ಚಿಕ್ಕಮಗಳೂರಿನಲ್ಲಿ ಡಿಸೆಂಬರ್ ನಲ್ಲಿ ಮೆಡಿಕಲ್ ಕಾಲೇಜಿಗೆ ಸಿಎಂ ಶಿಲಾನ್ಯಾಸ: ಸಚಿವ ಡಾ.ಸುಧಾಕರ್

Update: 2020-11-07 15:49 GMT

ಚಿಕ್ಕಮಗಳೂರು, ನ.7: ಜಿಲ್ಲೆಗೆ ಮಂಜೂರಾಗಿರುವ ಮೆಡಿಕಲ್ ಕಾಲೇಜು ಮುಂದಿನ ಶೈಕ್ಷಣಿಕ ವರ್ಷದಿಂದಲೇ ಕಾರ್ಯಾರಂಭ ಮಾಡಲಿದ್ದು, ಕಾಲೇಜು ಆರಂಭಕ್ಕೆ ಅಗತ್ಯವಿರುವ ತಾತ್ಕಾಲಿಕ ಕಟ್ಟಡ, ಭೋದಕ, ಭೋದಕೇತರ ಸಿಬ್ಬಂದಿ ನೇಮಕಕ್ಕೆ ಈಗಾಗಲೇ ಕ್ರಮವಹಿಸಲಾಗಿದೆ. ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿಗೆ ಟೆಂಡರ್ ಆಗಿದ್ದು, ಕಾಮಗಾರಿಗೆ ಸಿಎಂ ಯಡಿಯೂರಪ್ಪ ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಶನಿವಾರ ನಗರಕ್ಕೆ ಭೇಟಿ ನೀಡಿದ್ದ ವೇಳೆ ನಗರದ ಹೊರವಲಯದಲ್ಲಿ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾಗಿರುವ ಜಾಗವನ್ನು ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಹೊರವಲಯದಲ್ಲಿ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾಗಿರುವ ಜಾಗದಲ್ಲಿ ವಿಶೇಷ ಶೈಲಿಯ ಕಾಲೇಜು ಕಟ್ಟಡ ನಿರ್ಮಾಣಕ್ಕೆ ನೀಲನಕ್ಷೆ ಸಿದ್ಧಗೊಂಡಿದ್ದು, ಇದರಲ್ಲಿ ಕೆಲ ಬದಲಾವಣೆಗಳನ್ನು ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕಟ್ಟಡ ಕಾಮಗಾರಿಯ ಟೆಂಡರ್ ಆಗಿದ್ದು, ಡಿಸೆಂಬರ್ ನಲ್ಲಿ ಸಿಎಂ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಮುಂದಿನ ಎರಡೂವರೆ ವರ್ಷಗಳಲ್ಲಿ ಭವ್ಯವಾದ ಮೆಡಿಕಲ್ ಕಾಲೇಜು ಕಟ್ಟಡ ನಗರ ವ್ಯಾಪ್ತಿಯಲ್ಲಿ ತಲೆ ಎತ್ತಲಿದೆ ಎಂದರು.

ಮುಂದಿನ ಶೈಕ್ಷಣಿಕ ವರ್ಷದಿಂದಲೇ ನಗರದಲ್ಲಿ ಮೆಡಿಕಲ್ ಕಾಲೇಜು ಕಾರ್ಯಾರಂಭ ಸೇರಿದಂತೆ ಭೋದಕ, ಭೋದಕೇತರ ಸಿಬ್ಬಂದಿ ನೇಮಕಕ್ಕೆ ಎಂಸಿಐ ಅನುಮತಿ ನೀಡಿದ್ದು, ಸಿಬ್ಬಂದಿ ನೇಮಕ ಹಾಗೂ ಕಾಲೇಜು ಕಟ್ಟಡ ಪೂರ್ಣಗೊಳ್ಳುವವರೆಗೆ ತಾತ್ಕಾಲಿಕ ಕಟ್ಟಡದಲ್ಲಿ ಮೆಡಿಕಲ್ ಕಾಲೇಜು ಕಾರ್ಯಾರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. 2021ರ ಜೂನ್ನಿಂದಲೇ ಮೊದಲ ವರ್ಷದ ಎಂಬಿಬಿಎಸ್ ಶಿಕ್ಷಣ ಆರಂಭಗೊಳ್ಳಲಿದೆ ಎಂದರು.

ಜಿಲ್ಲೆಯಲ್ಲಿನ ಕೋವಿಡ್-19 ನಿರ್ವಹಣೆ ಬಗ್ಗೆ ಇಲಾಖಾಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ಪಡೆದಿದ್ದು, ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ಅತ್ಯುತ್ತಮವಾಗಿದೆ. ಆರೋಗ್ಯ ಇಲಾಖೆ, ಜಿಲ್ಲಾಡಳಿತ ಹಾಗೂ ಕೋವಿಡ್ ವಾರಿಯರ್ಸ್ ಗಳ ಶ್ರಮದಿಂದಾಗಿ ಜಿಲ್ಲೆಯಲ್ಲಿ ಇತ್ತೀಚೆಗೆ ಸೋಂಕಿತರ ಸಂಖ್ಯೆ ಹಾಗೂ ಸೋಂಕಿತರ ಮರಣ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಮುಖವಾಗಿದೆ. ರಾಜ್ಯ ಹಾಗೂ ದೇಶದಲ್ಲಿರುವ ಕೋವಿಡ್ ಸೋಂಕಿತರ ಸಂಖ್ಯೆ ಹಾಗೂ ಮರಣ ಪ್ರಮಾಣ ಜಿಲ್ಲೆಯಲ್ಲಿ 1.08 ರಷ್ಟಿದೆ. ಕೋವಿಡ್ ಪರೀಕ್ಷೆಗೆ ಸರಕಾರ ನಿಗದಿ ಮಾಡಿರುವ ಸಂಖ್ಯೆಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿದಿನ ಕೋವಿಡ್-19 ಪರೀಕ್ಷೆಗಳು ಜಿಲ್ಲೆಯಲ್ಲಿ ನಡೆಯುತ್ತಿದೆ. ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ತಲಾ 50 ಹಾಸಿಗೆಗಳಿಗೆ ಆಕ್ಸಿಜನ್ ಸೌಲಭ್ಯ ಒದಗಿಸಲಾಗಿದೆ ಎಂದು ಸಚಿವ ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಕೋವಿಡ್-19 ಸಂಕಷ್ಟದ ಮಧ್ಯೆಯೂ ಆರೋಗ್ಯ ಇಲಾಖೆ ವಿವಿಧ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಹಿಂದೆಬಿದ್ದಿಲ್ಲ. ಕೋವಿಡ್ ಮಧ್ಯೆ ಈ ಕಾರ್ಯಕ್ರಮ ಅಡೆತಡೆ ಇಲ್ಲದೇ ನಿಗದಿತ ಗುರಿ ಮುಟ್ಟಿದೆ ಎಂದ ಅವರು, ಮುಂದಿನ ದಿನಗಳಲ್ಲಿ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಲೂಕು ಆರೋಗ್ಯ ಕೇಂದ್ರಗಳ ವೈದ್ಯಕೀಯ ಸೇವೆಗಳ ಬಗ್ಗೆ ಪರಿಶೀಲಿಸಲು ಆರೋಗ್ಯ ಇಲಾಖೆಯ ಜಿಲ್ಲಾಧಿಕಾರಿಗಳು ಮುನ್ಸೂಚನೆ ಇಲ್ಲದೇ ಗ್ರಾಮೀಣ ಆಸ್ಪತ್ರೆಗಳಿಗೆ ಭೇಟಿ ನೀಡಿ ಲೋಪಗಳನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ 108 ಆಂಬುಲೆನ್ಸ್ ಸೇವೆಯನ್ನು ಸಮರ್ಪಕವಾಗಿ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕ್ಕೆ ಸೂಚನೆ ನೀಡಲಾಗಿದ್ದು, ವೈದ್ಯರ ಕೊರತೆ ನೀಗಿಸಲು ಈಗಾಗಲೇ ಸರಕಾರ ಕ್ರಮವಹಿಸಿದೆ ಎಂದರು.

ಈ ವೇಳೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಸಿಇಒ ಎಸ್.ಪೂವಿತಾ, ಎಸ್ಪಿ ಅಕ್ಷಯ್ ಮಚ್ಚೀಂದ್ರ, ವಿಪ ಸದಸ್ಯ ಪ್ರಾಣೇಶ್, ನಗರಸಭೆ ಮಾಜಿ ಅಧ್ಯಕ್ಷ ತಮ್ಮಯ್ಯ, ಬಿಜೆಪಿ ಮುಖಂಡ ವರಸಿದ್ದಿ ವೇಣುಗೋಪಾಲ್, ಶಾಸಕ ಬೆಳ್ಳಿ ಪ್ರಕಾಶ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುತ್ತಿದ್ದು, 200 ಹಾಸಿಗೆಗಳ ತಾಯಿ ಮಗು ಆಸ್ಪತ್ರೆ ಸೇರಿದಂತೆ ಜಿಲ್ಲಾಸ್ಪತ್ರೆಯನ್ನು 650 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ. ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಆರಂಭಿಸಲಾಗುತ್ತಿರುವುದರಿಂದ ಎಂಸಿಐ ನಿಯಮಗಳನ್ವಯ ಜಿಲ್ಲೆಯಲ್ಲಿ 3 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ 1 ಗ್ರಾಮೀಣ ಭಾಗದ ಆಸ್ಪತ್ರೆ ಮೇಲ್ದರ್ಜೆಗೇರಲಿವೆ.
- ಡಾ.ಕೆ.ಸುಧಾಕರ್, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ

ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ 12 ಲಕ್ಷ ಬಿಲ್ ವಸೂಲಿ ಸಂಬಂಧ ಪ್ರತಿಕ್ರಿಯಿಸಿದ ಸಚಿವ ಸುಧಾಕರ್, ಆಶ್ರಯ ಆಸ್ಪತ್ರೆಯಲ್ಲಿ ಹೆಚ್ಚು ಬಿಲ್ ವಸೂಲಿ ಸಂಬಂಧ ವಸ್ತು ಸ್ಥಿತಿಗನುಗುಣವಾಗಿ ಪರಿಶೀಲಿಸಲಾಗಿದ್ದು, ಸರಕಾರಿ ಮಾರ್ಗಸೂಚಿ ಉಲ್ಲಂಘಿಸಿರುವುದು ಕಂಡು ಬಂದಿಲ್ಲ. ಆರೋಪದಲ್ಲಿ ಸತ್ಯಾಂಶ ಇಲ್ಲ ಎಂಬ ಕಾರಣಕ್ಕೆ ಆಸ್ಪತ್ರೆ ವಿರುದ್ಧ ಯಾವುದೇ ಕ್ರಮವಹಿಸಿಲ್ಲ.
- - ಡಾ.ಕೆ.ಸುಧಾಕರ್, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News