ಕೊಡಗು: ಜ.29, 30 ರಂದು ಕಸಾಪ ಸುವರ್ಣ ಮಹೋತ್ಸವ, 15ನೇ ಕನ್ನಡ ಸಾಹಿತ್ಯ ಸಮ್ಮೇಳನ

Update: 2021-01-01 18:02 GMT

ಮಡಿಕೇರಿ, ಜ.1: ಕನ್ನಡ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಘಟಕಕ್ಕೆ 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸುವರ್ಣ ಮಹೋತ್ಸವ ಹಾಗೂ ಜಿಲ್ಲೆಯ 15 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜ.29 ಮತ್ತು 30 ರಂದು ನಡೆಸಲು ನಿರ್ಧರಿಸಲಾಗಿದೆ. 

ನಗರದ ಜಿ.ಪಂ ಭವನದ ಶಾಸಕರ ಕಚೇರಿ ಸಭಾಂಗಣದಲ್ಲಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸುವರ್ಣ ಮಹೋತ್ಸವದ ಕುರಿತು ಚರ್ಚಿಸಲಾಯಿತು.   

ಸಭೆಯ ಆರಂಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಲೋಕೇಶ್ ಸಾಗರ್ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕಕ್ಕೆ 50 ವರ್ಷ ಕಳೆದಿದ್ದು, ಈ ಹಿನ್ನೆಲೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಜೊತೆಗೆ ಸುವರ್ಣ ಸಂಭ್ರಮ ಕಾರ್ಯಕ್ರಮವನ್ನು ಶಾಸಕರ ಮಾರ್ಗದರ್ಶನದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು.  

ಕಳೆದ ಐದು ವರ್ಷದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಹಿಳಾ, ಮಕ್ಕಳ, ಯುವ, ವಚನ, ಕೃಷಿ ಹೀಗೆ ಹಲವು ರೀತಿಯ ಸಾಹಿತ್ಯ ಸಮ್ಮೇಳನಗಳನ್ನು ಹಮ್ಮಿಕೊಳ್ಳಲಾಗಿದೆ. ಆ ದಿಸೆಯಲ್ಲಿ ಕನ್ನಡ ಸಾಹಿತ್ಯ ಜಿಲ್ಲಾ ಘಟಕಕ್ಕೆ 50 ವರ್ಷದ ಪ್ರಯುಕ್ತ ಸುವರ್ಣ ಸಂಭ್ರಮ ಸಂದರ್ಭದಲ್ಲಿ ಸಾಹಿತ್ಯ ಸಮ್ಮೇಳನವನ್ನು ಮೂರು ದಿನಗಳ ಕಾಲ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಕಸಾಪ ಜಿಲ್ಲಾ ಅಧ್ಯಕ್ಷರು ವಿವರಿಸಿದರು.  

ಸಮ್ಮೇಳದಲ್ಲಿ ಕವಿಗೋಷ್ಠಿ ಸೇರಿದಂತೆ ಹಲವು ಸಾಹಿತ್ಯಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ದಿನ ಒಂದಕ್ಕೆ ಒಂದು ಸಾವಿರ ಜನಕ್ಕೆ ಊಟದ ವ್ಯವಸ್ಥೆ ಮಾಡಲು ಉದ್ದೇಶಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.   

ಜಿಲ್ಲೆಯ ಕೊಡ್ಲಿಪೇಟೆ, ಶಿರಂಗಾಲ, ಕುಶಾಲನಗರ, ಸಿದ್ದಾಪುರ, ಗೋಣಿಕೊಪ್ಪ, ಕುಟ್ಟ, ಮಾಕುಟ್ಟ, ಸಂಪಾಜೆ, ಹೀಗೆ ಹಲವು ಗಡಿಭಾಗದಲ್ಲಿ ದ್ವಾರಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಲೋಕೇಶ್ ಸಾಗರ್ ಅವರು ಮಾಹಿತಿ ನೀಡಿದರು.  

ಬಳಿಕ ಮಾತನಾಡಿದ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಕೋವಿಡ್-19 ಹಿನ್ನೆಲೆ ಕಾರ್ಯಕ್ರಮವನ್ನು ಸರಳವಾಗಿ ಆಯೋಜಿಸಬೇಕು. ಎರಡು ದಿನಕ್ಕೆ ಮಾತ್ರ ಕಾರ್ಯಕ್ರಮ ಸೀಮಿತಗೊಳಿಸಬೇಕು. 500 ಜನರಿಗೆ ಊಟದ ವ್ಯವಸ್ಥೆ ಮಾಡುವಂತೆ ಅವರು ಸಲಹೆ ಮಾಡಿದರು.   

ಕೊರೊನಾ ಹಿನ್ನೆಲೆ ಬಹಳ ಮುನ್ನೆಚ್ಚರಿಕೆ ವಹಿಸಬೇಕು. ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳಬೇಕು. ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು ಎಂದು ಶಾಸಕರಾದ ಅಪ್ಪಚ್ಚು ರಂಜನ್ ಅವರು ಸಲಹೆ ಮಾಡಿದರು. ರಾಜ್ಯದಲ್ಲಿ ಕನ್ನಡ ಭಾಷೆ ಆಡಳಿತ ಭಾಷೆಯಾಗಿದ್ದು, ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಬೇಕು. ಆ ನಿಟ್ಟಿನಲ್ಲಿ ಸುವರ್ಣ ಜಿಲ್ಲಾ ಕನ್ನಡ ಸಾಹಿತ್ಯ ಮಹೋತ್ಸವಕ್ಕೆ ಎಲ್ಲಾ ಅಧಿಕಾರಿಗಳು ಅಗತ್ಯ ಸಹಕಾರ ನೀಡುವಂತೆ ಶಾಸಕರು ಕೋರಿದರು.  

ಸುವರ್ಣ ಸಂಭ್ರಮ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ  ಪದಾಧಿಕಾರಿಗಳೊಂದಿಗೆ ಅಧಿಕಾರಿಗಳು ಕೈಜೋಡಿಸುವಂತೆ ಶಾಸಕರು ಮನವಿ ಮಾಡಿದರು.  

ಸ್ವಾಗತ, ಹಣಕಾಸು, ಆಹಾರ, ವೇದಿಕೆ, ಸಾಂಸ್ಕೃತಿಕ, ಆರೋಗ್ಯ, ಮೆರವಣಿಗೆ, ಅಲಂಕಾರ, ಪ್ರಚಾರ, ಸ್ಮರಣ ಸಂಚಿಕೆ ಮತ್ತಿತರ ಉಪ ಸಮಿತಿಗಳನ್ನು ರಚಿಸಬೇಕು. ಪ್ರತಿಯೊಂದು ಎರಡು ಅಥವಾ ಮೂರು ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಉಪ ಸಮಿತಿಯನ್ನು ರಚಿಸುವಂತೆ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಸಲಹೆ ಮಾಡಿದರು.  

ಉಪ ಸಮಿತಿಗಳು ತಮ್ಮ ಹಂತದಲ್ಲಿ ಚರ್ಚಿಸಿ ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸುವಂತೆ ಶಾಸಕರು ಮನವಿ ಮಾಡಿದರು. ಆಹ್ವಾನ ಪತ್ರವನ್ನು ಪ್ರತಿಯೊಂದು ಇಲಾಖೆಗೆ ತಲುಪಿಸಬೇಕು. ಕೊರೋನ ವಾರಿಯರ್ಸ್‍ಗೆ ಸನ್ಮಾನಿಸುವಂತಾಗಬೇಕು. ಕೋವಿಡ್-19 ಲಾಕ್‍ಡೌನ್ ಸಂದರ್ಭದಲ್ಲಿ ಹೆಚ್ಚು ಶ್ರಮಿಸಿದ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಪೌರಕಾರ್ಮಿಕರು, ಪೊಲೀಸರು ಹೀಗೆ ಹಲವರಿಗೆ ಸನ್ಮಾನಿಸುವಂತಾಗಬೇಕು ಎಂದು ಶಾಸಕರು ಸಲಹೆ ಮಾಡಿದರು. 

ಜಿಲ್ಲೆಯ ಗಡಿ ಭಾಗದಲ್ಲಿ ದ್ವಾರ ಸ್ಥಾಪನೆ ಸಂಬಂಧ ಪ್ರತಿಕ್ರಿಯಿಸಿದ ಶಾಸಕರು ಪ್ರಾಯೋಜಕತ್ವದಿಂದ ದ್ವಾರಗಳ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸುವಂತೆ ಸಲಹೆ ಮಾಡಿದರು. 

ಉಪ ಸಮಿತಿಗಳ ರಚನೆ ಬಗ್ಗೆ ತಾಲೂಕು ಗೌರವ ಕಾರ್ಯದರ್ಶಿ ಕೆ.ಸಿ.ದಯಾನಂದ ಅವರು ಮಾಹಿತಿ ನೀಡಿದರು. ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಕೆ.ಎಸ್.ರಮೇಶ್, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷರಾದ ಕುಡೆಕಲ್ ಸಂತೋಷ್ ಅವರು ಹಲವು ಮಾಹಿತಿ ನೀಡಿದರು.  

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ ಅವರು ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸುವಂತಾಗಬೇಕು ಎಂದು ಸಲಹೆ ಮಾಡಿದರು.  

ಜಿ.ಪಂ.ಯೋಜನಾ ನಿರ್ದೇಶಕರಾದ ಶ್ರೀಕಂಠಮೂರ್ತಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೋ, ಪೌರಾಯುಕ್ತರಾದ ಎಸ್.ವಿ.ರಾಮದಾಸ್, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಬಿ.ಬಿ.ಪುಷ್ಪಾವತಿ, ತಾ.ಪಂ.ಇಒ ಲಕ್ಷ್ಮಿ, ಜಿಲ್ಲಾ ಖಜಾನಾಧಿಕಾರಿ ಪದ್ಮಜಾ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಶಶಿಧರ, ಜಿ.ಪಂ.ಎಂಜಿನಿಯರ್ ಶ್ರೀಕಂಠಯ್ಯ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಸುರೇಶ್ ಭಟ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ಗುರುರಾಜ್, ಕಾರ್ಮಿಕ ಇಲಾಖೆ ಅಧಿಕಾರಿ ಅನಿಲ್ ಭಗಟಿ, ಪ್ರಾದೇಶಿಕ ಸಾರಿಗೆ ಇಲಾಖೆಯ ರೀಟಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಂಜುನಾಥ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಮಂಜುನಾಥ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಚೇತನ್, ಕೊಡಗು ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕಿ ರೇವತಿ ರಮೇಶ್ ಇತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News