ಯುವಕನನ್ನು ಅಪಹರಿಸಿ ಬೆಂಕಿ ಹಚ್ಚಿ ಕೊಲೆ ಯತ್ನ: ದೂರು ದಾಖಲು
Update: 2021-01-04 23:21 IST
ಬೆಂಗಳೂರು, ಜ.4: ಯುವಕನನ್ನು ಅಪಹರಿಸಿ ಹಲ್ಲೆ ನಡೆಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಯತ್ನ ನಡೆಸಿದ ಘಟನೆ ನೆಲಮಂಗಲದ ಮಲ್ಲರಬಾಣವಾಡಿ ಬಳಿ ನಡೆದಿದೆ.
ಹಲ್ಲೆಯಿಂದ ಗಾಯಗೊಂಡಿರುವ ಆಂಧ್ರ ಮೂಲದ ಕುಮಾರ್(35) ಎಂಬಾತ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ 8ನೇ ಮೈಲಿ ಬಸ್ ನಿಲ್ದಾಣದ ಬಳಿ ನಿಂತಿದ್ದ ಕುಮಾರ್ ರನ್ನು ಕಾರಿನಲ್ಲಿ ಅಪಹರಿಸಿದ್ದ ಮೂವರು ದುಷ್ಕರ್ಮಿಗಳು ಹಲ್ಲೆ ಮಾಡಿದ್ದು ಬಳಿಕ ಪ್ರಜ್ಞೆ ಕಳೆದುಕೊಂಡಿದ್ದ ಕುಮಾರ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ಸಂದರ್ಭದಲ್ಲಿ ಎಚ್ಚರಗೊಂಡ ಕುಮಾರ್ ಸ್ಥಳೀಯರ ನೆರವಿನಿಂದ ನೆಲಮಂಗಲ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.