ಪಕ್ಷ, ಸರಕಾರದ ವಿರುದ್ಧ ಮಾತನಾಡಿದರೆ ಶಿಸ್ತು ಕ್ರಮ: ಸಚಿವ ಆರ್.ಅಶೋಕ್ ಎಚ್ಚರಿಕೆ
Update: 2021-01-06 12:10 GMT
ಬೆಂಗಳೂರು, ಜ. 6: ಯಾರೂ ಪಕ್ಷ ಮತ್ತು ಸರಕಾರದ ವಿರುದ್ಧ ಮಾತನಾಡಬಾರದು. ಹಾಗೇನಾದರೂ ಬಹಿರಂಗ ಹೇಳಿಕೆಗಳನ್ನು ನೀಡಿದರೆ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಪಕ್ಷದ ಕೋರ್ ಕಮಿಟಿ ತೀರ್ಮಾನ ಮಾಡಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಇಂದಿಲ್ಲಿ ತಿಳಿಸಿದ್ದಾರೆ.
ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎರಡು ದಿನ ನಡೆದ ಶಾಸಕರ ಸಭೆಯಲ್ಲಿ ಎಲ್ಲರೂ ಮುಖ್ಯಮಂತ್ರಿ ಯಡಿಯೂರಪ್ಪನವರ ಬಳಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಯಡಿಯೂರಪ್ಪ ನಾಯಕತ್ವದ ಬಗ್ಗೆ ಎಲ್ಲ ಶಾಸಕರೂ ಬೆಂಬಲ ನೀಡಿದ್ದಾರೆ ಎಂದು ಹೇಳಿದರು.
ಯಾವುದೇ ವಿಚಾರಗಳಿದ್ದರೂ ಪಕ್ಷದ ಚೌಕಟ್ಟಿನಲ್ಲಿ ಮಾತನಾಡಬೇಕು. ಅದನ್ನು ಬಿಟ್ಟು ಬಹಿರಂಗವಾಗಿ ಮಾತನಾಡಿದರೆ ಪಕ್ಷ ಶಿಸ್ತು ಕ್ರಮ ಕೈಗೊಳ್ಳಲಿದೆ. ಶಾಸಕರ ವಿರುದ್ಧ ರಾಜ್ಯಮಟ್ಟದಲ್ಲಿ ಶಿಸ್ತು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಪಕ್ಷದ ರಾಷ್ಟ್ರೀಯ ಘಟಕ ಈ ಬಗ್ಗೆ ಕ್ರಮ ವಹಿಸಲಿದೆ ಎಂದು ಅವರು ತಿಳಿಸಿದರು.