ಕೊರೋನ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ: ಡಾ.ಕೆ.ಸುಧಾಕರ್

Update: 2021-01-01 17:55 GMT

ಬೆಂಗಳೂರು, ಜ.1: ಇಂದಿನಿಂದ 10ನೆ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗುತ್ತಿವೆ. ಮಕ್ಕಳ ಆರೋಗ್ಯ ಮತ್ತು ಶೈಕ್ಷಣಿಕ ಪ್ರಗತಿ ಎರಡನ್ನೂ ಗಮನದಲ್ಲಿಟ್ಟುಕೊಂಡು ಸರಕಾರ ಬಹಳ ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಈ ನಿರ್ಧಾರ ಕೈಗೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 8 ತಿಂಗಳ ನಂತರ ಶಾಲೆ ಕಾಲೇಜುಗಳಿಗೆ ಮರಳುತ್ತಿರುವ ವಿದ್ಯಾರ್ಥಿಗಳಿಗೆ, ಅವರ ಪೋಷಕರಿಗೆ ನನ್ನ ಕಿವಿಮಾತು. ಎಸೆಸೆಲ್ಸಿ ಪರೀಕ್ಷೆ ಸಂದರ್ಭದಲ್ಲೂ ಇದೇ ರೀತಿ ಆತಂಕ ಇದ್ದದ್ದು ಸಹಜ. ಆದರೆ ಅತ್ಯಂತ ಯಶಸ್ವಿಯಾಗಿ ಪರೀಕ್ಷೆ ನಡೆಸುವ ಮೂಲಕ ಸರಕಾರ ತನ್ನ ಬದ್ಧತೆ ನಿರೂಪಿಸಿತ್ತು ಎಂದರು.

ಈಗಲೂ ಸಹ ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ‘ಕೊರೋನ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ' ಎಂಬುದೇ ಸರಕಾರದ ಧ್ಯೇಯ. ಪೋಷಕರಲ್ಲಿ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಪೋಷಕರಲ್ಲಿ ನನ್ನ ಮನವಿ. ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಶಾಲೆಗೆ ಕಳುಹಿಸಿ. ಮಕ್ಕಳ ಆಗಮನಕ್ಕೆ ಅವರ ಶಾಲೆ ಕಾಯುತ್ತಿದೆ, ಶಿಕ್ಷಕರು ಮಕ್ಕಳನ್ನು ಸ್ವಾಗತಿಸಲು ಎದುರು ನೋಡುತ್ತಿದ್ದಾರೆ. ಸರಕಾರ ಸದಾ ನಿಮ್ಮೊಂದಿಗಿದೆ. ಬನ್ನಿ, ಕೊರೋನ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ ಎಂದು ಅವರು ಕರೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News