×
Ad

ಕೆಮ್ಮು, ಶೀತ, ಜ್ವರ ಲಕ್ಷಣವಿರುವ ರೋಗಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ : ಉಡುಪಿ ಜಿಲ್ಲಾಧಿಕಾರಿ ಜಗದೀಶ್

Update: 2020-12-09 19:16 IST

ಉಡುಪಿ, ಡಿ.9: ಶೀತ, ಕೆಮ್ಮು, ಜ್ವರ ಹಾಗೂ ಐಎಲ್‌ಐ ಚಿಕಿತ್ಸೆಗೆ ಬರುವ ರೋಗಿಗಳಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಬೇಕು. ತಪ್ಪಿದಲ್ಲಿ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಗಳ ನೊಂದಣಿಯನ್ನು ರದ್ದು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.

ಬುಧವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೊಂದಣಾ ಪ್ರಾಧಿಕಾರದ ಕುಂದುಕೊರತೆ ನಿವಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಇತ್ತೀಚಿನ ದಿನಗಳಲ್ಲಿ ಜನರು ಕೋವಿಡ್ ಸೋಂಕಿನ ಬಗ್ಗೆ ನಿರ್ಲಕ್ಷ್ಯ ವಹಿಸುತಿದ್ದಾರೆ. ಇದರಿಂದಾಗಿ ಎರಡನೇ ಅಲೆ ಪ್ರಾರಂಭವಾಗುವ ಸಾಧ್ಯತೆ ಗಳಿವೆ. ಇದಕ್ಕೆ ಕಡಿವಾಣ ಹಾಕಬೇಕು. ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೆಮ್ಮು, ಶೀತ, ಜ್ವರ ಹಾಗೂ ಐಎಲ್‌ಐ ಚಿಕಿತ್ಸೆ ಪಡೆಯಲು ಬಂದಂತಹ ರೋಗಿಗಳಿಗೆ ತಪ್ಪದೇ ಕೋವಿಡ್ ಪರೀಕ್ಷೆ ಮಾಡಿಸಬೇಕು. ಖಾಸಗಿ ವೈದ್ಯಕೀಯ ಸಂಸ್ಥೆಗಳು ರೋಗಿಗಳ ಬಗ್ಗೆ ನಿಖರ ಮಾಹಿತಿಯನ್ನು ನೀಡಬೇಕು ಎಂದರು.

ಜಿಲ್ಲೆಯಲ್ಲಿ ವೈದ್ಯಕೀಯ ವೃತ್ತಿಯನ್ನು ಪ್ರಾರಂಭಿಸುವ ಮುನ್ನ ಜಿಲ್ಲಾ ಮಟ್ಟದ ನೋಂದಣಿ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸಿ, ತಮ್ಮ ವೃತ್ತಿಯನ್ನು ಕೈಗೊಳ್ಳ ಬೇಕು.ನೊಂದಣಿ ಮಾಡದೇ ಚಿಕಿತ್ಸೆ ನೀಡಿದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ವಂಶ ಪಾರಂಪರ್ಯವಾಗಿ ವೈದ್ಯಕೀಯ ಚಿಕಿತ್ಸೆಯನ್ನು ನೀಡುತ್ತಿದ್ದೇವೆ ಎಂಬ ಹೆಸರಿನಲ್ಲಿ ಔಷಧೋಪಚಾರಗಳನ್ನು ನೀಡುವಾಗ ಅಲೋಪಥಿ ಔಷಧಿ ನೀಡುವುದು ಅಪರಾಧ. ಇಂತಹವರು ಕಂಡು ಬಂದಲ್ಲಿ ಕಾನೂನು ಅಡಿಯಲ್ಲಿ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕೆಂದು ತಾಲೂಕು ಆರೋಗ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಪ್ರಾಧಿಕಾರಕ್ಕೆ ಅಗತ್ಯ ದಾಖಲೆಗಳೊಂದಿಗೆ ಕ್ಲಿನಿಕ್ ಅಥವಾ ನರ್ಸಿಂಗ್ ಹೋಮ್‌ಗಳನ್ನು ತೆರೆಯಲು ಅರ್ಜಿ ಸಲ್ಲಿಸಿದಾಗ ನಿಯಮಾನುಸಾರ ಅವರು ಗಳಿಗೆ ಶೀಘ್ರದಲ್ಲಿ ಲೈಸೆನ್ಸ್ ನೀಡಬೇಕೆಂದು ತಿಳಿಸಿದರು.

ಜಿಲ್ಲೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಅನುಪಾತದಲ್ಲಿ ಅಸಮತೋಲನ ಉಂಟಾಗದಂತೆ ಎಚ್ಚರವಹಿಸಬೇಕು. ಪ್ರಸ್ತುತ 1000 ಗಂಡು ಮಕ್ಕಳಿಗೆ, 956 ಹೆಣ್ಣು ಮಕ್ಕಳಿದ್ದಾರೆ. ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಬ್ರೂಣಲಿಂಗ ಪತ್ತೆ ಮಾಡುವುದು ಕಾನೂನು ಬಾಹಿರವಾಗಿದ್ದು, ಅಂತಹ ಅಪರಾಧಕ್ಕೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದರು.

50,000ರೂ. ಬಹುಮಾನ: ಜಿಲ್ಲೆಯ ಸ್ಕಾನಿಂಗ್ ಸೆಂಟರ್‌ಗಳು ಸರಕಾರದ ನಿಯಮಾನುಸಾರ ಕಾರ್ಯ ನಿರ್ವಹಿಸಬೇಕು ಎಂದ ಅವರು. ಜಿಲ್ಲಾ ಮಟ್ಟದ ಸಮಿತಿಗಳು ಆಗಿಂದಾಗ್ಗೆ ಅನಿರೀಕ್ಷಿತ ಭೇಟಿ ನೀಡುವುದರೊಂದಿಗೆ ಅಲ್ಲಿನ ಚಟುವಟಿಕೆಗಳ ಮೇಲೆ ನಿಗಾ ವಹಿಸಬೇಕು ಎಂದರು. ಸಾರ್ವಜನಿಕರು ಯಾವುದೇ ಸ್ಕಾನಿಂಗ್ ಸೆಂಟರ್‌ಗಳಲ್ಲಿ ಬ್ರೂಣಲಿಂಗ ಪತ್ತೆ ಮಾಡುವ ಬಗ್ಗೆ ನಿಖರ ಮಾಹಿತಿ ಕೊಟ್ಟಲ್ಲಿ ಅಂತಹವರಿಗೆ 50,000 ರೂ. ಬಹುಮಾನ ನೀಡಲಾಗುವುದು ಎಂದರು.

ಆಸ್ಪತ್ರೆಗಳಲ್ಲಿನ ಬಯೋ- ಮೆಡಿಕಲ್ ತ್ಯಾಜ್ಯಗಳನ್ನು 48 ಗಂಟೆಗಳ ಒಳಗಾಗಿ ಶೇಖರಿಸುವುದರೊಂದಿಗೆ ವೈಜ್ಞಾನಿಕ ರೀತಿಯಲ್ಲಿ ಅವುಗಳನ್ನು ವಿಲೇವಾರಿ ಮಾಡಬೇಕೆಂದು ಸೂಚಿಸಿದ ಜಿ.ಜಗದೀಶ್, ಅವುಗಳ ಶೇಖರಣೆಯ ಬಗ್ಗೆ ಬಾರ್‌ಕೋಡ್ ವ್ಯವಸ್ಥೆಯನ್ನು ಮಾಡುವುದು ಸೂಕ್ತ ಎಂದರು.

ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದು ಸೇರಿದಂತೆ ಅಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಸೂಚನೆ ನೀಡಿದರು. ವೈದ್ಯಕೀಯ ಚಿಕಿತ್ಸೆ ನೀಡುವಾಗ ನಿರ್ಲಕ್ಷದಿಂದ ತೊಂದರೆಗೊಳ ಗಾದವರಿಂದ ಬಂದ ದೂರುಗಳನ್ನು ವಿಳಂಬವಿಲ್ಲದೇ ಇತ್ಯರ್ಥ ಪಡಿಸಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮರಾವ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಮತ್ತಿತರ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News