×
Ad

ವಿನಯ್‌ ಕುಲಕರ್ಣಿ ಬಂಧನಕ್ಕೆ ರಾಜಕೀಯ ಬಣ್ಣ ಸರಿಯಲ್ಲ : ಡಾ. ಅಶ್ವತ್ಥನಾರಾಯಣ

Update: 2020-11-05 15:52 IST
ವಿನಯ್‌ ಕುಲಕರ್ಣಿ

ಬೆಂಗಳೂರು : ಕಾಂಗ್ರೆಸ್‌ ಮುಖಂಡ ಮತ್ತು ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿರುವುದಕ್ಕೆ ರಾಜಕೀಯ ಬಣ್ಣ ಬಳಿಯುವುದು ಸರಿಯಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟರು.

ವಿಕಾಸಸೌಧದಲ್ಲಿ ಗುರುವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು; ವಿನಯ್‌ ಕುಲಕರ್ಣಿ ಅವರ ಮೇಲೆ ಆರೋಪವಿತ್ತು. ಆ ಕೊಲೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ- ಧಾರವಾಡದಲ್ಲಿ ಸಾಕಷ್ಟು ಹೋರಾಟಗಳು ನಡೆದಿದ್ದವು. ಆ ಹೋರಾಟಗಳಿಗೆ ಮಣಿದು ಕಾಂಗ್ರೆಸ್‌ ಸರಕಾರವೇ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು. ಇದರಲ್ಲಿ ಬಿಜೆಪಿ ಸರಕಾರದ ಪಾತ್ರವೇನಿದೆ ಎಂದು ಪ್ರಶ್ನಿಸಿದರು.

ಪ್ರತಿಸಲವೂ ಯಾರ ಮೇಲೆಯಾದರೂ ಆದಾಯ ತೆರಿಗೆ, ಇ.ಡಿ ಅಥವಾ ಸಿಬಿಐ ದಾಳಿ ನಡೆದರೆ ಇಲ್ಲವೇ ಯಾರನ್ನಾದರೂ ಬಂಧಿಸಿದರೆ ಅದೆಲ್ಲಕ್ಕೂ ರಾಜಕೀಯ ದ್ವೇಷ ಎಂದು ಬಣ್ಣಕಟ್ಟಿ ಬಿಜೆಪಿ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಕಾನೂನು ತನ್ನ ಕೆಲಸವನ್ನು ತಾನೇ ಮಾಡುತ್ತಿದೆ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಎರಡೂ ಕಡೆ ಬಿಜೆಪಿ ಗೆಲ್ಲುತ್ತದೆ

ಉಪ ಚುನಾವಣೆಯಲ್ಲಿ ಬಿಜೆಪಿಯೇ ಗೆಲ್ಲುತ್ತದೆ. ರಾಜರಾಜೇಶ್ವರಿ ನಗರ ಮತ್ತು ಶಿರಾದಲ್ಲಿ ಈ ಬಾರಿ ಕಮಲವೇ ಅರಳಲಿದೆ ಎಂದ ಉಪ ಮುಖ್ಯಮಂತ್ರಿ, ಮತದಾರರು ಸರಕಾರದ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ತಮ್ಮ ತೀರ್ಪು ನೀಡಿದ್ದಾರೆ. ಆ ತೀರ್ಪು ಏನೆಂಬುದು ನವೆಂಬರ್‌ ಹತ್ತರಂದು ಗೊತ್ತಾಗಲಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News