ಕಾಂಗ್ರೆಸ್‍ಗೆ ಸುಳ್ಳೇ ದೇವರು, ಸಿದ್ದರಾಮಯ್ಯ ಅದನ್ನೇ ಕಲಿತಿದ್ದಾರೆ: ಸಿ.ಟಿ.ರವಿ

Update: 2020-11-30 16:56 GMT

ಚಿಕ್ಕಮಗಳೂರು, ನ.30: ಪ್ರಧಾನಮಂತ್ರಿ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿ.ಟಿ.ರವಿ ತಿರುಗೇಟು ನೀಡಿದ್ದು, ಕಾಂಗ್ರೆಸ್‍ನವರಿಗೆ ಸುಳ್ಳೇ ದೇವರು, ಕಾಂಗ್ರೆಸ್‍ಗೆ ಸಿದ್ದರಾಮಯ್ಯ ಅವರು ಬಂದ ನಂತರ ಅದೇ ಪಾಠವನ್ನು ಕಲಿತುಕೊಂಡಿದ್ದಾರೆ. ಕಾಂಗ್ರೆಸ್‍ಗೆ ಇರುವ ಈ ಪಟ್ಟವನ್ನು ಮತ್ಯಾರು ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತ್ಯ ನಂಬದವರಿಗೆ ಸತ್ಯವು ಸುಳ್ಳಾಗಿ ಕಾಣಿಸುತ್ತದೆ. ಸತ್ಯ ನಂಬುವ ಸ್ವಭಾವ ಕಾಂಗ್ರೆಸ್‍ಗೆ ಇಲ್ಲ, ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಸುಳ್ಳು ಹೇಳುವ ಮೂಲಕ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ ಎಂದು ಸಿ.ಟಿ.ರವಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಟ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಮಾಡುತ್ತಾರೆಂಬ ಮಾತು ಹತ್ತು ವರ್ಷಗಳಿಂದ ಕೇಳಿ ಬರುತ್ತಿದೆ. ಅವರು ನಿರ್ಣಯ ಮಾಡದೆ ನಾವು ಪ್ರತಿಕ್ರಿಯಿಸುವುದು ಸರಿಯಲ್ಲ, ರಜನಿಕಾಂತ್ ರಾಜಕೀಯ ಬರುವ ಬಗ್ಗೆ ನಿರ್ಣಯ ಮಾಡಲಿ. ಸನ್ನಿವೇಶ, ಸಂದರ್ಭ ನೋಡಿ ಮುಂದಿನ ತೀರ್ಮಾನ ಕೈಗೊಳ್ಳುವ ಬಗ್ಗೆ ಚಿಂತನೆ ಮಾಡುತ್ತೇವೆ ಎಂದ ಅವರು, ನಿಗಮ ಮಂಡಳಿ ಅಧ್ಯಕ್ಷರ ವಿಚಾರ ಪಕ್ಷದ ವೇದಿಕೆಯಲ್ಲಿ ಡಿ.4ರಂದು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಮಾಡಲಾಗುವುದು. ಆಯ್ಕೆಯ ಮಾನದಂಡ, ಆಯ್ಕೆ ಪ್ರಕ್ರಿಯೆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News