×
Ad

ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯಲ್ಲಿನ ಅಕ್ರಮ ತನಿಖೆಗೆ ಜಂಟಿ ಸದನ ಸಮಿತಿ ರಚನೆ: ಯಡಿಯೂರಪ್ಪ

Update: 2020-12-09 20:08 IST

ಬೆಂಗಳೂರು, ಡಿ. 9: ರಾಜ್ಯದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆಗೆ ಜಂಟಿ ಸದನ ಸಮಿತಿ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಭರವಸೆ ನೀಡಿದ್ದಾರೆ.

ಬುಧವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ವೆಂಕಟರೆಡ್ಡಿ ಮುದ್ನಾಳ್ ಕೇಳಿದ ಪ್ರಶ್ನೆಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಉತ್ತರ ನೀಡುತ್ತಿದ್ದ ವೇಳೆ ಸದಸ್ಯರು ಮಾಡಿದ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಶುದ್ಧ ನೀರಿನ ಘಟಕಗಳ ಸ್ಥಾಪನೆಯಲ್ಲಿ ಅಕ್ರಮ ನಡೆದಿರುವುದು ಸರಕಾರದ ಗಮನಕ್ಕೆ ಬಂದಿದೆ. ಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ಖರ್ಚು ಮಾಡಲಾಗಿದೆ. ಈ ನಿಟ್ಟಿನಲ್ಲಿ ಜಂಟಿ ಸದನ ಸಮಿತಿ ರಚಿಸಿ ತನಿಖೆ ನಡೆಸಿ, ಎರಡು ತಿಂಗಳ ಒಳಗಾಗಿ ಸದನಕ್ಕೆ ವರದಿ ಮಂಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಆರಂಭಕ್ಕೆ ಮಾತನಾಡಿದ ಆಡಳಿತ ಪಕ್ಷದ ಸದಸ್ಯ ಅರಗ ಜ್ಞಾನೇಂದ್ರ, ಶುದ್ಧ ಕುಡಿಯುವ ನೀರಿನ ಘಟಕವನ್ನು 3.50 ಲಕ್ಷ ರೂ.ನಿಂದ 4 ಲಕ್ಷ ರೂ.ವೆಚ್ಚದಲ್ಲಿ ಸ್ಥಾಪನೆ ಮಾಡಲು ಸಾಧ್ಯ ಆದರೆ, ಇದರಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ. ಈ ಕುರಿತಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಧ್ವನಿಗೂಡಿಸಿದ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್, ಜೆಡಿಎಸ್‍ನ ವೆಂಕಟರಾವ್ ನಾಡಗೌಡ, ಕಾಂಗ್ರೆಸ್‍ನ ಯು.ಟಿ ಖಾದರ್, ರಾಜ್ಯದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯಲ್ಲಿ ಅಕ್ರಮ ನಡೆದಿದ್ದು, ತನಿಖೆ ನಡೆಸಬೇಕು ಎಂದು ಸರಕಾರವನ್ನು ಆಗ್ರಹಿಸಿದರು.

ಅನಂತರ ಉತ್ತರ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ, ರಾಜ್ಯದಲ್ಲಿನ 18 ಸಾವಿರ ಶುದ್ಧ ನೀರಿನ ಘಟಕಗಳ ಪೈಕಿ ಶೇ.70ರಷ್ಟು ಘಟಕಗಳು ಸುಸ್ಥಿತಿಯಲ್ಲಿದ್ದು, ಶೇ.24ರಷ್ಟು ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ ಹಾಗೂ ಶೇ.4ರಷ್ಟು ಸಂಪೂರ್ಣ ಸ್ಥಗಿತಗೊಂಡಿವೆ. ಈ ನಿಟ್ಟಿನಲ್ಲಿ ಯಾವ ಸ್ವರೂಪದಲ್ಲಿ ತನಿಖೆ ನಡೆಸಬೇಕು ಎಂದು ಮಾರ್ಗದರ್ಶನ ಮಾಡಿದರೆ ಆ ರೀತಿಯಲ್ಲಿ ತನಿಖೆ ನಡೆಸುವುದು ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News