ಸಾವಿರ ದಿನಗಳಲ್ಲಿ 6 ಲಕ್ಷ ಕಿ.ಮೀ. ಆಪ್ಟಿಕ್ ಫೈಬರ್ ಜಾಲ: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್

Update: 2020-11-19 14:56 GMT

ಬೆಂಗಳೂರು, ನ.19: ಡಿಜಿಟಲ್ ತಾಂತ್ರಿಕತೆಯ ಬೆಳವಣಿಗೆಗೆ ಪೂರಕವಾಗಿ ಮೂಲಸೌಕರ್ಯ ಕಲ್ಪಿಸಲು ಒತ್ತು ನೀಡಿರುವ ಕೇಂದ್ರ ಸರಕಾರವು 1000 ದಿನಗಳಲ್ಲಿ 6 ಲಕ್ಷ ಕಿ.ಮೀ. ಉದ್ದದಷ್ಟು ಆಪ್ಟಿಕ್ ಫೈಬರ್ ಕೇಬಲ್ ಜಾಲ ನಿರ್ಮಿಸಲು ಯೋಜನೆ ಹಾಕಿಕೊಂಡಿದೆ ಎಂದು ಕೇಂದ್ರ ಸರಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಹೇಳಿದರು.

ಮೂರು ದಿನಗಳ ಕಾಲ ಬೆಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ ನಡೆಯಲಿರುವ “ಬೆಂಗಳೂರು ತಂತ್ರಜ್ಞಾನ ಮೇಳ-2020’ದ (23ನೇ ಆವೃತ್ತಿ) ಉದ್ಘಾಟನಾ ಕಾರ್ಯಕ್ರಮದಲ್ಲಿ ವಚ್ರ್ಯುಯಲ್ ಆಗಿ ಪಾಲ್ಗೊಂಡು ಮಾತನಾಡಿದ ಅವರು, ಕೋವಿಡ್ ಸಂದರ್ಭವು ಒಂದೆಡೆ ನಮಗೆ ಸಂಕಷ್ಟವನ್ನು ತಂದೊಡ್ಡಿತು. ಮತ್ತೊಂದೆಡೆ, ಇಲ್ಲಿನ ಡಿಜಿಟಲ್ ತಂತ್ರಜ್ಞಾನ ಪರ್ಯಾವರಣವು ಹೊಸ ಅವಕಾಶಗಳನ್ನು ಸೃಷ್ಟಿಸಿತು ಎಂದರು.

ಜಾಗತಿಕ ತಯಾರಿಕಾ ಕಂಪನಿಗಳು ಕೋವಿಡ್ ಸನ್ನಿವೇಶದಲ್ಲಿ ಭಾರತದೆಡೆಗೆ ಧಾವಿಸಿಬಂದಿವೆ. ಕೋವಿಡ್ ಅವಧಿಯಲ್ಲಿ ದೇಶದ ಮಾಹಿತಿ ತಂತ್ರಜ್ಞಾನ ವಲಯವು ಶೇ.7ರಷ್ಟು ಬೆಳವಣಿಗೆ ಕಂಡಿದೆ. ಮುಂದಿನ ಐದು ವರ್ಷಗಳ ಅವಧಿಯಲ್ಲಿ ಈ ಕಂಪನಿಗಳು ಭಾರತದಲ್ಲಿ 11 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆ ಮಾಡುವ ನಿರೀಕ್ಷೆ ಇದೆ. ಆಪಲ್ ಕಂಪನಿಯು ತನ್ನ ಫೋನ್ ಹಾಗೂ ಬಿಡಿಭಾಗಗಳನ್ನು ತಯಾರಿಸುವ 11 ಘಟಕಗಳನ್ನು ಪ್ರಮುಖವಾಗಿ ಚೀನಾ ಹಾಗೂ ಇತರ ದೇಶಗಳಿಂದ ಭಾರತಕ್ಕೆ ವರ್ಗಾಯಿಸಿದ್ದು ಅದರ ಲಾಭ ಕರ್ನಾಟಕಕ್ಕೂ ಆಗಿದೆ. ಗೂಗಲ್, ಫೇಸ್ ಬುಕ್ ನಂತಹ ಕಂಪನಿಗಳು ಕೂಡ ಇಲ್ಲಿ ಹೂಡಿಕೆ ಹೆಚ್ಚಿಸಿವೆ ಎಂದು ಅವರು ಹೇಳಿದರು.

“ಡಿಜಿಟಲ್ ಇಂಡಿಯಾ” ಅಭಿಯಾನವು ನಿಜವಾಗಿಯೂ ಭಾರತದಲ್ಲಿ ಪರಿವರ್ತನೆ ತಂದಿದೆ. ಇದು ಎಲ್ಲರನ್ನೂ ಒಳಗೊಳ್ಳಿಸಿಕೊಂಡು ಬದಲಾವಣೆಗೆ ಕಾರಣವಾಗುತ್ತದೆ. ಇದರಿಂದಾಗಿ ಕಳೆದ 5 ವರ್ಷಗಳಲ್ಲಿ ಫಲಾನುಭವಿಗಳಿಗೆ 12 ಲಕ್ಷ ಕೋಟಿ ರೂಪಾಯಿಗಳನ್ನು ನೇರವಾಗಿ ವರ್ಗಾವಣೆ ಮಾಡಲು ಸಾಧ್ಯವಾಗಿದೆ. ಸುಮಾರು 1.75 ಲಕ್ಷ ಕೋಟಿ ರೂಪಾಯಿಗಳಷ್ಟು ಮೊತ್ತದ ಭ್ರಷ್ಟಾಚಾರವನ್ನು ಇದು ತೊಡೆದು ಹಾಕಿದೆ ಎಂದು ರವಿಶಂಕರ್ ಪ್ರಸಾದ್ ವಿವರಿಸಿದರು.

ಮುಂಬರುವ ದಿನಗಳಲ್ಲಿ ದೇಶದ ಆರ್ಥಿಕತೆಯು ದತ್ತಾಂಶ ಆಧಾರಿತವಾಗಲಿದೆ. ಮಾಹಿತಿ ತಂತ್ರಜ್ಞಾನಕ್ಕೆ ಹೆಸರಾದ ಬೆಂಗಳೂರು ದತ್ತಾಂಶ ಆರ್ಥಿಕತೆಯ ದೊಡ್ಡ ಕೇಂದ್ರವೂ ಆಗಿ ಹೊರಹೊಮ್ಮಬೇಕು. ಕೇಂದ್ರ ಸರಕಾರವು ದತ್ತಾಂಶ ಸುರಕ್ಷತೆ ಕಾನೂನು ರೂಪಿಸಲಿದೆ. ಸದೃಢ ಕೃತಕ ಬುದ್ಧಿಮತ್ತೆ ಕಾರ್ಯನೀತಿ ಜಾರಿಗೊಳಿಸುವುದಕ್ಕೂ ಒತ್ತು ಕೊಡಲಾಗುವುದು. ಕೃತಕ ಬುದ್ಧಿಮತ್ತೆ ತಾಂತ್ರಿಕತೆಯು ಎಲ್ಲರನ್ನೂ ಒಳಗೊಂಡು ಬೆಳವಣಿಗೆಗೆ ಅನುವು ಮಾಡಿಕೊಡಬೇಕು. ಇದೇ ವೇಳೆ ಮನುಷ್ಯನ ಭಾವನೆಗಳು ಅಷ್ಟೇ ಮುಖ್ಯ ಎಂಬುದನ್ನು ಗಮನದಲ್ಲಿರಿಸಿಕೊಂಡು ಸರಕಾರ ರೂಪುರೇಷ ಸಿದ್ಧಗೊಳಿಸಲಿದೆ ಎಂದು ಅವರು ಹೇಳಿದರು.

“ಆತ್ಮನಿರ್ಭರ ಭಾರತ” ಎಂದರೆ ಪ್ರತ್ಯೇಕತೆಯಲ್ಲ. ಅದು ಎಲ್ಲವನ್ನೂ ಒಳಗೊಳ್ಳುವಂಥದ್ದೂ ಹಾಗೂ ಸಮುದಾಯದ ನಡುವೆಯೇ ಹೊರಹೊಮ್ಮುವಂಥದ್ದೂ ಆಗಿರುತ್ತದೆ. ಈಗ ಭಾರತವನ್ನು ಇಡೀ ಪ್ರಪಂಚವೇ ಎದುರು ನೋಡುತ್ತಿದೆ. “ಡಿಜಿಟಲ್ ಇಂಡಿಯಾ”ಕ್ಕೆ ಹೆಚ್ಚಿನ ಕೊಡುಗೆ ನೀಡಿರುವ ಕರ್ನಾಟಕವು ಮುಂಬರುವ ದಿನಗಳಲ್ಲಿ ಹೊಸ ತಾಂತ್ರಿಕ ಪರಿಹಾರಗಳನ್ನು ರೂಪಿಸುವಲ್ಲಿ ಕೂಡ ಮುಂಚೂಣಿಯಲ್ಲಿರಬೇಕು ಎಂದು ಅವರು ಆಶಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News