ಸರಕಾರಿ ಇಲಾಖೆಗಳಲ್ಲಿ ಕಡ್ಡಾಯ ಕನ್ನಡ ಬಳಸುವಂತೆ ಸುತ್ತೋಲೆ

Update: 2020-11-28 12:49 GMT

ಬೆಂಗಳೂರು, ನ.28: ಸರಕಾರದ ವ್ಯಾಪ್ತಿಯ ಎಲ್ಲ ಇಲಾಖೆಗಳು ಹಾಗೂ ಸಂಸ್ಥೆಗಳು ಸಂಪೂರ್ಣವಾಗಿ ಕನ್ನಡದಲ್ಲಿ ಕಡತ ನಿರ್ವಹಿಸಬೇಕು, ಆಡಳಿತಕ್ಕೆ ಸಂಬಂಧಿಸಿದ ಎಲ್ಲವನ್ನೂ ಕನ್ನಡದಲ್ಲಿಯೇ ಲಭ್ಯವಾಗುವಂತಾಗಬೇಕು ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.

ತಂತ್ರಜ್ಞಾನದಲ್ಲಿ ಕನ್ನಡವನ್ನು ಸಮರ್ಪಕವಾಗಿ ಬಳಸಲು ಕ್ರಮ ಕೈಗೊಳ್ಳಬೇಕು. ವಿವಿಧ ಇಲಾಖೆಗಳು ರೂಪಿಸುವ ನೀತಿಗಳ ಕರಡು ಮತ್ತು ಅಂತಿಮ ಪ್ರತಿಗಳನ್ನು ಕನ್ನಡದಲ್ಲೂ ಪ್ರಕಟಿಸಬೇಕು. ತಂತ್ರಜ್ಞಾನ ಆಧಾರಿತ ಆಡಳಿತದಲ್ಲಿ ಸಾರ್ವಜನಿಕರಿಗೆ ಕನ್ನಡದಲ್ಲೂ ಎಸ್‍ಎಂಎಸ್ ಮತ್ತು ಇ-ಮೇಲ್‍ಗಳನ್ನು ಕಳುಹಿಸಲು ವ್ಯವಸ್ಥೆ ಮಾಡಬೇಕು. ಖಜಾನೆ, ಮಾನವ ಸಂಪನ್ಮೂಲ ನಿರ್ವಹಣೆ, ಟೆಂಡರ್ ತಂತ್ರಾಂಶಗಳು ಮತ್ತು ಸರಕಾರಿ ಆ್ಯಪ್‍ಗಳನ್ನು ಕನ್ನಡದಲ್ಲೂ ಸಿದ್ಧಪಡಿಸಿ, ಬಳಕೆಗೆ ಒದಗಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚನೆ ನೀಡಿದ್ದಾರೆ.

ಹೆದ್ದಾರಿಗಳು ಮತ್ತು ರಸ್ತೆಯ ಮಾರ್ಗಸೂಚಿ ಫಲಕಗಳು, ಮೈಲುಗಲ್ಲುಗಳಲ್ಲಿ ಫಲಕ ಅಳವಡಿಸುವಾಗ ಕನ್ನಡವನ್ನೇ ಪ್ರಧಾನವಾಗಿ ಬಳಸಬೇಕು. ಜಿಲ್ಲೆಯ ಪ್ರಮುಖ ರಸ್ತೆಗಳು, ವೃತ್ತಗಳಿಗೆ ಸಾಹಿತಿಗಳು, ಹಿರಿಯ ಹೋರಾಟಗಾರರ ಹೆಸರು ಇಡಬೇಕು. ಸರಕಾರಿ, ಖಾಸಗಿ ಆಸ್ಪತ್ರೆಗಳು, ನಸಿರ್ಂಗ್ ಹೋಂ ಮತ್ತು ಅರೆವೈದ್ಯಕೀಯ ಸಂಸ್ಥೆಗಳು ಕನ್ನಡವನ್ನು ಬಳಕೆ ಮಾಡಬೇಕು ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News