ನಟಿ ರಾಗಿಣಿ ದ್ವಿವೇದಿಗೆ ಜಾಮೀನು ನೀಡದಂತೆ ಸಿಸಿಬಿ ಪರ ವಕೀಲರಿಂದ ಸುಪ್ರೀಂಗೆ ಆಕ್ಷೇಪಣೆ ಅರ್ಜಿ

Update: 2021-01-04 11:48 GMT

ಬೆಂಗಳೂರು, ಜ.4: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ದ್ವಿವೇದಿಗೆ ಜಾಮೀನು ನೀಡದಂತೆ ಸಿಸಿಬಿ ಪರ ವಕೀಲರು ಸುಪ್ರೀಂಕೋರ್ಟ್ ಗೆ ಆಕ್ಷೇಪಣೆ ಅರ್ಜಿ ಸಲ್ಲಿಸಿದ್ದಾರೆ. ಇದರಿಂದ, ರಾಗಿಣಿಗೆ ಮತ್ತೊಂದು ತಲೆನೋವು ಶುರುವಾಗಿದೆ. 

ಜಾಮೀನು ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ ತ್ರಿಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ರಾಗಿಣಿಗೆ ಜಾಮೀನು ನೀಡದಂತೆ ವಕೀಲ ತುಷಾರ್ ಮೆಹ್ತಾ ಅವರು ಆಕ್ಷೇಪಣಾ ಅರ್ಜಿ ಸಲ್ಲಿಕೆ ಮಾಡಿದರು. ಡ್ರಗ್ಸ್ ಸೇವನೆ ಹಾಗೂ ಮಾರಾಟದಲ್ಲಿ ರಾಗಿಣಿ ಭಾಗಿಯಾಗಿದ್ದಾರೆಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 2020ರ ಸೆ.4ರಂದು ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಎನ್‍ಡಿಪಿಎಸ್ ಮತ್ತು ಐಪಿಸಿ ಕಾಯಿದೆಗಳಡಿಯಲ್ಲಿ ರಾಗಿಣಿ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಸದ್ಯ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ರಾಗಿಣಿ, ವಿಚಾರಣಾ ನ್ಯಾಯಾಲಯ, ಹೈಕೋರ್ಟ್ ನಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಕಳೆದ ಮೂರು ತಿಂಗಳಿನಿಂದ ರಾಗಿಣಿ ಜೈಲು ವಾಸ ಅನುಭವಿಸುತ್ತಿದ್ದಾರೆ. ಸದ್ಯ ಸುಪ್ರೀಂಕೋರ್ಟ್ ನಲ್ಲೂ ಅವರಿಗೆ ನಿರಾಸೆ ಆಗಿದೆ. ಡ್ರಗ್ಸ್ ಜಾಲದ ಜೊತೆಗೆ ನಂಟು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಸೆ.4ರಂದು ಅವರ ಮನೆ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ನಂತರ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.

ಕಳೆದ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ತ್ರಿಸದಸ್ಯ ನ್ಯಾಯಪೀಠ, ರಾಗಿಣಿ ವಿರುದ್ಧದ ಪ್ರಕರಣ ಸಂಬಂಧ ರಾಜ್ಯ ಸರಕಾರದ ಪ್ರತಿಕ್ರಿಯೆ ಕೇಳಿ ಸಿಸಿಬಿ ಪೊಲೀಸರಿಗೆ, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News