ಡಿ.19ರಂದು ಬೃಹತ್ ಇ-ಲೋಕ್ ಅದಾಲತ್ ಆಯೋಜನೆ : ನ್ಯಾ.ಮುರಲೀಧರ ಪೈ
ಮಂಗಳೂರು, ಡಿ.7: ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಡಿ.19ರಂದು ದ.ಕ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಬೃಹತ್ ಇ-ಲೋಕ್ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ನ್ಯಾ. ಮುರಲೀಧರ ಪೈ ತಿಳಿಸಿದ್ದಾರೆ.
ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯಗಳಲ್ಲಿ ತೀರ್ಮಾನಕ್ಕೆ ಬಾಕಿ ಇರುವ ಮತ್ತು ವ್ಯಾಜ್ಯ ಪೂರ್ವ (ಪ್ರಿ ಲಿಟಿಗೇಶನ್) ಎಲ್ಲ ಸಿವಿಲ್ ರೂಪದ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಕಾಯ್ದೆಯಡಿ ಪರಿಹಾರಕ್ಕಾಗಿ ಸಲ್ಲಿಸಿದ ಅರ್ಜಿಗಳು, ಭೂ ಸ್ವಾಧೀನ ಪರಿಹಾರಕ್ಕೆ ಸಂಬಂಧಿಸಿದ ಪ್ರಕರಣ ಇತ್ಯಾದಿಗಳನ್ನು ಬೃಹತ್ ಲೋಕ ಅದಾಲತ್ ಮುಖಾಂತರ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದರು.
ವ್ಯಾಜ್ಯ ಪೂರ್ವ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಾವುದೇ ನ್ಯಾಯಾಲಯ ಶುಲ್ಕ ಪಾವತಿಸಬೇಕಾಗಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ನ್ಯಾಯಾಲ ಯದಲ್ಲಿ ಪೂರ್ಣಪ್ರಮಾಣದಲ್ಲಿ ಕಲಾಪ ನಡೆಸಲು, ಸಾಕ್ಷಿಗಳ ವಿಚಾರಣೆ ನಡೆಸಲು ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯ ಲೋಕ ಅದಾಲತ್ ಹೆಚ್ಚಿನ ಪಕ್ಷಕಾರರಿಗೆ ಅನುಕೂಲವಾಗಲಿದೆ ಎಂದು ಅವರು ಮಾಹಿತಿ ನೀಡಿದರು.
ಸಾರ್ವಜನಿಕರು ನೇರವಾಗಿ ಅಥವಾ ತಮ್ಮ ವಕೀಲರ ಮೂಲಕ ಲೋಕ್ ಅದಾಲತ್ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಅಗತ್ಯವಿದ್ದರೆ ಪಕ್ಷಕಾರರ ಸಮ್ಮತಿಯನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಪಡೆದುಕೊಳ್ಳಲಾಗುವುದು. ಪಕ್ಷಕಾರರು ಲೋಕ್ ಅದಾಲತ್ನಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡಲ್ಲಿ ಅವರು ನ್ಯಾಯಾಲಯಕ್ಕೆ ಪಾವತಿಸಿರುವ ನ್ಯಾಯಾಲಯದ ಶುಲ್ಕವನ್ನು ಸಂಪೂರ್ಣವಾಗಿ ವಾಪಸ್ಸು ಪಡೆಯಲು ಅರ್ಹರಾಗಿರುತ್ತಾರೆ ಎಂದರು.
ಕಳೆದ ವರ್ಷ ನಡೆದಿದ್ದ ಇ-ಲೋಕ್ ಅದಾಲತ್ನಲ್ಲಿ 5,41,48,178 ರೂ. ಮೊತ್ತದ ವಿಚಾರಗಳಿಗೆ ಸಂಬಂಧಿಸಿದ 3,679 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಈ ಬಾರಿಯ ಲೋಕ್ ಅದಾಲತ್ಗೆ ಈಗಾಗಲೇ ಸುಮಾರು 8,000 ಪ್ರಕರಣಗಳನ್ನು ಗುರುತಿಸಲಾಗಿದೆ. ಇನ್ನೂ ಕೂಡ ಪಕ್ಷಕಾರರು ಲೋಕ್ ಅದಾಲತ್ನಲ್ಲಿ ಪಾಲ್ಗೊಳ್ಳುವ ಬಗ್ಗೆ ಪ್ರಾಧಿಕಾರಕ್ಕೆ ಮಾಹಿತಿ ನೀಡಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿರುವ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಅಥವಾ 0824-2448111 ಸಂಪರ್ಕಿಸಬಹುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪಾ ಮತ್ತಿತರರು ಉಪಸ್ಥಿತರಿದ್ದರು.