ಆಸ್ಪತ್ರೆಯಿಂದ ಬಿಡುಗಡೆಯಾಗಿ ಮತ್ತೆ ಪರಪ್ಪನ ಅಗ್ರಹಾರ ಸೇರಿದ ರೋಷನ್ ಬೇಗ್
Update: 2020-11-30 15:55 GMT
ಬೆಂಗಳೂರು, ನ.30: ಅನಾರೋಗ್ಯ ಸಂಬಂಧ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ಆರ್.ರೋಷನ್ ಬೇಗ್ ಅವರು ಸೋಮವಾರ ಬಿಡುಗಡೆಯಾದ ಹಿನ್ನೆಲೆ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರಕ್ಕೆ ರವಾನಿಸಲಾಯಿತು.
ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿದ್ದ ರೋಷನ್ ಬೇಗ್ ಅವರು ಜೈಲಿಗೆ ಹೋಗುತ್ತಿದ್ದಂತೆ ಎದೆನೋವು ಎಂದು ಆಸ್ಪತ್ರೆ ಸೇರಿದ್ದರು. ಆರೋಗ್ಯ ಸ್ಥಿರವಾಗುತ್ತಿದ್ದಂತೆ ವೈದ್ಯರು ಆಸ್ಪತ್ರೆಯಿಂದ ಬಿಡುಗಡೆ ಮಾಡಿರುವ ಹಿನ್ನೆಲೆ ಅವರನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನದಲ್ಲಿಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಸಿಬಿಐ ಅಧಿಕಾರಿಗಳು, ಪ್ರಮುಖ ಆರೋಪಿಯಾಗಿರುವ ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ ಮತ್ತು ರೋಷನ್ ಬೇಗ್ ಅವರನ್ನು ಮುಖಾಮುಖಿಯಾಗಿ ವಿಚಾರಣೆಗೊಳಪಡಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.