ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಆನ್‌ಲೈನ್ ಶಿಬಿರ ಉದ್ಘಾಟನೆ

Update: 2020-11-30 15:06 GMT

ಉಡುಪಿ, ನ.30: ಪರೀಕ್ಷೆಗೆ ತಯಾರಾಗಲು ಯೋಜನೆ ಬೇಕಾಗಿದ್ದು, ಆಸಕ್ತಿ ಇರುವ ವಿಷಯಗಳನ್ನು ಆಯ್ಕೆ ಮಾಡಿಕೊಂಡು ಅಧ್ಯಯನ ಮಾಡಬೇಕು. ಇಂಟರ್‌ನೆಟ್‌ನಲ್ಲಿ ಮಾಹಿತಿ ಸಿಗುತ್ತದೆ ಎಂದು ನಂಬುವ ಬದಲು ವಿಷಯಕ್ಕೆ ಸಂಬಂಧಿಸಿದ ವಿಶ್ವಾಸಾರ್ಹ ಪುಸ್ತಕಗಳ ಪರಾಮರ್ಶೆಯನ್ನು ವಿಸ್ತೃತವಾಗಿ ಮಾಡಬೇಕು ಎಂದು ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂ ಪಾಷ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಏರ್ಪಡಿಸಿದ್ದ ಪ್ರಸಕ್ತ ಸಾಲಿನ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಆನ್‌ಲೈನ್ ಶಿಬಿರವನ್ನು ಇತ್ತೀಚೆಗೆ ಆನ್‌ಲೈನ್ ಮೂಲಕ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಇಂದಿನ ಕೋವಿಡ್ ಸಮಯದಲ್ಲೂ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಲ್ಲಿ ಹಲವಾರು ಪರೀಕ್ಷೆಗಳ ಆನ್‌ಲೈನ್ ತರಬೇತಿ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದಕ್ಕೆ ಅಕ್ರಂ ಪಾಷಾ ಪ್ರಶಂಸೆ ವ್ಯಕ್ತಪಡಿಸಿದರು.

ಪರೀಕ್ಷಾ ಅಧ್ಯಯನ ಕ್ರಮದ ಬಗ್ಗೆ ಮಾತನಾಡಿದ ಡಾ.ಎ.ಎನ್. ಪ್ರಕಾಶ್ ಗೌಡ, ವೈದ್ಯಕೀಯ ಇಲ್ಲವೇ ಇಂಜಿನಿಯರಿಂಗ್ ಮುಗಿಸಿದವರು ಐಎಎಸ್ ಪಾಸಾಗಬಹುದು. ಬೇರೆ ವಿಷಯಗಳನ್ನು ವ್ಯಾಸಂಗ ಮಾಡಿದವರೆಲ್ಲ ದಡ್ಡರು ಎಂದು ಭಾವಿಸುವ ಅಗತ್ಯವಿಲ್ಲ. ನಮ್ಮಲ್ಲಿರುವ ಆಸಕ್ತಿ ಆಧರಿಸಿ, ಪದವಿ ಪಡೆದ ವಿಷಯಗಳನ್ನೆ ಅಲ್ಲದೆ ಇತರ ಮೂಲಗಳಿಂದ ವಿಷಯ ಸಂಗ್ರಹಣೆ ಮಾಡಿಕೊಂಡಾಗ ತಯಾರಿ ಸುಲಭವಾಗುತ್ತದೆ ಎಂದು ಸಲಹೆ ನೀಡಿದರು. 

ಕಾರ್ಮಿಕ ಇಲಾಖೆ ಜಂಟಿ ಆಯುಕ್ತ ಎಸ್.ಬಿ.ರವಿಕುಮಾರ್ ಶಿಬಿರಾರ್ಥಿ ಗಳಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಸಿಸ್ಟೆಂಟ್ ಕಮಿಷನರ್ ಎಂ.ಬಿ ಚೆನ್ನಕೇಶವ, ನಗರಸಭೆ ಗ್ರೇಡ್-1 ಚೀಪ್ ಆಫೀಸರ್ ಎಂ.ಮಾನಸ ಪರೀಕ್ಷೆ ಕುರಿತು ಮಾಹಿತಿ ನೀಡಿದರು.

ಕರಾಮುವಿ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರಾಮುವಿ ಕುಲಸಚಿವ ಪ್ರೊ. ಲಿಂಗರಾಜ ಗಾಂಧಿ, ಹಣಕಾಸು ಅಧಿಕಾರಿ ಡಾ.ಎ.ಖಾದರ್ ಪಾಷ, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣ ಗೌಡ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News