×
Ad

ನನ್ನನ್ನು ಪಕ್ಷದಿಂದ ವಜಾಗೊಳಿಸಿದ ನಂತರ ಜೆಡಿಎಸ್ ಗೆಲುವಿನ ಸ್ಥಾನಗಳಲ್ಲಿ ಕುಸಿತ: ಸಿದ್ದರಾಮಯ್ಯ

Update: 2020-12-06 21:04 IST

ಬೆಂಗಳೂರು, ಡಿ. 6: 'ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಪ್ರಕಟಿಸುವಂತೆ ವಿಧಾನ ಮಂಡಲ ಅಧಿವೇಶನದಲ್ಲಿ ಸರಕಾರವನ್ನು ಒತ್ತಾಯಿಸುತ್ತೇವೆ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ.

ರವಿವಾರ ವಿಧಾನ ಮಂಡಲದ ಉಭಯ ಸದನಗಳ ಹಿರಿಯ ಸದಸ್ಯರ ಸಭೆಯ ಬಳಿಕ ತಮ್ಮ ನಿವಾಸದಲ್ಲಿ ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳು ಈ ವರ್ಷ ಮೂರು ಬಾರಿ ಪ್ರವಾಹದಿಂದ ಹಾನಿಗೀಡಾಗಿವೆ, ಈವರೆಗೂ ನಷ್ಟಕ್ಕೊಳಗಾದ ಜನರಿಗೆ ಸೂಕ್ತ ಪರಿಹಾರ ನೀಡಿಲ್ಲ. ಜೊತೆಗೆ ಅನೇಕ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ನೀಡಿಲ್ಲ, ವಿದ್ಯುತ್ ಖರೀದಿಯಲ್ಲಿ ಅವ್ಯವಹಾರ ನಡೆಯುತ್ತಿದೆ. ಈ ಎಲ್ಲಾ ವಿಚಾರಗಳನ್ನು ಸದನದಲ್ಲಿ ಪ್ರಸ್ತಾಪಿಸಲಾಗುವುದು ಎಂದರು.

ರಾಜ್ಯದ ಹಣಕಾಸು ಸ್ಥಿತಿ ಹದಗೆಟ್ಟಿದೆ. ನೌಕರರ ಸಂಬಳ, ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ವಿವಿಧ ಪಿಂಚಣಿ ನೀಡಲು ಸರ್ಕಾರದ ಬಳಿ ಹಣವಿಲ್ಲ. ಹಾಗಾಗಿ ಈ ಬಾರಿಯ ಅಧಿವೇಶನದಲ್ಲಿ ರಾಜ್ಯದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಸರಕಾರವನ್ನು ಒತ್ತಾಯಿಸುತ್ತೇವೆ ಎಂದುಇ ಹೇಳಿದರು.

ವಿಧಾನ ಪರಿಷತ್ ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಕ್ಕೆ ಸರಕಾರ ನಿರ್ಧರಿಸಿದೆ. ನಮ್ಮದು ಜಾತ್ಯತೀತ ಪಕ್ಷ ಎನ್ನುವ ಜೆಡಿಎಸ್ ಕೋಮುವಾದಿಗಳ ಪರವಾಗಿ ಮತ ಚಲಾಯಿಸುತ್ತದೋ, ವಿರುದ್ಧವಾಗಿ ಮತ ಚಲಾಯಿಸುತ್ತದೋ ಎಂಬುದನ್ನು ನೋಡಲು ಸಭಾಪತಿ ಪ್ರತಾಪ್ ಚಂದ್ರಶೆಟ್ಟಿಯವರಿಗೆ ಈಗಲೇ ರಾಜೀನಾಮೆ ನೀಡದಂತೆ ಹೇಳಿದ್ದೇನೆ ಎಂದು ಅವರು ಸ್ಪಷ್ಟನೆ ನೀಡಿದರು.

ಎಚ್‍ಡಿಕೆ ವಿರುದ್ಧ ಟೀಕೆ: ಸಮ್ಮಿಶ್ರ ಸರಕಾರ ಬಂದಮೇಲೆ ತನ್ನ ಗೌರವ ಹಾಳಾಯ್ತು ಎಂಬ ಕುಮಾರಸ್ವಾಮಿಯವರ ಹೇಳಿಕೆ ಹಾಸ್ಯಾಸ್ಪದವಾಗಿದೆ. ಕುಮಾರಸ್ವಾಮಿಗೆ ಒಳ್ಳೆ ಇಮೇಜ್ ಇದ್ದದ್ದೇ ಆದರೆ ಹಿಂದಿನ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷ ಗೆಲ್ಲುವ ಸ್ಥಾನಗಳ ಸಂಖ್ಯೆ ಏರಿಕೆಯಾಗುತ್ತಿತ್ತೇ ಹೊರತು ಕಡಿಮೆಯಾಗುತ್ತಿರಲಿಲ್ಲ ಎಂದು ಟೀಕಿಸಿದರು.

2004ರಲ್ಲಿ ನಾನು ಜೆಡಿಎಸ್ ನಲ್ಲಿದ್ದಾಗ ಜಿಡಿಎಸ್ 59 ಸ್ಥಾನಗಳನ್ನು ಗೆದ್ದಿತ್ತು, ನನ್ನನ್ನು ಪಕ್ಷದಿಂದ ವಜಾಗೊಳಿಸಿದ ನಂತರದ ಚುನಾವಣೆಯಲ್ಲಿ 28 ಸ್ಥಾನ, 2013ರ ಚುನಾವಣೆಯಲ್ಲಿ 40 ಸ್ಥಾನ, ಕಳೆದ ಚುನಾವಣೆಯಲ್ಲಿ 37 ಸ್ಥಾನ ಗೆದ್ದಿತ್ತು. ಕುಮಾರಸ್ವಾಮಿ ಜನರ ಬಳಿ ಗೌರವ ಉಳಿಸಿಕೊಂಡಿದ್ದರೆ 59 ರಿಂದ 28 ಸ್ಥಾನಕ್ಕೆ ಬರುತ್ತಿತ್ತೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಜೆಡಿಎಸ್ ನವರ ರಾಜಕೀಯ ವಿರೋಧಿ ಕಾಂಗ್ರೆಸ್ ಪಕ್ಷವೇ ಹೊರತು ಬಿಜೆಪಿ ಅಲ್ಲ. ಅವರು ಬಿಜೆಪಿ ಬಗ್ಗೆ ಸದಾಕಾಲ ಮೃದು ಧೋರಣೆ ಹೊಂದಿದ್ದಾರೆ. ನಿನ್ನೆ ಕುಮಾರಸ್ವಾಮಿ ಅವರು ತಾವು ಬಿಜೆಪಿಗೆ ಹೋಗಿದ್ದರೆ 5 ವರ್ಷ ಮುಖ್ಯಮಂತ್ರಿ ಆಗಿರುತ್ತಿದ್ದೆ ಎಂದು ಹೇಳಿರುವುದೇ ಇದಕ್ಕೆ ಸಾಕ್ಷಿ. ಇದೇ ಕಾರಣಕ್ಕೆ ನಾನು ಜೆಡಿಎಸ್ ಅನ್ನು ಬಿಜೆಪಿಯ 'ಬಿ ಟೀಮ್' ಎನ್ನುವುದು ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು.

ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಾಗ ಸರಕಾರ ರಚನೆ ಮಾಡುವಂತೆ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಿದ್ದು, ಅವರೊಂದಿಗೆ ಮೊದಲ ಸುತ್ತಿನ ಮಾತುಕತೆ ಮಾಡಿದ್ದು ಕಾಂಗ್ರೆಸ್ ಹೈಕಮಾಂಡ್, ನಾನಲ್ಲ. 37 ಸ್ಥಾನ ಗೆದ್ದವರಿಗೆ ಮುಖ್ಯಮಂತ್ರಿ ಹುದ್ದೆ ನೀಡಿದ್ದರು, ಇದರಲ್ಲಿ ಟ್ರ್ಯಾಪಿಂಗ್ ಎಲ್ಲಿಂದ ಬಂತು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News