ಜ.1ರಿಂದ ಶಾಲೆ-ಕಾಲೇಜು ಆರಂಭ: ಸಿದ್ಧತೆಗಳ ಪರಿಶೀಲನೆ ನಡೆಸಿದ ಸಚಿವ ಸುರೇಶ್‍ ಕುಮಾರ್

Update: 2020-12-30 13:45 GMT

ಬೆಂಗಳೂರು, ಡಿ.30: ಕಟ್ಟುನಿಟ್ಟಿನ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಜ.1ರಿಂದಲೇ ಶಾಲೆ ಹಾಗೂ ಪದವಿಪೂರ್ವ ತರಗತಿಗಳನ್ನು ಪುನರಾರಂಭಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಸುರೇಶ್‍ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಬುಧವಾರ ನಗರದ ವಿವಿಧ ಸರಕಾರಿ ಹಾಗೂ ಖಾಸಗಿ ಪದವಿ ಪೂರ್ವ ಕಾಲೇಜು ಮತ್ತು ಸರಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಸಿದ್ಧತೆಗಳನ್ನು ಅವಲೋಕಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆ ಪ್ರಾರಂಭವಾಗುವ ಮೊದಲ ದಿನದ ಮೊದಲ ತರಗತಿ ಅವಧಿಯಲ್ಲಿ ಕೊರೋನ ಕುರಿತು ಮುನ್ನೆಚ್ಚರಿಕೆ ಕ್ರಮಗಳು, ಪಾಲಿಸಬೇಕಾದ ನಿಯಮಗಳ ಕುರಿತು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡಬೇಕೆಂದು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಶೇಷವಾಗಿ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯು ತರಗತಿಗಳ ಮಹತ್ವ ಮತ್ತು ಈ ಪರೀಕ್ಷೆಗಳಲ್ಲಿ ಕಷ್ಟಪಟ್ಟು ಓದಿ ಹೆಚ್ಚಿನ ಅಂಕಗಳೊಂದಿಗೆ ಉತ್ತೀರ್ಣರಾಗಬೇಕಾದ ಮಹತ್ವವನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ವಿವರಿಸಿ, ಅವರಲ್ಲಿ ಆತ್ಮವಿಶ್ವಾಸ ಮೂಡಿಸಬೇಕೆಂದು ಅವರು ಸಲಹೆ ನೀಡಿದ್ದಾರೆ.

ಸರಕಾರಿ ಶಾಲೆಗಳಲ್ಲಿ ಮತ್ತು ಕಾಲೇಜುಗಳಲ್ಲೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೊರತೆಯಿಲ್ಲ. ಇತ್ತೀಚಿನ ವರ್ಷಗಳಲ್ಲಿ ಸರಕಾರಿ ಶಾಲಾ-ಕಾಲೇಜುಗಳಿಂದ ಹೆಚ್ಚಿನ ಸಂಖ್ಯೆಯ ಪ್ರತಿಭಾವಂತರು ಹೊರಬರುತ್ತಿದ್ದಾರೆ. ಅನೇಕ ಕೊರತೆಗಳ ಮಧ್ಯೆಯೂ ಸರಕಾರಿ ಶಾಲೆಗಳಲ್ಲಿ ಅಭ್ಯಸಿಸಿರುವ ಅನೇಕ ವಿದ್ಯಾರ್ಥಿಗಳು ಉನ್ನತ ಮಟ್ಟಕ್ಕೆ ಏರಿದ್ದಾರೆ. ಈ ಬಾರಿಯ ಎಸೆಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲೂ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವಂತೆ ಶಿಕ್ಷಕರು ಉತ್ತೇಜನ ನೀಡಬೇಕೆಂದು ಅವರು ಆಶಿಸಿದರು.

ಮಲ್ಲೇಶ್ವರಂ 18ನೇ ಕ್ರಾಸ್, ಯಲಹಂಕದ ಸರಕಾರಿ ಪದವಿ ಪೂರ್ವ ಕಾಲೇಜುಗಳು, ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಬಿಇಎಸ್ ಪದವಿ ಪೂರ್ವ ಕಾಲೇಜು ಸೇರಿದಂತೆ ಹೆಬ್ಬಾಳ, ಮಲ್ಲೇಶ್ವರಂ, ಮತ್ತಿತರ ಕಡೆಯ ಸರಕಾರಿ ಪ್ರೌಢಶಾಲೆಗಳಿಗೆ ಸಚಿವರು ಭೇಟಿ ನೀಡಿ ಪರಿಶೀಲಿಸಿದರು.

ಶಾಲೆಗಳ 10ನೇ ತರಗತಿ ಮತ್ತು ಪದವಿ ಪೂರ್ವ ಕಾಲೇಜುಗಳ ದ್ವಿತೀಯ ಪಿಯು ವಿದ್ಯಾರ್ಥಿಗಳ ಸಂಖ್ಯೆಯನ್ನು ವಿಚಾರಿಸಿ ಎಷ್ಟು ತಂಡಗಳು ಮತ್ತು ಎಷ್ಟು ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ ಎಂಬುದನ್ನು ಸಚಿವ ಸುರೇಶ್‍ ಕುಮಾರ್ ಪರಿಶೀಲಿಸಿ, ಮುಖ್ಯೋಪಾಧ್ಯಾಯರೊಂದಿಗೆ ಚರ್ಚಿಸಿದರು.

ನಂತರ ರಾಜ್ಯದ ವಿವಿಧೆಡೆ ಕೈಗೊಳ್ಳಲಾಗಿರುವ ಸಿದ್ಧತೆಗಳ ಕುರಿತು ಡಿಡಿಪಿಐ, ಡಿಡಿಪಿಯು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ದೂರವಾಣಿ ಮೂಲಕ ಮಾಹಿತಿ ಪಡೆದು, ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದ್ದಾರೆ.

-ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಕೈತೊಳೆಯಲು ಸ್ಯಾನಿಟೈಸರ್ ಇಲ್ಲವೇ ಸಾಬೂನು ಬಳಸುವುದು ಕಡ್ಡಾಯ.

 -ಶಾಲಾ ಶಿಕ್ಷಕರು ಕೋವಿಡ್ ಪರೀಕ್ಷೆ ಫಲಿತಾಂಶದೊಂದಿಗೆ ಶಾಲೆಗೆ ಬರಬೇಕು. ಹಾಗೂ ಫೇಸ್‍ಮಾಸ್ಕ್ ಮತ್ತು ಫೇಸ್‍ಶೀಲ್ಡ್ ಧರಿಸುವುದು, ಮಕ್ಕಳ ಶಾರೀರಿಕ ಅಂತರವನ್ನು ಉಳಿಸಿಕೊಳ್ಳುವಲ್ಲಿ ಗಮನ ಹರಿಸಬೇಕು.

-ಆರೋಗ್ಯ, ರೋಗಲಕ್ಷಣಗಳ ಕುರಿತು ಆಗಾಗ್ಗೆ ಗಮನ ಹರಿಸುವುದು, ತರಗತಿ ಕೊಠಡಿಯಲ್ಲಿ ಚಿಕ್ಕ ಸಂಖ್ಯೆಯ ಮಕ್ಕಳನ್ನು ಸುರಕ್ಷಿತ ಅಂತರದಲ್ಲಿ ಕೂರಿಸುವುದು ಸೇರಿದಂತೆ ಕೋವಿಡ್ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು.

-ಸಂಜೆ ಶಾಲೆ ಮುಗಿದ ನಂತರ ಶಾಲಾವರಣ, ತರಗತಿ ಕೊಠಡಿ ಮತ್ತು ಶೌಚಾಲಯಗಳನ್ನು ಸ್ಯಾನಿಟೈಸರ್ ಮಾಡುವುದನ್ನು ಮರೆಯದೇ ಪಾಲಿಸಬೇಕಿದೆ.

-ಈಗಾಗಲೇ ಹೆಚ್ಚಿನ ದಿನಗಳು ಮುಗಿದಿರುವುದರಿಂದ ಉಪನ್ಯಾಸಕರು ಇಲಾಖೆ ನಿಗದಿಪಡಿಸುವ ಪಠ್ಯಕ್ರಮವನ್ನು ಪೂರ್ಣಗೊಳಿಸಲು ಕ್ರಮ ವಹಿಸಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಗದಿತ ಅವಧಿಯೊಳಗೆ ಪಠ್ಯಗಳನ್ನು ಮುಗಿಸುವುದರತ್ತ ಗಮನ ಹರಿಸಬೇಕು.

-ಕಳೆದ ವರ್ಷದ ಬಸ್ ಪಾಸುಗಳನ್ನೇ ಬಳಸಲು ಅವಕಾಶವಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುವುದಿಲ್ಲ ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಬೇಕು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News