ನೂತನ ಜಿಲ್ಲಾಸ್ಪತ್ರೆ ಕಟ್ಟಡ ಪೂರ್ಣಗೊಳ್ಳುವವರೆಗೆ ಜಿಲ್ಲಾಸ್ಪತ್ರೆಯನ್ನು ಬ್ರಹ್ಮಾವರಕ್ಕೆ ಸ್ಥಳಾಂತರಿಸಲು ಚರ್ಚೆ
ಉಡುಪಿ, ನ.18: ದಶಕಗಳ ಹೋರಾಟದ ಬಳಿಕ ಅಜ್ಜರಕಾಡಿನಲ್ಲಿರುವ ಉಡುಪಿ ಜಿಲ್ಲಾಸ್ಪತ್ರೆಯನ್ನು 115 ಕೋಟಿ ರೂ.ವೆಚ್ಚದಲ್ಲಿ 250 ಹಾಸಿಗೆ ಗಳ ಸಾಮರ್ಥ್ಯದೊಂದಿಗೆ ಮೇಲ್ದರ್ಜೆಗೇರಿಸಲು ಸರಕಾರದಿಂದ ಹಸಿರುನಿಶಾನೆ ದೊರಕಿದ್ದು, ಶೀಘ್ರವೇ ಕಾಮಗಾರಿ ಆರಂಭಗೊಳ್ಳಲಿದೆ. ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡ ಪೂಣಗೊಳ್ಳುವವರೆಗೆ, ಈಗಿರುವ ಜಿಲ್ಲಾಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಬ್ರಹ್ಮಾವರಕ್ಕೆ ಸ್ಥಳಾಂತರಿಸುವ ಕುರಿತಂತೆಬುಧವಾರ ಮಣಿಪಾಲದ ಜಿಪಂ ಸಭಾಂಗಣದಲ್ಲಿ ಅಧ್ಯಕ್ಷ ದಿನಕರಬಾಬು ಅಧ್ಯಕ್ಷತೆಯಲ್ಲಿ ನಡೆದ ಜಿಪಂನ 22ನೇ ಸಾಮಾನ್ಯ ಸಬೆಯಲ್ಲಿ ಚರ್ಚಿಸಲಾಯಿತು.
ನೂತನ ಜಿಲ್ಲಾಸ್ಪತ್ರೆ ಕಟ್ಟಡ ಕಾಮಗಾರಿಯು 2021ರ ಪೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ಆರಂಭಗೊಳ್ಳಲಿದ್ದು, ನೂತನ ಕಟ್ಟಡ ಕಾಮ ಗಾರಿಯ ಸಂದಭರ್ದಲ್ಲಿ ರೋಗಿಗಳನ್ನು ಹಾಗೂ ಎಲ್ಲಾ ಸೌಲಭ್ಯ ಮತ್ತು ಉಪಕರಣಗಳನ್ನು ಸ್ಥಳಾಂತರಿಸುವುದು ಅಗತ್ಯವಿದ್ದು, ಅದಕ್ಕಾಗಿ ಹೊಸ ಕಟ್ಟಡ ಪೂರ್ಣಗೊಳ್ಳುವರೆಗೆ ತಾತ್ಕಾಲಿಕವಾಗಿ ಬ್ರಹ್ಮಾವರಕ್ಕೆ ಸ್ಥಳಾಂತರಿಸುವ ಅಗತ್ಯವಿದೆ ಎಂದು ಶಾಸಕ ರಘುಪತಿ ಭಟ್ ವಿಷಯ ಪ್ರಸ್ತಾಪಿಸಿ ತಿಳಿಸಿದರು.
ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ಸದಸ್ಯರು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಕೆಲವೊಂದನ್ನು ಉಡುಪಿಯಲ್ಲೇ ಉಳಿಸಿ ಕೊಂಡು ಇನ್ನುಳಿದವುಗಳನ್ನು ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತ ರಿಸುವ ಕುರಿತಂತೆ ಅಭಿಪ್ರಾಯಗಳು ಕೇಳಿಬಂದವು. ಈ ಕುರಿತು ಸಮಗ್ರವಾಗಿ ಪರಿಶೀಲಿಸಿ, ಬ್ರಹ್ಮಾವರದಲ್ಲಿ ಸ್ಥಳ ಲಭ್ಯತೆಯನ್ನು ಪರಿಶೀಲನೆಗೊಳಪಡಿಸಿ ಅಂತಿಮ ನಿರ್ಧಾರ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.
ಅಕ್ಷರ ದಾಸೋಹದಲ್ಲಿ ಅವ್ಯವಹಾರ: ಲಾಕ್ಡೌನ್ ಅವಧಿಯಲ್ಲಿ ಬೈಂದೂರು ವ್ಯಾಪ್ತಿಯಲ್ಲಿ ಅಕ್ಷರ ದಾಸೋಹ ಯೋಜನೆಯಡಿ ಅಕ್ಕಿ ಮತ್ತು ಬೇಳೆಯನ್ನು ವಿತರಿಸುವಲ್ಲಿ ಅವ್ಯವಹಾರ ನಡೆದಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆನೀಡಿರುವ ದಾಖಲೆಗಳು ಸಹ ಸಮರ್ಪಕವಾಗಿಲ್ಲ.ಶಿಕ್ಷಕರ ನಿಯೋಜನೆ ಯನ್ನು ನಿಯಮ ಮೀರಿ ಮಾಡಲಾಗಿದೆ. ಈ ಎರಡೂ ಪ್ರಕರಣಗಳ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಸದಸ್ಯರಾದ ಶಂಕರ್ ಪೂಜಾರಿ ಮತ್ತು ಬಾಬು ಶೆಟ್ಟಿ ಒತ್ತಾಯಿಸಿದರು.
ಈ ಬಗ್ಗೆ 10 ದಿನದಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಸಿಇಓ ಡಾ. ನವೀನ್ ಭಟ್ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ಜಿಲ್ಲೆಯ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಹೆಚ್ಚಿನ ದರದಲ್ಲಿ ಬಾಡಿಗೆ ವಸೂಲಿ ಮಾಡುತಿದ್ದು, ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಸದಸ್ಯ ಸುಧಾಕರ ಶೆಟ್ಟಿ ಮೈರ್ಮಾಡಿ ಅಧ್ಯಕ್ಷರನ್ನು ಕೋರಿದರು. ಸಂಬಂಧಿತ ಸಂಸ್ಥೆಯ ಅಧಿಕಾರಿ ಗಳು, ಕೃಷಿ ಇಲಾಖೆ ಅಧಿಕಾರಿಗಳು ಮತ್ತು ರೈತರೊಂದಿಗೆ ಸಭೆ ನಡೆಸಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಇಓ ಡಾ. ನವೀನ್ ಭಟ್ ತಿಳಿಸಿದರು.
ನೆರೆಯಿಂದ ಹಾನಿಯಾದವರಿಗೆ 10,000 ರೂ ಪರಿಹಾರ ನೀಡಿದ್ದು ಬಿಟ್ಟರೆ ಹೆಚ್ಚಿನ ಯಾವುದೇ ಪರಿಹಾರ ವಿತರಣೆಯಾಗಿಲ್ಲ ಎಂದು ಸದಸ್ಯೆ ಚಂದ್ರಿಕಾ ಕೇಲ್ಕರ್ ಸಭೆಯ ಗಮನ ಸೆಳೆದರು. ನೆರೆ ಹಾನಿ ಕುರಿತು ಪರಿಹಾರಕ್ಕೆ ಅರ್ಜಿ ಸಲ್ಲಿಸದೇ ಬಾಕಿ ಇರುವವರು ನ.30ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಸಭೆಯಲ್ಲಿ ತಹಶೀಲ್ದಾರರು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ದಶಕದಿಂದ ನಡೆದಿರುವ ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿ ಎಂದು ಪೂರ್ಣಗೊಳ್ಳುತ್ತದೆ ಎಂಬುದರ ಬಗ್ಗೆ ಜಿಲ್ಲೆಯ ಜನತೆಗೆ ಖಚಿತವಾದ ಮಾಹಿತಿಯನ್ನು ನೀಡಿ ಎಂದು ಗೀತಾಂಜಲಿ ಸುವರ್ಣ, ಶಶಿಕಾಂತ ಪಡುಬಿದ್ರೆ, ಬಾಬು ಶೆಟ್ಟಿ, ಜನಾರ್ದನ ತೋನ್ಸೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದರು. ಪಡುಬಿದ್ರೆ ಭಾಗದ ಕಾಮಗಾರಿ 2021ರ ಮಾರ್ಚ್ ಮೊದಲ ವಾರದಲ್ಲಿ ಪೂರ್ಣ ಗೊಳ್ಳಲಿದೆ. ಅದೇ ರೀತಿ ಮಾರ್ಚ್ ಅಂತ್ಯದೊಳಗೆ ಕುಂದಾಪುರ ಭಾಗದ ಕಾಮಗಾರಿಯನ್ನು ಪೂರ್ಣಗೊಳಿಸ ಲಾಗುವುದು. ಅಲ್ಲಲ್ಲಿ ಉಳಿದಿರುವ ಸರ್ವಿಸ್ ರಸ್ತೆ ಕಾಮಗಾರಿಯನ್ನು ಸಹ ಇದೇ ವೇಳೆ ಮುಕ್ತಾಯಗೊಳ್ಳಲಿದೆ ಎಂದು ಉಪಸ್ಥಿತರಿದ್ದ ಎನ್ಎಚ್ನ ಅಧಿಕಾರಿ ತಿಳಿಸಿದರು.
ಇದೇ ವೇಳೆ ಕರಾವಳಿ ಜಂಕ್ಷನ್ ಬಳಿ ಇರುವ ಮೇಲ್ಸೆತುವೆಯುದ್ದಕ್ಕೂ ದಾರಿದೀಪವಿಲ್ಲದೇ ಕತ್ತಲೆ ಇದ್ದು, ಕೂಡಲೇ ಇಲ್ಲಿ ದಾರಿದೀಪದ ವ್ಯವಸ್ಥೆ ಮಾಡುವಂತೆ ಶಾಸಕ ರಘುಪತಿ ಭಟ್ ಸೂಚಿಸಿದರು.
ಕೃಷಿಇಲಾಖೆಯಿಂದ ರೈತರಿಗೆ ಸಿಗುವ ಟಾರ್ಪಲ್ ಕಳಪೆ ಗುಣಮಟ್ಟದ್ದಾಗಿದ್ದು, ಈ ಕುರಿತಂತೆ ರೈತರಿಗೆ ಗುಣಮಟ್ಟದ ಟಾರ್ಪಲ್ ಸಿಗುವಂತಾಗ ಬೇಕು ಎಂದು ಸದಸ್ಯ ಉದಯ ಕೋಟ್ಯಾನ್ ಹೇಳಿದರು. ಈ ಕುರಿತು ಸರಕಾರಕ್ಕೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗೆ ಅಧ್ಯಕ್ಷರು ತಿಳಿಸಿದರು.
ಎಂಡೋಸಲ್ಫಾನ್ ಬಾಧಿತರಿಗೆ ಸಿಗುವ ಪಿಂಚಣಿ ಹಣ, ವಿಧವಾ ವೇತನ, ವೃದ್ಧಾಪ್ಯ ವೇತನದ ಪಾವತಿ ವಿಳಂಬವಾಗುತ್ತಿದ್ದು, ಇದನ್ನೇ ನಂಬಿರುವ ಫಲಾನುಭವಿಗಳಿಗೆ ಅದು ಸಮಯಕ್ಕೆ ಸರಿಯಾಗಿ ದೊರಕುವಂತೆ ಮಾಡಲು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಧ್ಯಕ್ಷರು ತಿಳಿಸಿದರು.
2007-08ನೇ ಸಾಲಿನಲ್ಲಿ 30 ಲಕ್ಷ ರೂ. ಅನುದಾನದಲ್ಲಿ ಪ್ರಾರಂಭಗೊಂಡ ಕೆಮ್ಮಣ್ಣು ಸರಕಾರಿ ಪಿಯು ಕಾಲೇಜು ಕಟ್ಟಡದ ಕಾಮಗಾರಿ ಇದುವರೆಗೆ ಪೂರ್ಣಗೊಂಡಿಲ್ಲ ಎಂದು ಸದಸ್ಯ ಜನಾರ್ಧನ ತೋನ್ಸೆ ಆಕ್ಷೇಪ ವ್ಯಕ್ತ ಪಡಿಸಿದರು. ಕಟ್ಟಡವನ್ನು ಶೀಘ್ರವೇ ಇಲಾಖೆಗೆ ಹಸ್ತಾಂತರಿಸು ವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಅಧ್ಯಕ್ಷರು ಸೂಚಿಸಿದರು.
ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಬಾ ಜಿ ಪುತ್ರನ್, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮೀತ್ ಶೆಟ್ಟಿ ಕೌಡೂರು, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಕುಂದಾಪುರ ಡಿಎಪ್ಓ ಆಶೀಶ್ ರೆಡ್ಡಿ, ಉಪಕಾರ್ಯದರ್ಶಿ ಕಿರಣ್ ಪಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು