ಶೋಷಣೆ ಮುಕ್ತ ಸಮಾಜವನ್ನು ಕಟ್ಟಲು ಶ್ರಮಿಸೋಣ: ಮುಖ್ಯಮಂತ್ರಿ ಯಡಿಯೂರಪ್ಪ

Update: 2020-12-06 12:09 GMT

ಬೆಂಗಳೂರು, ಡಿ. 6: ಮಹಾನ್ ಮಾನವತವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರತಿಪಾದಿಸಿರುವ ತತ್ವ-ಆದರ್ಶಗಳನ್ನು ಅರ್ಥ ಮಾಡಿಕೊಂಡು ಅವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯುವಂತ ಸಂಕಲ್ಪ ಇಂದು ಮಾಡಬೇಕಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ರವಿವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ವಿಧಾನಸೌಧದ ಮುಂಬಾಗದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡುತ್ತಿದ್ದರು.

ಸಮಾ ಸಮಾಜದ ನಿರ್ಮಾಣ ನಮ್ಮ ಸರಕಾರದ ಗುರಿಯಾಗಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರಕಾರದ ಸೌಲಭ್ಯಗಳು ತಲುಪಬೇಕು, ಈ ನಿಟ್ಟಿನಲ್ಲಿ ನಾವು ಅಗತ್ಯವಿರುವ ಯೋಜನೆಗಳನ್ನು ರೂಪಿಸಿ ಜಾರಿಗೆ ತರುತ್ತಿದ್ದೇವೆ. ಡಾ.ಬಿ.ಆರ್.ಅಂಬೇಡ್ಕರ್ ಪುಣ್ಯ ಸ್ಮರಣಿಯ ದಿನದಂದು ನಾವು ಮಾನವೀಯತೆಯನ್ನು ಜಾಗೃತಗೊಳಿಸಬೇಕು, ನಾಡಿನಲ್ಲಿ ಶೋಷಣೆಮುಕ್ತ ಸಮಾಜವನ್ನು ಕಟ್ಟಲು ನಾವೆಲ್ಲರು ಶ್ರಮಿಸೋಣ ಎಂದು ಅವರು ಕರೆ ನೀಡಿದರು.

ಅಸ್ಪೃಶ್ಯತೆಯಂತಹ ಸಾಮಾಜಿಕ ಪಿಡುಗಿನ ವಿರುದ್ಧ ಹೋರಾಡಿ, ಸಮ ಸಮಾಜಕ್ಕಾಗಿ ಶ್ರಮಿಸಿದ ಬಾಬ ಸಾಹೇಬ್ ಅಂಬೇಡ್ಕರ್ ನಮಗೆಲ್ಲರಿಗೂ ಆದರ್ಶ ಪ್ರಾಯರಾಗಿದ್ದಾರೆ. ಡಾ ಅಂಬೇಡ್ಕರ್ ಅವರದ್ದು ಬಹುಮುಖಿ ವ್ಯಕ್ತಿತ್ವ ದೇಶದ ಅಭಿವೃದ್ಧಿಗೆ ಬಾಬಾ ಸಾಹೇಬರ ಕೊಡುಗೆ ಅನನ್ಯವಾದದ್ದು, ಪ್ರಪಂಚ ಕಂಡಂತಹ ಅತ್ಯಂತ ಪ್ರಭಾವಶಾಲಿ, ಪ್ರತಿಭಾವಂತ ಅರ್ಥಶಾಸ್ತ್ರಜ್ಞರು ಅವರಾಗಿದ್ದರು ಎಂದು ಯಡಿಯೂರಪ್ಪ ಸ್ಮರಿಸಿದರು.

ಮಹಿಳೆಯರಿಗೆ ಸಮಾನ ಹಕ್ಕು. ಕಾರ್ಮಿಕರ ಕಲ್ಯಾಣ, ಶಿಕ್ಷಣ ಹಾಗೂ ಸ್ವಾತಂತ್ರದ ಹಕ್ಕಿಗಾಗಿ ಹೋರಾಡಿದ್ದಾರೆ. ದೇಶಕ್ಕೆ ಸಶಕ್ತ ಸಂವಿಧಾನ ನೀಡುವ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಒಂದು ಮೂರ್ತರೂಪ ನೀಡಿದರು. ವಿಶ್ವದಲ್ಲಿಯೇ ಮಾದರಿ ಅನಿಸಿಕೊಂಡ ಭಾರತದ ಸಂವಿಧಾನ ಸಮಾನತೆ, ಭ್ರಾತೃತ್ವ, ಸೌಹಾರ್ದತೆಯನ್ನು ಸಾರುತ್ತದೆ ಎಂದು ಯಡಿಯೂರಪ್ಪ ಹೇಳಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು, ಸಮತಾ ಸೈನಿಕ ದಳ ರಾಜ್ಯಾಧ್ಯಕ್ಷ ವೆಂಕಟಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಎನ್.ನಾಗಂಬಿಕಾ ದೇವಿ, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ.ರವಿಕುಮಾರ ಸುರಪುರ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

'ಕೆಡವಿ ಹಾಕುವ, ಸುಟ್ಟುಹಾಕುವ ಮನುಷ್ಯ ವಿರೋಧಿ ಸಂಸ್ಕೃತಿಯ ವಿರುದ್ಧ ಹೋರಾಡಲು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಚಿಂತನೆಗಳು ನಮ್ಮ ಕೈಗಳಲ್ಲಿನ ಅಸ್ತ್ರಗಳಾಗಬೇಕು. ಬಾಬಾ ಸಾಹೇಬರ ಪರಿನಿರ್ವಾಣ ದಿನ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಯ ಪ್ರತಿಜ್ಞೆ ಮಾಡೋಣ, ಇದು ಆ ಚೇತನಕ್ಕೆ ಸಲ್ಲಿಸುವ ನಿಜವಾದ ಗೌರವ'

-ಸಿದ್ದರಾಮಯ್ಯ, ವಿಪಕ್ಷ ನಾಯಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News