ಮಹಿಳೆಯನ್ನು ಕೊಲೆಗೈದು ಆತ್ಮಹತ್ಯೆ ಯತ್ನಿಸಿದ ಯುವಕ

Update: 2020-11-15 14:07 GMT

ಬೆಂಗಳೂರು, ನ. 15: ವ್ಯಕ್ತಿಯೊಬ್ಬ ತನ್ನ ಪತ್ನಿಯ ಅಣ್ಣನ ಪತ್ನಿಯನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಮಮೂರ್ತಿ ನಗರದ ಟಿನ್‍ಫ್ಯಾಕ್ಟರಿಯ ಬಳಿ ನಡೆದಿದೆ ಎಂದು ವರದಿಯಾಗಿದೆ.

ಟಿನ್‍ಫ್ಯಾಕ್ಟರಿಯ ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿದ್ದ ಲಾವಣ್ಯ(37) ಎಂಬಾಕೆಯನ್ನು ವಿಜಯ್ ಕುಮಾರ್ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.

ಮೃತ ಲಾವಣ್ಯ ಪತಿಯ ತಂಗಿಯನ್ನು ವಿಜಯಕುಮಾರ್ ಮದುವೆಯಾಗಿದ್ದ. ಬಳಿಕ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಈ ವಿಚಾರವಾಗಿ ರವಿವಾರ  ಆರೋಪಿ ವಿಜಯಕುಮಾರ್ ನನ್ನು ಮಾತುಕತೆಗೆ ಕರೆಯಲಾಗಿತ್ತು. ಈ ವೇಳೆ ಮಾತಿನ ಚಕಮಕಿಯಾಗಿ ಗಲಾಟೆ ನಡೆದಿದೆ ಎನ್ನಲಾಗಿದೆ.

ಗಲಾಟೆಯ ವೇಳೆ ಸಿಟ್ಟಿಗೆದ್ದ ವಿಜಯಕುಮಾರ್, ಲಾವಣ್ಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ಲಾವಣ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ವಿಚಾರ ಗೊತ್ತಾಗುತ್ತಿದ್ದಂತೆಯೇ ಆರೋಪಿಯೂ ಅದೇ ಮಾರಕಾಸ್ತ್ರಗಳಿಂದ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಆರೋಪಿ ವಿಜಯ್ ಕುಮಾರ್ ನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. 

ಘಟನೆ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News