ಈ ವರ್ಷ 'ಕಲಿಕಾ ರಹಿತ ವರ್ಷ'ವೆಂದು ಘೋಷಣೆಯಾಗಿಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

Update: 2020-11-23 15:56 GMT

ಬೆಂಗಳೂರು, ನ.23: ಕಲಿಕಾ ರಹಿತ (Zero year) ವರ್ಷದ ಪ್ರಸ್ತಾವನೆ ಸರಕಾರದ ಮುಂದೆ ಸದ್ಯಕ್ಕಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‍ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಯಾವುದೇ ತರಗತಿಯ ಮಕ್ಕಳೂ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕೆಂಬ ಉದ್ದೇಶದಿಂದಲೇ ಶಿಕ್ಷಣ ಇಲಾಖೆಯು ಪರ್ಯಾಯ ಬೋಧನಾ ಕ್ರಮಗಳನ್ನು ಚಾಲನೆಯಲ್ಲಿಟ್ಟಿದೆ. ಇಂದಿನಿಂದ ಚಂದನ ವಾಹಿನಿಯಲ್ಲಿ ಪ್ರಾರಂಭವಾಗಿರುವ ಐದರಿಂದ ಏಳನೇ ತರಗತಿಯ ಬೋಧನಾ ತರಗತಿಗಳು ಈ ಪ್ರಯತ್ನದ ಭಾಗವಾಗಿದೆ ಎಂದು ಅವರು ತಿಳಿಸಿದ್ದಾರೆ.

ಎಲ್ಲ ತರಗತಿಗಳ ಮಕ್ಕಳಿಗೆ ಪಠ್ಯ ಪುಸ್ತಕಗಳು ಪೂರೈಕೆಯಾಗಿವೆ. ಶಾಲೆಗಳಲ್ಲಿ ಶಿಕ್ಷಕರು ಹಾಜರಾಗುವ ಮೂಲಕ ವಿದ್ಯಾರ್ಥಿಗಳ ಕಲಿಕೆಯನ್ನು ಪರಾಮರ್ಶಿಸುವ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಇನ್ನಷ್ಟು ಖಚಿತ ಜವಾಬ್ದಾರಿಯನ್ನು ನಿರ್ವಹಿಸಿ, ಎಲ್ಲ ತರಗತಿಗಳ ಮಕ್ಕಳನ್ನು ಕಲಿಕೆಗೆ ಪ್ರೇರೇಪಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಖಾಸಗಿ ಶಾಲೆಗಳು ಅನುಸರಿಸುತ್ತಿರುವ ಪರ್ಯಾಯ ಕ್ರಮಗಳೂ ಸಹ ವಿದ್ಯಾರ್ಥಿಗಳ ಕಲಿಕೆಯನ್ನು ಪ್ರೇರೇಪಿಸುವಂತಹವುಗಳೇ ಆಗಿದೆ. ಯಾವ ವಿದ್ಯಾರ್ಥಿಗೂ ಕಲಿಕೆಯ ಅವಕಾಶ ವಂಚನೆಯಾಗದ ಕಾರಣ ಈ ವರ್ಷವನ್ನು ಕಲಿಕಾ ರಹಿತ ವರ್ಷ ಎನ್ನಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿಗಳಿಗೆ ಅನುಗುಣವಾಗಿ ಶಾಲಾ ವಾತಾವರಣದಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲು ಸರಕಾರ ಮುಕ್ತ ಮನಸ್ಸನ್ನು ಹೊಂದಿದೆ ಎಂದು ಸುರೇಶ್‍ ಕುಮಾರ್ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News