4,000 ಕೋ.ರೂ.ವೆಚ್ಚದ ಪಶ್ಚಿಮ ವಾಹಿನಿ ಯೋಜನೆ: ಸಚಿವ ಮಾಧುಸ್ವಾಮಿ

Update: 2020-11-24 15:28 GMT

ಮಂಗಳೂರು, ನ.24: ದ.ಕ., ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹು ಉದ್ದೇಶಿತ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲು 4,000 ಕೋ.ರೂ. ಯೋಜನೆಯನ್ನು ಸಿದ್ಧ ಪಡಿಸಲಾಗಿದೆ. ಪಶ್ಚಿಮ ವಾಹಿನಿಯಲ್ಲಿ ಈ ಯೋಜನೆ ರೂಪಿಸಲಾಗಿದ್ದು, ಪ್ರಸ್ತಾವನೆಯನ್ನು ಅನುಮೋದನೆ ಗಾಗಿ ಶೀಘ್ರ ಸಚಿವ ಸಂಪುಟದ ಮುಂದೆ ಮಂಡಿಸಲಾಗುವುದು ಎಂದು ಕಾನೂನು, ಸಂಸದೀಯ ವ್ಯವಹಾರ ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಮಂಗಳವಾರ ಹರೇಕಳ ಬಳಿ ನೇತ್ರಾವತಿ ನದಿಗೆ ಪಶ್ಚಿಮ ವಾಹಿನಿಯಡಿ ನಿರ್ಮಿಸುತ್ತಿರುವ ಸೇತುವೆ ಸಹಿತ ಉಪ್ಪುನೀರು ತಡೆ ಅಣೆಕಟ್ಟು ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡುತ್ತಿದ್ದರು.

ಪಶ್ಚಿಮ ವಾಹಿನಿಯಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ 1,076 ಕಿಂಡಿ ಅಣೆಕಟ್ಟು ಕಾಮಗಾರಿಗಳನ್ನು ನಡೆಸಲು ನಿರ್ಧರಿಸಲಾಗಿದೆ. ಇವುಗಳಿಗಾಗಿ 2,900 ಕೋ.ರೂ. ವ್ಯಯಿಸಲು ಪ್ರಸ್ತಾವನೆ ಸಿದ್ಧ ಪಡಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ 1,000 ಕೋ.ರೂ. ವೆಚ್ಚದಲ್ಲಿ ಬಹು ಉದ್ದೇಶಿತ ಕಿಂಡಿ ಅಣೆಕಟ್ಟುಗಳನ್ನು ಪಶ್ಚಿಮ ವಾಹಿನಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಕೃಷಿ ಚಟುವಟಿಕೆಗಳಿಗೆ ನೀರು ಪೂರೈಕೆ, ಕುಡಿಯುವ ನೀರು ಪೂರೈಕೆ ಮತ್ತು ಅಂತರ್ಜಲ ವೃದ್ಧಿಗಾಗಿ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ನದಿಗಳಲ್ಲದೆ ಸಣ್ಣ ಸಣ್ಣ ಹೊಳೆಗಳಿಗೂ ಕಿಂಡಿ ಅಣೆಕಟ್ಟು ನಿರ್ಮಿಸಲಾಗುವುದು ಎಂದ ಸಚಿವರು, ಸಣ್ಣ ನೀರಾವರಿ ಇಲಾಖೆಯು ನೀರು ಶೇಖರಣೆಯನ್ನು ಮಾತ್ರ ಮಾಡುತ್ತದೆ. ಕುಡಿಯುವ ನೀರು ಮತ್ತು ಕೃಷಿಗೆ ಬಳಕೆ ಮಾಡುವ ಕಾರ್ಯತಂತ್ರ ಹಾಗೂ ಯೋಜನೆ ಯನ್ನು ಸಂಬಂಧ ಪಟ್ಟ ಇಲಾಖೆಗಳು ರೂಪಿಸಬೇಕಾಗುತ್ತದೆ ಎಂದು ಸಚಿವರು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News