ಆರ್ಥಿಕ ಇಲಾಖೆ ಒಪ್ಪಿಗೆ ನೀಡುತ್ತಿದ್ದಂತೆ ಕೃಷಿ ಇಲಾಖೆಯ ಹುದ್ದೆಗಳ ಭರ್ತಿ: ಬಿ.ಸಿ.ಪಾಟೀಲ್
ಬೆಂಗಳೂರು, ಡಿ. 7: ಆರ್ಥಿಕ ಇಲಾಖೆಯಿಂದ ಹುದ್ದೆ ಭರ್ತಿಗೆ ಒಪ್ಪಿಗೆ ಸಿಗುತ್ತಿದ್ದಂತೆಯೇ ಆದಷ್ಟುಬೇಗ ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ತುಂಬಲಾಗುವುದು ಎಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್, ಕೋವಿಡ್ ಆರ್ಥಿಕ ಸಂಕಷ್ಟದಿಂದ ಯಾವುದೇ ಹೊಸ ಹುದ್ದೆ ತುಂಬಲು ಸದ್ಯಕ್ಕೆ ಆರ್ಥಿಕ ಇಲಾಖೆ ಅನುಮೋದನೆ ನೀಡುತ್ತಿಲ್ಲ. ಹುದ್ದೆ ತುಂಬಲು ಸರ್ಕಾರದಿಂದ ಒಪ್ಪಿಗೆ ಸಿಕ್ಕ ಬಳಿಕ ಶೀಘ್ರವೇ ಖಾಲಿ ಸ್ಥಾನಗಳನ್ನು ತುಂಬಲಾಗುವುದು ಎಂದರು.
ಈ ಹುದ್ದೆಗಳೆಲ್ಲ ಇತ್ತೀಚೆಗೆ ಖಾಲಿಯಾಗಿದ್ದಲ್ಲ. ಬಹಳ ಹಿಂದಿನಿಂದಲೇ ಭರ್ತಿಯಾಗದೇ ಉಳಿದಿದ್ದವು. ಕೊಪ್ಪಳ ಜಿಲ್ಲೆಯ ಕೃಷಿ ಇಲಾಖೆಯಲ್ಲಿನ ಜಂಟಿ ಕೃಷಿ ನಿರ್ದೇಶಕರ, ಉಪ ಕೃಷಿ ನಿರ್ದೇಶಕರ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಲ್ಲಿ ಒಟ್ಟು 246 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 141 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. 105 ಹುದ್ದೆಗಳು ಖಾಲಿಯಿವೆ. ಶೀಘ್ರದಲ್ಲಿಯೇ ಇವುಗಳನ್ನು ಸಹ ಸರ್ಕಾರದಿಂದ ಅನುಮೋದನೆ ಸಿಗುತ್ತಿದ್ದಂತೆಯೇ ಭರ್ತಿ ಮಾಡಲಾಗುವುದು ಎಂದು ಬಿ.ಸಿ.ಪಾಟೀಲ್ ಹೇಳಿದರು.
2018-19 ಸಾಲಿನಲ್ಲಿ ರಾಜ್ಯದಲ್ಲಿ ಗ್ರೂಪ್-ಎ ಮತ್ತು ಬಿ ವೃಂದದಲ್ಲಿ ಸಹಾಯಕ ಕೃಷಿ ನಿರ್ದೇಶಕರು 66 ಹುದ್ದೆ, ಕೃಷಿ ಅಧಿಕಾರಿಗಳು 350 ಹುದ್ದೆ, ಸಹಾಯಕ ಕೃಷಿ ಅಧಿಕಾರಿಗಳು 157 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗಿದೆ.ಗ್ರೂಪ್-ಸಿ ವೃಂದದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಹಾಗೂ ಮುಂಬಡ್ತಿ ಕೋಟಾದಡಿ ಖಾಲಿ ಇರುವ ಹುದ್ದೆಗಳನ್ನು ನಿಯಮಾನುಸಾರ ಬಡ್ತಿ ಮೂಲಕ ಭರ್ತಿ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು.
ಕೃಷಿ ಚಟುವಟಿಕೆಗಳನ್ನು ಸಮರ್ಪಕವಾಗಿ ಸಕಾಲದಲ್ಲಿ ಕಾರ್ಯನಿರ್ವಹಿಸಲು ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವ ಸಲುವಾಗಿ ಕೊಪ್ಪಳ ಜಿಲ್ಲೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ 70 ಸಿಬ್ಬಂದಿಗಳನ್ನು ಇಲಾಖಾ ಮಾರ್ಗಸೂಚಿಯನ್ವಯ ನೇಮಕ ಮಾಡಿಕೊಳ್ಳಲಾಗಿದೆ. ಖಾಲಿ ಹುದ್ದೆಗಳಿಗೆ ಎದುರಾಗಿ ಹಾಗೂ ಆತ್ಮಯೋಜನೆಯಡಿ ಹೊರಗುತ್ತಿಗೆ ಹುದ್ದೆಗಳನ್ನು ತುಂಬಲಾಗಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.
ರೈತರು ಬೆಳೆ ವಿಮೆಗೆ ಆಧಾರ್ ಲಿಂಕ್ ಸೇರಿದಂತೆ ಮತ್ತಿತರ ಕೃಷಿಗೆ ಸಂಬಂಧಿಸಿದಂತೆ ತಮಗೆ ಯಾವುದೇ ಸಮಸ್ಯೆ ಕಂಡುಬಂದಲ್ಲಿ ಸ್ಥಳೀಯ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿ ಬಿ.ಸಿ.ಪಾಟೀಲ್ ಸದನಕ್ಕೆ ಉತ್ತರಿಸಿದರು.