ಪಕ್ಷದಲ್ಲಿ ಯಾವುದೇ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಕುಮಾರಸ್ವಾಮಿ

Update: 2020-11-05 15:58 GMT

ಬೆಂಗಳೂರು, ನ. 5: ಆರ್.ಆರ್.ನಗರ ಮತ್ತು ಶಿರಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆಡಿಎಸ್ ಅತ್ಯಂತ ಕಡಿಮೆ ಮೊತ್ತದ ಹಣವನ್ನು ವೆಚ್ಚ ಮಾಡಿ ಗೆಲುವಿನ ಹತ್ತಿರಕ್ಕೆ ಬಂದಿದ್ದು, ನಿಶ್ಚಿತವಾಗಿಯೂ ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗುರುವಾರ ಜೆಪಿ ನಗರದಲ್ಲಿರುವ ಅವರ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎರಡೂ ರಾಷ್ಟ್ರೀಯ ಪಕ್ಷಗಳು ನಾವು ಈಗಾಗಲೇ ಗೆಲುವು ಸಾಧಿಸಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಅಲ್ಲದೆ, ಉಪ ಚುನಾವಣೆ ಬಳಿಕ ಸಿಎಂ ಮತ್ತು ವಿಪಕ್ಷ ನಾಯಕನ ಸ್ಥಾನವೇ ಬದಲಾಗಲಿದೆ ಎಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ, ಎರಡೂ ಪಕ್ಷಗಳು ದೊಡ್ಡ ಮೊತ್ತದ ಹಣವನ್ನು ವೆಚ್ಚ ಮಾಡಿ ಚುನಾವಣೆ ನಡೆಸಿದ್ದಾರೆ.

ಜೆಡಿಎಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಡಲಿದೆ ಎಂದು ಹೇಳುತ್ತಿದ್ದಾರೆ. ಆದರೆ, ಶಿರಾ ಕ್ಷೇತ್ರದಲ್ಲಿ ಮತದಾರರ ಅಭಿಪ್ರಾಯ ಗಮನಿಸಿದರೆ ನಮ್ಮ ಗೆಲುವು ನಿಶ್ಚಿತ. ರಾಜರಾಜೇಶ್ವರಿ ನಗರದಲ್ಲಿಯೂ ಪಕ್ಷದ ಸಾಮಾನ್ಯ ಕಾರ್ಯಕರ್ತ ತೀವ್ರ ಪೈಪೋಟಿ ನೀಡಿದ್ದು, ಗೆಲುವಿನ ಸನಿಹಕ್ಕೆ ಬಂದಿದ್ದಾರೆ ಎಂದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ರಾಜಕೀಯ ಲಾಭಕ್ಕೆ ಯತ್ನ ಸರಿಯಲ್ಲ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ಮುಖಂಡರು ರಾಜಕೀಯ ಲಾಭದ ದೃಷ್ಟಿಯಿಂದ ಹೇಳಿಕೆ ನೀಡುವುದು ಸರಿಯಲ್ಲ. ಆದರೆ, ತನಿಖಾಧಿಕಾರಿಗಳು ಸತ್ಯಾಂಶ ಬೆಳಕಿಗೆ ತರಲು ಸೂಕ್ತ ತನಿಖೆ ನಡೆಸಿ ಕೊಲೆಯಾದ ವ್ಯಕ್ತಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಕುಮಾರಸ್ವಾಮಿ ಇದೇ ವೇಳೆ ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News