ಅರ್ನಬ್ ಗೋಸ್ವಾಮಿ ಬಂಧನಕ್ಕೆ ಕೇಂದ್ರ ಸಚಿವರ ಖಂಡನೆ
ಮುಂಬೈ: ಎರಡು ವರ್ಷಗಳ ಹಿಂದಿನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ಬುಧವಾರ ಬೆಳಗ್ಗೆ ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಿರುವುದಕ್ಕೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಖಂಡನೆ ವ್ಯಕ್ತಪಡಿಸಿದ್ದಾರೆ.
"ಮಹಾರಾಷ್ಟದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ. ಇದು ಮಾಧ್ಯಮವನ್ನು ನಡೆಸಿಕೊಳ್ಳುವ ರೀತಿಯಲ್ಲ. ಈ ರೀತಿಯ ನಡೆವಳಿಕೆಯು ತುರ್ತು ಪರಿಸ್ಥಿತಿಯ ದಿನಗಳನ್ನುನೆನಪಿಸುತ್ತಿದೆ'' ಎಂದು ಜಾವಡೇಕರ್ ಟ್ವೀಟ್ ಮಾಡಿದ್ದಾರೆ.
ಗೋಸ್ವಾಮಿ ಬಂಧನವನ್ನು ಖಂಡಿಸಿರುವ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್, "ಇದು ಅಧಿಕಾರದ ದುರುಪಯೋಗವಾಗಿದೆ. ಮಹಾರಾಷ್ಟ್ರದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ಇದು ಅಘೋಷಿತ ತುರ್ತು ಪರಿಸ್ಥಿತಿಯ ಸಂಕೇತವಾಗಿದೆ'' ಎಂದು ಹೇಳಿದ್ದಾರೆ.
ಅರ್ನಬ್ ಗೋಸ್ವಾಮಿ ಬಂಧನಕ್ಕೆ ಗೃಹ ಸಚಿವ ಅಮಿತ್ ಶಾ ಆಕ್ರೋಶ
ಹೊಸದಿಲ್ಲಿ: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನುವಶಕ್ಕೆ ಪಡದಿರುವ ಮಹಾರಾಷ್ಟ್ರ ಪೊಲೀಸರ ಕ್ರಮದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಹರಿಹಾಯ್ದಿದ್ದಾರೆ.
ಈ ವಿಚಾರವಾಗಿ ಬುಧವಾರ ಟ್ವೀಟ್ ಮಾಡಿರುವ ಅವರು ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಮತ್ತೊಮ್ಮೆ ಪ್ರಜಾಪ್ರಭುತ್ವವನ್ನು ಅಣಕಿಸುವ ಕೆಲಸ ಮಾಡಿವೆ. ರಿಪಬ್ಲಿಕ್ ಟಿವಿ ಹಾಗೂ ಅರ್ನಬ್ ಗೋಸ್ವಾಮಿ ವಿರುದ್ಧ ರಾಜ್ಯ ಸರಕಾರ ತನ್ನ ಅಧಿಕಾರವನ್ನುದುರುಪಯೋಗಪಡಿಸಿಕೊಂಡಿರುವುದು ವೈಯಕ್ತಿಕ ಸ್ವಾತಂತ್ರ್ಯ ಹಾಗೂ ಪ್ರಜಾತಂತ್ರದ 4ನೇ ಆಧಾರ ಸ್ತಂಭದ ಮೇಲೆ ನಡೆದಿರುವ ದಾಳಿಯಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.