ಕೇರಳ ಪೊಲೀಸ್ ತಿದ್ದುಪಡಿ ಕಾಯ್ದೆ ಸದ್ಯಕ್ಕೆ ಜಾರಿ ಇಲ್ಲ: ಪಿಣರಾಯಿ ವಿಜಯನ್
Update: 2020-11-23 08:15 GMT
ತಿರುವನಂತಪುರ: ಕೇರಳ ಪೊಲೀಸ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿ ತೀವ್ರ ಟೀಕೆಗಳನ್ನು ಗಣನೆಗೆ ತೆಗೆದುಕೊಂಡಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಸೆಕ್ಷನ್-118ಎ ಅನ್ನು ರಾಜ್ಯ ಸರಕಾರವು ಸದ್ಯಕ್ಕೆ ಜಾರಿಗೊಳಿಸದಿರಲು ನಿರ್ಧರಿಸಿದೆ ಎಂದು ಸೋಮವಾರ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಶಾಸಕರೊಂದಿಗೆ ಸಮಾಲೋಚಿಸಿದ ಬಳಿಕ ಕಾನೂನಿನ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ವಿಜಯನ್ ಹೇಳಿದ್ದಾರೆ.
ಮಹಿಳೆಯರು ಹಾಗೂ ಮಕ್ಕಳ ಮೇಲಿನ ಸೈಬರ್ ದಾಳಿಯನ್ನು ತಡೆಗಟ್ಟುವ ಪ್ರಯತ್ನವಾಗಿ ಎಡರಂಗ ಸರಕಾರ ತರಲು ಉದ್ದೇಶಿಸಿರುವ ಕೇರಳ ಪೊಲೀಸ್ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆಗೆ ಕೇರಳ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಅವರು ಸಹಿ ಹಾಕಿದ್ದಾರೆ ಎಂದು ರವಿವಾರ ವರದಿಯಾಗಿತ್ತು.
ಈ ತಿದ್ದುಪಡಿ ಕಾಯ್ದೆಯು ಅಭಿವ್ಯಕ್ತಿ ಸ್ವಾತಂತ್ರವನ್ನು ಮೊಟಕುಗೊಳಿಸುತ್ತದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು.