ಉಪಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು: ಯಡಿಯೂರಪ್ಪ ವಿಶ್ವಾಸ

Update: 2020-11-08 04:47 GMT

ಶಿವಮೊಗ್ಗ, ನ.8: ಶಿರಾ ಮತ್ತು ಆರ್.ಆರ್. ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಭಾರೀ ಅಂತರದಿಂದ ಜಯ ಗಳಿಸುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಇಂದು ನಗರದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಶಿರಾ ಹಾಗೂ ಆರ್.ಆರ್.ನಗರ ಎರಡೂ ಕ್ಷೇತ್ರದಲ್ಲಿ ನಾವು ದೊಡ್ಡ ಅಂತರದಲ್ಲಿ ಗೆಲುವು ಸಾಧಿಸುತ್ತೇವೆ. ಶಿರಾದಲ್ಲಿ ಬಿಜೆಪಿಗೆ ಠೇವಣಿ ಕೂಡ ಸಿಗದ ಕ್ಷೇತ್ರ. ಆದರೆ ಈ ಬಾರಿ ಇಪ್ಪತ್ತೈದು ಸಾವಿರಕ್ಕೂ ಹೆಚ್ಚು ಅಂತರದಲ್ಲಿ ಗೆಲ್ಲುತ್ತೇವೆ ಹಾಗೂ ಆರ್.ಆರ್. ನಗರದಲ್ಲಿ ಮುನಿರತ್ನ ನಲವತ್ತು ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಗೆಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ನ ಟೀಕೆಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ, ಜನರು ಅಭಿವೃದ್ಧಿ ನೋಡಿ ಮತ ಹಾಕುತ್ತಾರೆ ಎಂದ ಯಡಿಯೂರಪ್ಪ, ಬಿಹಾರದಲ್ಲೂ ಸಹ ಈ ಬಾರಿ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿಯುತ್ತದೆ. ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದರು.

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಯನ್ನು ಶೀಘ್ರದಲ್ಲೆ ಬಗೆಹರಿಸಲಾಗುವುದು. ಈಗಾಗಲೆ ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಮತ್ತು ಮಲೆನಾಡು ಭಾಗದ ಶಾಸಕರೊಂದಿಗೆ ಮಾತನಾಡಿದ್ದೇನೆ. ಅಧಿಕಾರಿಗಳಿಗೂ ಸೂಚನೆ ಕೊಟ್ಟಿದ್ದೇನೆ. ಶೀಘ್ರದಲ್ಲೇ ಇದು ಕಾರ್ಯರೂಪಕ್ಕೆ ಬರುತ್ತದೆ ಎಂದು ಮುಖ್ಯಮಂತ್ರಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News