೆ ಎಡಗೈ ಮಧ್ಯದ ಬೆರಳಿಗೆ ಅಳಿಸಲಾಗದ ಶಾಹಿ ಹಾಕಲಾಗುವುದು ಎಂದು ಆಯೋಗ ತಿಳಿಸಿದೆ. ಮತದಾರರ ಗುರುತಿನ ಚೀಟಿ ಇಲ್ಲದ ಮತ್ತು ಮತದಾರರ ಪಟ್ಟಿಯಲ್ಲಿ ಹೆಸರಿರುವವರು ಆಧಾರ್, ಪಾನ್ಕಾರ್ಡ್, ಪಾಸ್ಪೋರ್ಟ್ ಸಹಿತ ಆಯೋಗ ಸೂಚಿಸಿರುವ ಪರ್ಯಾಯ ದಾಖಲೆಯನ್ನು ಪ್ರದರ್ಶಿಸಿ ಹಕ್ಕು ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.
ರಜೆ ಘೋಷಣೆ: ಉಪಚುನಾವಣೆ ಹಿನ್ನೆಲೆಯಲ್ಲಿ ಮೇಲ್ಕಂಡ ಎರಡೂ ಕ್ಷೇತ್ರಗಳಲ್ಲಿ ರಾಜ್ಯದ ಎಲ್ಲ ಸರಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳು ಸೇರಿದಂತೆ ಸರಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ, ಎರಡೂ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ. ಜೊತೆಗೆ ಕಲಂ 144ರ ಅನ್ವಯ ಎರಡೂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಹದಿನೈದು ದಿನಗಳಿಂದ ಸಿಎಂ ಬಿಎಸ್ವೈ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜೆಡಿಎಸ್ ವರಿಷ್ಟ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಸೇರಿದಂತೆ ಡಿಸಿಎಂಗಳು, ಸಚಿವರು, ಶಾಸಕರು ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರ ಹಗಲು-ರಾತ್ರಿಗಳ ಪರಿಮೆ ಮರೆತು ಪ್ರಚಾರ ಕೈಗೊಂಡಿದ್ದರು. ಸೋಮವಾರವೂ ಕೊನೆಯ ಕ್ಷಣದಲ್ಲಿ ಮತದಾರರ ಮನಗೆಲ್ಲಲು ಮೂರು ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸಿದರು.
ಮೂರು ರಾಜಕೀಯ ಪಕ್ಷಗಳ ನಡುವೆ ತೀವ್ರ ಜಿದ್ದಾಜಿದ್ದಿ ಸೃಷ್ಟಿಸಿರುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರದ ವಿವಿಧೆಡೆಗಳಲ್ಲಿ ಕೆಲ ಕಾರ್ಯಕರ್ತರು ಮತದಾರರಿಗೆ ಹಣ ಹಂಚಿಕೆ ಆರೋಪಗಳು ಕೇಳಿಬಂದಿದ್ದು, ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಅವರ ಬಳಿ ಇದ್ದ ಅಪಾರ ಮೊತ್ತದ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆಂದು ಹೇಳಲಾಗಿದೆ.