ದಕ್ಷಿಣ ಒಳನಾಡಿನಲ್ಲಿ ನ.8ರವರೆಗೆ ಸಾಧಾರಣ ಮಳೆ ಸಾಧ್ಯತೆ

Update: 2020-11-06 16:30 GMT

ಬೆಂಗಳೂರು, ನ.6: ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಮೇಲೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನಲ್ಲಿ ನ.8ರವರೆಗೆ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲೆ, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಚಿಕ್ಕಮಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ನ. 7 ಮತ್ತು 8ರಂದು ಧಾರಾಕಾರ ಮಳೆ ಬೀಳಲಿದೆ. ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ನ.7 ಮತ್ತು 8ರಂದು ಸಾಮಾನ್ಯವಾಗಿ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ನ.10ರವರೆಗೆ ಹಾಗೂ ನ.9 ಮತ್ತು 10 ರಂದು ರಾಜ್ಯದ ಎಲ್ಲ ಭಾಗಗಳಲ್ಲೂ ಒಣ ಹವೆ ಮುಂದುವರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನ.6ರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲ ಕಡೆಗಳಲ್ಲಿ ಹಿಂಗಾರು ಸುರಿದಿದೆ. ಚಾಮರಾಜನಗರ ಜಿಲ್ಲೆಯ ಬಂಡಿಪುರ 7 ಸೆ.ಮೀ, ಚಾಮರಾಜನಗರ 3, ಮೈಸೂರು ಜಿಲ್ಲೆಯ ಎಚ್‍ಡಿ ಕೋಟೆಯಲ್ಲಿ 2 ಸೆಂ.ಮೀ ಮಳೆಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News