30ಕ್ಕೂ ಹೆಚ್ಚಿನ ದೇಶಗಳ ಅನಿವಾಸಿ ಕನ್ನಡಿಗರಿಂದ ಜ.2ರಂದು 'ಎನ್ಆರ್​ಐ ಅಪೀಲ್ ಡೇ' ಅಭಿಯಾನ

Update: 2020-12-16 15:59 GMT

ಮಂಗಳೂರು: ತಮಗಿರುವ ಸಮಸ್ಯೆಗಳ ಬಗ್ಗೆ, ಬಹುಕಾಲದಿಂದ ಈಡೇರದ ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲು 30ಕ್ಕೂ ಹೆಚ್ಚಿನ ದೇಶದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಪ್ರತಿನಿಧಿಸುವ ನೂರಕ್ಕೂ ಹೆಚ್ಚಿನ ಕನ್ನಡ ಪರ ಸಂಘಟನೆಗಳ ಸಹಯೋಗದಲ್ಲಿ ಒಗ್ಗಟ್ಟಾಗಿ ಟ್ವಿಟರ್ ಮತ್ತು ಈಮೇಲ್ ಅಭಿಯಾನ ನಡೆಸಲು ಮುಂದಾಗಿದ್ದು, ಜನವರಿ 2ರಂದು ಮಧ್ಯಾಹ್ನ ಭಾರತೀಯ ಕಾಲಮಾನ ಸಂಜೆ 4ಗಂಟೆಗೆ ಟ್ವಿಟರ್ ಅಭಿಯಾನಕ್ಕೆ ಏಕಕಾಲದಲ್ಲಿ ಚಾಲನೆ ನೀಡಿ ಸರಣಿ ಮನವಿಗಳನ್ನು, ಬೇಡಿಕೆಗಳನ್ನು ಇಡಲಿದ್ದಾರೆ.

ಉದ್ಯೋಗ ಹರಸಿ ವಿದೇಶಕ್ಕೆ ತೆರಳಿದರೂ ಹುಟ್ಟೂರು ಮತ್ತು ರಾಜ್ಯದ ಆಗುಹೋಗುಗಳ ಬಗ್ಗೆ ಅತಿ ಹೆಚ್ಚು ಕಾಳಜಿ ತೋರಿಸುವವರು ಅನಿವಾಸಿ ಕನ್ನಡಿಗರು. ರಾಜ್ಯದಲ್ಲಿ ನೆರೆ ಬಂದರೂ, ಬರ ಬಂದರೂ, ಯಾವುದೇ ಸಂಕಷ್ಟ ಬಂದೊದಗಿದರೂ ತಕ್ಷಣ ಲಕ್ಷಾಂತರ ಅನಿವಾಸಿಗಳು ಸಹಾಯಹಸ್ತ ಚಾಚುತ್ತಾರೆ. ಆದರೆ ಈ ಅನಿವಾಸಿಗಳ ಬೇಡಿಕೆಗಳಿಗೆ ಸ್ಪಂದಿಸುವವರೇ ಇಲ್ಲ ಎಂಬ ಆರೋಪವಿದ್ದು, ಬಹುಕಾಲದಿಂದ ಅವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಾ ಇದ್ದರೂ ಅಧಿಕಾರಕ್ಕೆ ಬಂದ ಯಾವುದೇ ಸರ್ಕಾರ ಈ ಬಗ್ಗೆ ಗಮನ ಹರಿಸಿಲ್ಲ. ಕೊರೋನ ಸಂಕಷ್ಟ ಸಂದರ್ಭದಲ್ಲಂತೂ ಇವರ ಗೋಳನ್ನು ಕೇಳುವವರೇ ಇರಲಿಲ್ಲ, ಇದೇ ಕಾರಣಕ್ಕೆ ಇದೀಗ ಅನಿವಾಸಿಗಳು ಒಗ್ಗಟ್ಟಾಗಿ ತಮ್ಮ ಬೇಡಿಕೆಗಳ ಮನವಿ ಸಲ್ಲಿಸಲೆಂದೇ ಒಂದು ದಿನವನ್ನು ಆಚರಿಸಲು ನಿರ್ಧರಿಸಿದ್ದು, ಜನಪ್ರತಿನಿಧಿಗಳು, ಮಂತ್ರಿಗಳು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆಯಲ್ಲಿ ಅಭಿಯಾನ ಕೈಗೊಂಡಿದ್ದಾರೆ.

12 ವರ್ಷಗಳ ಹಿಂದೆ ರಾಜ್ಯ ಸರ್ಕಾರ ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಕ್ಷೇಮಾಭಿವೃಧ್ಧಿಯಗಾಗಿ ಕನ್ನಡಿಗರ ಅನಿವಾಸಿ ಭಾರತೀಯ ಸಮಿತಿಯನ್ನು ರಚಿಸಲಾಗಿದ್ದು, ಆದರೆ ಕಳೆದ ಮೂರು ವರ್ಷಗಳಿಂದ ಈ ಸಮಿತಿಗೆ ಉಪಾಧ್ಯಕ್ಷರೇ ಇಲ್ಲದೇ ಅನಾಥವಾಗಿದೆ. ಶೀಘ್ರವೇ ಉಪಾಧ್ಯಕ್ಷರನ್ನು ನೇಮಿಸಬೇಕೆಂದು ಆಗ್ರಹಿಸಲಾಗಿದೆ.

ಎನ್ಆರೈ ಘಟಕದ ಉಪಾಧ್ಯಕ್ಷ ಕೂಡಲೇ ನೇಮಕವಾಗಬೇಕು, ಅದೂ ಅನಿವಾಸಿಗಳ ಬಗ್ಗೆ ಅರಿವಿರುವ ಒಬ್ಬ ಅನಿವಾಸಿ ಕನ್ನಡಿಗನೇ ಈ ಸ್ಥಾನಕ್ಕೆ ನೇಮಕವಾದರೆ ಅನಿವಾಸಿಗಳಿಗೆ ಅನುಕೂಲ. ಎಲ್ಲರೂ ನೇರವಾಗಿ ಸಿಎಂ ಅವರನ್ನು ಭೇಟಿಯಾಗಲು ಸಾಧ್ಯವಿಲ್ಲ. ಉಪಾಧ್ಯಕ್ಷರಿದ್ದರೆ ಸಮಸ್ಯೆ ತಿಳಿಸಲು ಸುಲಭ. ಇದಷ್ಟೇ ಅಲ್ಲದೆ ತಮ್ಮಲ್ಲಿರುವ ಹಲವಾರು ಸಮಸ್ಯೆಗಳ, ಬೇಡಿಕೆಗಳ ಪಟ್ಟಿಯೊಂದಿಗೆ ವಿಶ್ವದಾದ್ಯಂತ ಅನಿವಾಸಿ ಕನ್ನಡಿಗರು ಸರ್ಕಾರಕ್ಕೆ ಮನವಿ ಸಲ್ಲಿಸಲು ಜನವರಿ 2ರಂದು 'ಎನ್ಆರೈ ಅಪೀಲ್ ಡೇ' ಎಂದು ಟ್ವಿಟ್ಟರ್ ಅಭಿಯಾನ ಮತ್ತು ಇಮೇಲ್ ಮೂಲಕ ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ, ನೂರಾರು ಕನ್ನಡ ಪರ ಸಂಘಟನೆಗಳು ಭಾಗವಹಿಸಲಿದೆ

- ಹಿದಾಯತ್ ಅಡ್ಡೂರ್ , ಸಂಚಾಲಕರು
ಅಂತರ್ ರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್

ನಾವು ಕರ್ನಾಟಕವನ್ನು, ಕನ್ನಡವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುವವರು, ನಮಗೆ ಈ ಬಗ್ಗೆ ಹೆಮ್ಮೆಯಿದೆ, ಕೊರೋನ ಸಂಕಷ್ಟದ ಸಂದರ್ಭದಲ್ಲಿ ಅನಿವಾಸಿಗಳ ಗೋಳನ್ನು ಕೇಳುವವರು ಯಾರೂ ಇರಲಿಲ್ಲ, ಏಕೆಂದರೆ ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರೇ ಇರಲಿಲ್ಲ. ಇನ್ನಾದರೂ ನೇಮಿಸಿ, ಇನ್ನಾದರೂ ಅನಿವಾಸಿಗಳ ಮನವಿಗೆ ಸ್ಪಂದಿಸಿ.


- ಹೇಮೇಗೌಡ ಮಧು, ಅಧ್ಯಕ್ಷರು, ಕನ್ನಡ ಸಂಘ ಇಟಲಿ

ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುವ ಅನಿವಾಸಿಗಳು ಶಾಶ್ವತ ಪೌರತ್ವ ಪಡೆಯಲು ಬಂದವರಲ್ಲ, ಅವರು ದುಡಿದ ಪ್ರತಿಯೊಂದು ರೂಪಾಯಿ ತಾಯ್ನಾಡಿಗೆ ಕಳುಹಿಸಿ ರಾಜ್ಯದ ಆರ್ಥಿಕತೆಗೆ ಸಹಾಯ ಮಾಡುವವರು, ಮುಖ್ಯಮಂತ್ರಿ ಯಡಿಯೂರಪ್ಪನವರೇ, ಬಹಳಷ್ಟು ನಿರೀಕ್ಷೆಯೊಂದಿಗೆ ಅನಿವಾಸಿಗಳು ನಿಮ್ಮ ಮುಂದೆ ಬೇಡಿಕೆ ಇಡುತ್ತಿದ್ದೇವೆ, ನಮ್ಮ ಬೇಡಿಕೆಯನ್ನ ಕಡೆಗಣಿಸದಿರಿ.


-ರವಿ ಶೆಟ್ಟಿ, ಪೋಷಕರು ಮತ್ತು ಮಾಜಿ ಅಧ್ಯಕ್ಷರು, ತುಳು ಕೂಟ, ಕತರ್

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News