ಉದ್ಯೋಗ ಮಾರುಕಟ್ಟೆಗೆ ತಕ್ಕಂತೆ ಡಿಪ್ಲೋಮಾ ಪಠ್ಯ ಬದಲಾವಣೆ: ಡಿಸಿಎಂ ಡಾ.ಅಶ್ವತ್ಥ ನಾರಾಯಣ

Update: 2020-12-04 14:51 GMT

ಬೆಂಗಳೂರು, ಡಿ. 4: ಉದ್ಯೋಗ ಮಾರುಕಟ್ಟೆಗೆ ಅನುಗುಣವಾಗಿ ಡಿಪ್ಲೋಮಾ ಪಠ್ಯವನ್ನು ಆಮೂಲಾಗ್ರವಾಗಿ ಬದಲಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಇಂದಿಲ್ಲಿ ಪ್ರಕಟಿಸಿದ್ದಾರೆ.

ಶುಕ್ರವಾರ ವಿಕಾಸಸೌಧದಲ್ಲಿ ಶಿಕ್ಷಕ ಹಾಗೂ ಪದವೀಧರ ಕ್ಷೇತ್ರಗಳಿಗೆ ಸಂಬಂಧಿಸಿದ ವಿಧಾನ ಪರಿಷತ್ ಸದಸ್ಯರ ಜತೆ ಮಾತುಕತೆ ನಡೆಸಿದ ನಂತರ ಮಾತನಾಡಿದ ಅವರು, ಸದ್ಯಕ್ಕೆ ಇರುವ ಡಿಪ್ಲೋಮಾ ಕೋರ್ಸ್ ಗಳಿಂದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳು ಲಭ್ಯವಾಗುತ್ತಿಲ್ಲ. ಪ್ರತಿ ವರ್ಷ ರಾಜ್ಯದಲ್ಲಿ 40 ಸಾವಿರ ಮಂದಿ ಅಂತಿಮ ವರ್ಷದ ವಿದ್ಯಾರ್ಥಿಗಳು ತೇರ್ಗಡೆಯಾಗುತ್ತಿದ್ದು, ಈ ಪೈಕಿ ಶೇ.20ರಷ್ಟು ವಿದ್ಯಾರ್ಥಿಗಳಿಗೂ ಉದ್ಯೋಗ ಸಿಗುತ್ತಿಲ್ಲ ಎಂದರು.

ಅದಕ್ಕೆ ಕಾರಣವಿಷ್ಟೇ, ಈಗಿರುವ ಡಿಪ್ಲೋಮಾ ಪಠ್ಯವೂ ಸಕಾಲಿಕವಾಗಿಲ್ಲ. ಇವತ್ತಿನ ಕೈಗಾರಿಕೆ ಅಗತ್ಯಗಳಿಗೆ ಅದು ಅಪ್ರಸ್ತುತವಾಗಿದೆ. ಈ ನಿಟ್ಟಿನಲ್ಲಿ ಕೈಗಾರಿಕೆಗಳಿಗೆ ಅಗತ್ಯ ಇರುವ, ಉದ್ಯೋಗ ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ಹಾಗೂ ಸದಾಕಾಲ ಕೆಲಸಕ್ಕೆ ಅರ್ಹತೆ ಕಲ್ಪಿಸಬಲ್ಲ ಪಠ್ಯವನ್ನು ಸಂಬಂಧಪಟ್ಟ ಎಲ್ಲರ ಜತೆ ಚರ್ಚಿಸಿ ರೂಪಿಸಲಾಗುತ್ತಿದೆ ಎಂದು ಡಾ.ಅಶ್ವತ್ಥ ನಾರಾಯಣ ತಿಳಿಸಿದರು.

ಡಿಪ್ಲೋಮಾ ಕೋರ್ಸ್ ನ ಪಠ್ಯವನ್ನು ಮರುಪರಿಷ್ಕಣೆ ಮಾಡುವ ಮೂಲಕ ನ್ಯಾಷನಲ್ ಕ್ವಾಲಿಫಿಕೇಶ್ ಬಗ್ಗೆ ಬದಲಾವಣೆ ಮಾಡಲಾಗಿದೆ. ಜತೆಗೆ, ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಪಠ್ಯವನ್ನು ಮರುರೂಪಿಸಲಾಗುತ್ತಿದೆ. ಇದಕ್ಕಾಗಿ ಹೆಚ್ಚುವರಿಯಾಗಿ ಯಾವುದೇ ರೀತಿಯ ಹಣಕಾಸಿನ ಹೊರೆ ಸರಕಾರದ ಮೇಲೆ ಬೀಳುತ್ತಿಲ್ಲ ಎಂದು ಅವರು ತಿಳಿಸಿದರು.

ಪರಿಷತ್ ಸದಸ್ಯರಿಂದ ಸಲಹೆ: ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಈಗಾಗಲೇ ಅನೇಕ ಕ್ರಾಂತಿಕಾರಿ ಸುಧಾರಣೆಗಳನ್ನು ತರಲಾಗಿದೆ. ಆ ಬಗ್ಗೆ ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳನ್ನು ಪ್ರತಿನಿಧಿಸುತ್ತಿರುವ ಕ್ಷೇತ್ರಗಳ ಪರಿಷತ್ ಸದಸ್ಯರಿಗೆ ಎಲ್ಲ ಮಾಹಿತಿ ನೀಡಲಾಗಿದೆ. ಮುಂದೆ ಕೈಗೊಳ್ಳಬಹುದಾದ ಸುಧಾರಣೆಗಳು, ನೂತನವಾಗಿ ಜಾರಿಗೆ ಬಂದಿರುವ 'ಕರ್ನಾಟಕ ಕಲಿಕಾ ನಿರ್ವಹಣಾ ವ್ಯವಸ್ಥೆ'(ಎಲ್‍ಎಂಎಸ್) ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಆಗುತ್ತಿರುವ ಪ್ರಗತಿಯ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಪರಿಷತ್ ಸದಸ್ಯರು ಅನೇಕ ಉಪಯುಕ್ತ ಸಲಹೆ ನೀಡಿದ್ದಾರೆ ಎಂದು ಡಾ. ಅಶ್ವತ್ಥನಾರಾಯಣ ಹೇಳಿದರು.

ಶಿಕ್ಷಣ ನೀತಿಗೆ ಬೆಂಬಲ: ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಸಭೆಯಲ್ಲಿದ್ದ ಎಲ್ಲ ಸದಸ್ಯರು ಪಕ್ಷಭೇದವಿಲ್ಲದೆ ಬೆಂಬಲ ಸೂಚಿಸಿದ್ದಾರೆ. ಮೂರು ದಶಕಗಳಿಗೂ ಮಿಕ್ಕಿ ಹಳೆಯದಾದ, ಪ್ರಸಕ್ತ ಸಂದರ್ಭಕ್ಕೆ ಸೂಕ್ತವಲ್ಲದ ಶಿಕ್ಷಣ ನೀತಿಯಿಂದ ಪ್ರಯೋಜನವಿಲ್ಲ. ಹೊಸ ನೀತಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶಕ್ತಿ ತುಂಬಬಲ್ಲ ಅಂಶಗಳಿವೆ ಎಂದು ಎಲ್ಲರೂ ಅಭಿಪ್ರಾಯಪಟ್ಟರು. ಇನ್ನು, ರಾಜ್ಯದಲ್ಲಿ ಈಗಾಗಲೇ ಉನ್ನತ ಶಿಕ್ಷಣ ಪರಿಷತ್ ಇದೆ. ಅದರ ಜತೆಗೆ, ಪ್ರಾಥಮಿಕ ಶಿಕ್ಷಣ ಪರಿಷತ್ ಸ್ಥಾಪನೆ ಮಾಡುವ ಸರಕಾರದ ಪ್ರಯತ್ನಕ್ಕೆ ಒಕ್ಕೊರಲ ಬೆಂಬಲ ಸೂಚಿಸಿದರು. ಶಿಕ್ಷಣ ಕ್ಷೇತ್ರಕ್ಕೆ ಪೂರಕವಾದ ಮೂರು ಹೊಸ ಕಾನೂನುಗಳನ್ನು ಜಾರಿಗೆ ತರಬೇಕಿದೆ ಹಾಗೂ ಶಿಕ್ಷಣ ನೀತಿ ಜಾರಿಗೊಳಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಆದಷ್ಟು ಬೇಗ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದ ಅವರು, ಈಗಾಗಲೇ ನೂತನ ಕಲಿಕಾ ನಿರ್ವಹಣಾ ಪದ್ಧತಿಯನ್ನು ಜಾರಿ ಮಾಡಲಾಗಿದೆ. ತಂತ್ರಜ್ಞಾನದ ಮೂಲಕ ಸರಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ 5 ಲಕ್ಷ ವಿದ್ಯಾರ್ಥಿಗಳಿಗೆ ಈ ಯೋಜನೆಯಿಂದ ಅನುಕೂಲವಾಗುತ್ತದೆ. ಈಗಾಗಲೇ ರಾಜ್ಯದಲ್ಲಿರುವ ಒಟ್ಟು 8 ಸಾವಿರ ತರಗತಿ ಕೊಠಡಿಗಳನ್ನು ಸ್ಮಾರ್ಟ್ ಕ್ಲಾಸ್ ರೂಂಗಳನ್ನಾಗಿ ಪರಿವರ್ತಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ಪರಿಷತ್ ಸದಸ್ಯರಾದ ಪುಟ್ಟಣ್ಣ, ಮರಿತಿಬ್ಬೇಗೌಡ, ವೈ.ಎ.ನಾರಾಯಣಸ್ವಾಮಿ, ಅ.ದೇವೇಗೌಡ, ಭೋಜೇಗೌಡ, ಚಿದಾನಂದ ಗೌಡ, ಅರುಣ್ ಶಹಾಪೂರ, ಶಶೀಲ್ ನಮೋಶಿ, ತಾಂತ್ರಿಕ ಮತ್ತು ಉನ್ನತ ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲ ಜೋಶಿ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News