ಜಿ.ಟಿ.ದೇವೇಗೌಡ ಜೆಡಿಎಸ್ ನಲ್ಲಿಯೇ ಇದ್ದಾರೆ: ಕುಮಾರಸ್ವಾಮಿ ಸ್ಪಷ್ಟನೆ

Update: 2020-12-02 17:59 GMT

ಮೈಸೂರು,ಡಿ.2: ಶಾಸಕ ಜಿ.ಟಿ.ದೇವೇಗೌಡ ನಮ್ಮನ್ನು ಬಿಟ್ಟು ಎಲ್ಲಿ ಹೋಗಿದ್ದಾರೆ. ಅವರು ಇನ್ನೂ ಜೆಡಿಎಸ್ ನಲ್ಲಿಯೇ ಇದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕ ಜಿ.ಟಿ.ದೇವೇಗೌಡ ಅವರೇ ಜೆಡಿಎಸ್ ನಲ್ಲಿ ಇದ್ದೇನೆ ಎಂದು ಹೇಳಿದ್ದಾರೆ.  ಸರ್ಕಾರದ ಕಾರ್ಯಕ್ರಮಗಳಲ್ಲಿ ಬಿಜೆಪಿಯವರ ವೇದಿಕೆ ಹಂಚಿಕೊಳ್ಳುವುದು ಸಾಮಾನ್ಯ. ಇದಕ್ಕೆ ಬೇರೆ ರೀತಿಯ ಅರ್ಥಗಳನ್ನು ಕಲ್ಪಿಸಿಕೊಳ್ಳುವುದು ಬೇಡ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅವರ ಮುಂದಾಳತ್ವದಲ್ಲೇ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದೆ. ಅವರು ಶಾಸಕರಾಗಿರುವಷ್ಟು ದಿನದವರೆಗೂ ನಮ್ಮ ಪಕ್ಷವನ್ನೇ ಬೆಂಬಲಿಸಬೇಕು ಎಂದರು.

ಎಚ್.ಡಿ.ಕೋಟೆ ಸೇರಿದಂತೆ ರಾಜ್ಯದ 150 ಕ್ಷೇತ್ರಗಳಿಗೆ ವಿಧಾನಸಭೆ ಚುನಾವಣಾ ಅಭ್ಯರ್ಥಿಗಳನ್ನು ಹೊಸ ವರ್ಷದ ಆರಂಭದಲ್ಲಿ ಘೋಷಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಎಚ್.ಡಿ.ಕೋಟೆ ತಾಲೂಕಿನ ಗುಂಡತ್ತೂರು ಗ್ರಾಮದಲ್ಲಿ ಪಕ್ಷದ ಮೃತಪಟ್ಟ ಕಾರ್ಯಕರ್ತರೊಬ್ಬರ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಮಾತನಾಡಿದ ಅವರು, ಇದರಿಂದ ಪಕ್ಷ ಸಂಘಟನೆಗೆ, ಕಾರ್ಯಕರ್ತರನ್ನು ಭೇಟಿಯಾಗಲು ಅನುಕೂಲವಾಗಲಿದೆ. ಈ ಸಂಬಂಧ ಈಗಾಗಲೇ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ ಎಂದು ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News