×
Ad

ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಸಿದ್ಧತೆ ಪೂರ್ಣ: ಆರೋಗ್ಯ ಸಚಿವ ಡಾ.ಸುಧಾಕರ್

Update: 2020-12-02 19:44 IST

ಬೆಂಗಳೂರು, ಡಿ. 2: ರಾಜ್ಯದಲ್ಲಿ ಕೊವ್ಯಾಕ್ಸಿನ್ ಲಸಿಕೆ ಯಶಸ್ವಿಯಾಗಲಿದ್ದು, ಲಸಿಕೆ ವಿತರಣೆಗೆ ಎಲ್ಲ ಬಗೆಯ ಸಿದ್ಧತೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದಿಲ್ಲಿ ತಿಳಿಸಿದ್ದಾರೆ.

ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಭಾರತ್ ಬಯೋಟೆಕ್ ಸಹಯೋಗದಲ್ಲಿ ಕೊವ್ಯಾಕ್ಸಿನ್ ಕೋವಿಡ್ ಲಸಿಕೆಯ 3ನೆ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಾಲನೆ ನೀಡಿದರು.

ಆ ಬಳಿಕ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ರಾಜ್ಯಕ್ಕೆ ಇದು ಹೆಮ್ಮೆಯ ವಿಷಯವಾಗಿದೆ. ದೇಶದ 12 ರಾಜ್ಯಗಳ 25 ಭಾಗಗಳಲ್ಲಿ ಪ್ರಯೋಗ ನಡೆಯುತ್ತಿದ್ದು, ಸುಮಾರು 26 ಸಾವಿರ ಜನರಿಗೆ ಲಸಿಕೆ ನೀಡಲಾಗುತ್ತಿದೆ. ರಾಜ್ಯದಲ್ಲಿ 1,600-1,800 ಜನರಿಗೆ ಲಸಿಕೆಯನ್ನು ಪ್ರಾಯೋಗಿಕವಾಗಿ ನೀಡಲು ನಿರ್ಧರಿಸಲಾಗಿದೆ. ಲಸಿಕೆ ನೀಡುವ ಸಮಯದಲ್ಲಿ ಊಹಾಪೋಹಗಳು ಕೇಳಿಬರುತ್ತವೆ. ಆದರೆ ಇದಕ್ಕೆ ಯಾರೂ ಕಿವಿಗೊಡಬಾರದು ಎಂದು ತಿಳಿಸಿದರು.

ಪ್ರಪಂಚದಲ್ಲಿ ಶೇ.15 ರಿಂದ ಶೇ.20 ರಷ್ಟು ಭಾರತೀಯ ಕಂಪನಿಗಳೇ ಲಸಿಕೆ ನೀಡುವ ಮಟ್ಟಿಗೆ ಬೆಳೆದಿದೆ. ಲಸಿಕೆಯಿಂದ ಕೆಲ ಅಡ್ಡ ಪರಿಣಾಮಗಳು ಬರಬಹುದು. ಆದರೆ ಇದನ್ನು ನಮ್ಮ ತಜ್ಞರು ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ. ಆದ್ದರಿಂದ ಯಾವುದೇ ಆತಂಕ ಇಲ್ಲ ಎಂದು ಡಾ.ಸುಧಾಕರ್ ಸ್ಪಷ್ಟಪಡಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಲಸಿಕೆ ಸಂಶೋಧನೆಗೆ 900 ಕೋಟಿ ರೂ. ಮೀಸಲಿಟ್ಟಿದ್ದಾರೆ. ಲಸಿಕೆ ಪ್ರಯೋಗ ನಡೆಯುತ್ತಿರುವ ಸಂಸ್ಥೆಗಳಿಗೆ ಖುದ್ದಾಗಿ ಪ್ರಧಾನಿ ಮೋದಿಯವರೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಮ್ಮ ಸರಕಾರ ಕೋವಿಡ್-19 ಚಿಕಿತ್ಸೆಗಾಗಿ 300 ಕೋಟಿ ರೂ. ಗಳಿಗೂ ಹೆಚ್ಚು ಹಣ ಬಿಡುಗಡೆ ಮಾಡಿ ಉಚಿತ ಚಿಕಿತ್ಸೆ ನೀಡಿದೆ. ದಿನಕ್ಕೆ 1.25 ಲಕ್ಷ ಪರೀಕ್ಷೆ ಮಾಡುತ್ತಿದ್ದು, ಈವರೆಗೆ 1.20 ಕೋಟಿ ಉಚಿತ ಪರೀಕ್ಷೆ ಮಾಡಲಾಗಿದೆ ಎಂದು ಅವರು ವಿವರಿಸಿದರು.

ರಾಜ್ಯದಲ್ಲಿ ಲಸಿಕೆ ವಿತರಣೆಗೆ ಸಿದ್ಧತೆ ಪೂರ್ಣಗೊಂಡಿದೆ. 29,451 ಲಸಿಕೆ ವಿತರಣೆ ಕೇಂದ್ರ ಹಾಗೂ 10,008 ಸಿಬ್ಬಂದಿಯನ್ನು ಗುರುತಿಸಲಾಗಿದೆ. ಲಸಿಕೆ ಸಂಗ್ರಹ ಹಾಗೂ ವಿತರಣೆಗೆ 2,855 ಕೋಲ್ಡ್ ಚೇನ್ ಕೇಂದ್ರಗಳು ಲಭ್ಯವಿದೆ. ಹೊಸದಾಗಿ ಬೆಂಗಳೂರು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಪ್ರಾದೇಶಿಕ ಲಸಿಕೆ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದು ಡಾ.ಸುಧಾಕರ್ ತಿಳಿಸಿದರು.

ಲಸಿಕೆ ದೊರೆತ ಬಳಿಕ ಹೆಚ್ಚು ಜನರಿಗೆ ನೀಡಲಾಗುವುದು. ಕೊರೋನ ನಿಯಂತ್ರಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಮೊದಲಿಗೆ ಲಸಿಕೆ ನೀಡಲಾಗುವುದು. ನಂತರ 50 ವರ್ಷ ಮೇಲ್ಪಟ್ಟವರಿಗೆ ನೀಡಲಾಗುವುದು ಎಂದು ಸಚಿವ ಡಾ.ಸುಧಾಕರ್ ಇಂದಿಲ್ಲಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕ್ಲಿಂಟ್ರಾಕ್ ಇಂಟರ್‍ನ್ಯಾಷನಲ್ ಪ್ರೈ.ಲಿ ಸಂಸ್ಥೆಯ ಎಂ.ಕೆ.ಶ್ರೀನಿವಾಸಮೂರ್ತಿ ಆನ್‍ಲೈನ್ ಮೂಲಕ ಭಾಗವಹಿಸಿದರು. ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News