ಮುಂಬೈ ಕನ್ನಡ ಆಕಾಶವಾಣಿ ಕಾರ್ಯಕ್ರಮ ಪುನಾರಂಭಿಸಲು ಸಚಿವ ಸಿ.ಟಿ. ರವಿ ಮನವಿ

Update: 2020-11-07 12:43 GMT

ಬೆಂಗಳೂರು, ನ. 7: ಕಾರಣಾಂತರಗಳಿಂದ ಸ್ಥಗಿತಗೊಂಡಿರುವ ಮುಂಬೈನ ಆಕಾಶವಾಣಿಯಲ್ಲಿ ಪ್ರಸಾರವಾಗುತ್ತಿದ್ದ ಕನ್ನಡ ಕಾರ್ಯಕ್ರಮಗಳನ್ನು ತಕ್ಷಣವೇ ಪುನರಾರಂಭಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರು ಮನವಿ ಮಾಡಿದ್ದಾರೆ.

ಶನಿವಾರ ಈ ಸಂಬಂಧ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಹಾಗೂ ಪ್ರಸಾರ ಭಾರತಿ ಅಧ್ಯಕ್ಷರಾದ ಡಾ.ಎ.ಸೂರ್ಯ ಪ್ರಕಾಶ್ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿರುವ ಸಚಿವ ಸಿ.ಟಿ.ರವಿ ಅವರು, ಕನ್ನಡಿಗರ ಒತ್ತಾಸೆಯಂತೆ ಮುಂಬೈನ ಆಕಾಶವಾಣಿಯಲ್ಲಿ ಕಾರ್ಯಕ್ರಮಗಳನ್ನು ಮರುಪ್ರಸಾರ ಮಾಡಬೇಕೆಂದು ಇಂದಿಲ್ಲಿ ಆಗ್ರಹಿಸಿದ್ದಾರೆ.

ಏಳು ದಶಕಗಳಿಂದ ಮುಂಬೈ ಆಕಾಶವಾಣಿಯಲ್ಲಿ ಕನ್ನಡ ಕಾರ್ಯಕ್ರಮಗಳು ಪ್ರಸಾರವಾಗುತ್ತಿದ್ದು ಸರಿಸುಮಾರು 25 ಲಕ್ಷಕ್ಕೂ ಹೆಚ್ಚು ಮಂದಿ ಕಾರ್ಯಕ್ರಮ ಆಲಿಸುತ್ತಿದ್ದರು. ಏಕಾಏಕಿ ಕಾರ್ಯಕ್ರಮವನ್ನು ರದ್ದುಪಡಿಸಿರುವುದರಿಂದ ಹಲವರಿಗೆ ಬೇಸರ ತಂದಿದೆ ಎಂದು ಸಚಿವರ ಗಮನಕ್ಕೆ ತಂದಿದ್ದಾರೆ. ದೇಶದ ಪ್ರತಿಯೊಂದು ಭಾಗದಲ್ಲಿ ಸ್ಥಳೀಯ ಜನತೆ ತಮ್ಮ ಭಾಷೆಯಲ್ಲಿ ಆಲಿಸಲು ಸಂವಿಧಾನವೇ ಅವಕಾಶ ಮಾಡಿಕೊಟ್ಟಿದ್ದು, ಇದರಿಂದ ರಾಷ್ಟ್ರದ ಏಕಾಗ್ರತೆಗೆ ಅನುಕೂಲವಾಗಲಿದೆ ಎಂದು ಹೇಳಿದೆ.

ಏಕಾಏಕಿ ಕಾರ್ಯಕ್ರಮ ಸ್ಥಗಿತವಾಗಿರುವುದರಿಂದ ಕನ್ನಡದ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ ಮತ್ತಿತರರು ನನ್ನ ಗಮನಕ್ಕೆ ತಂದಿದ್ದಾರೆ. ಆಕಾಶವಾಣಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿರುವುದಕ್ಕೆ ಆಕ್ಷೇಪಿಸಿ ಸರಕಾರ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಸ್ಥಗಿತವಾಗಿರುವ ಕಾರ್ಯಕ್ರಮವನ್ನು ಪುನಾರಾರಂಭಿಸಿ ಕನ್ನಡಿಗರ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸಬೇಕೆಂದು ಮನವಿ ಮಾಡಿದ್ದಾರೆ.

ಶೀಘ್ರದಲ್ಲೇ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮತ್ತು ಪ್ರಸಾರ ಭಾರತಿ ಅಧ್ಯಕ್ಷ ಡಾ.ಎ.ಸೂರ್ಯಪ್ರಕಾಶ್ ಅವರನ್ನು ಭೇಟಿಯಾಗಿ ವಸ್ತುಸ್ಥಿತಿ ಮನವರಿಕೆ ಮಾಡಿ ಸ್ಥಗಿತಗೊಂಡ ಕಾರ್ಯಕ್ರಮವನ್ನು ಆರಂಭಿಸಲು ಪ್ರಯತ್ನ ಮಾಡುವ ಆಶ್ವಾಸನೆ ನೀಡಿದ್ದಾರೆ. ಹಲವಾರು ದಶಕಗಳಿಂದ ಮುಂಬೈನ ಆಕಾಶವಾಣಿಯಲ್ಲಿ ಪ್ರತಿದಿನ ಕನ್ನಡದ ಕಾರ್ಯಕ್ರಮಗಳು ಪ್ರಸಾರ ಆಗುತ್ತಿದ್ದವು. ಅಲ್ಲದೆ ಕೆಲವು ದಿನಗಳ ಹಿಂದೆ ಏಕಾಏಕಿ ಇದನ್ನು ಸ್ಥಗಿತಗೊಳಿಸಿತ್ತು. ಇದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿತ್ತು. ಇದೀಗ ಪತ್ರ ಬರೆದು ಕನ್ನಡಿಗರ ಭಾವನೆಯನ್ನು ಕೇಂದ್ರ ಸಚಿವರ ಗಮನಕ್ಕೆ ತಂದಿರುವ ಹಿನ್ನೆಲೆಯಲ್ಲಿ ಮತ್ತೆ ಕಾರ್ಯಕ್ರಮ ಪುನಾರಾರಂಭವಾಗುವ ಮುನ್ಸೂಚನೆ ಸಿಕ್ಕಿದೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News