ಗೋಹತ್ಯೆ ನಿಷೇಧ ಸುಗ್ರೀವಾಜ್ಞೆ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್
ಬೆಂಗಳೂರು, ಜ.7: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ, ಸಂರಕ್ಷಣಾ ವಿಧೇಯಕ-2020ಕ್ಕೆ ಸಂಬಂಧಿಸಿದ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ನಗರದ ಸಾಮಾಜಿಕ ಕಾರ್ಯಕರ್ತ ಆರೀಫ್ ಜಮೀಲ್ ಎಂಬುವವರು ಸುಗ್ರೀವಾಜ್ಞೆಯನ್ನು ಅಸಂವಿಧಾನಿಕ ಎಂದು ಘೋಷಿಸಿ ರದ್ದುಪಡಿಸಬೇಕು ಹಾಗೂ ಅರ್ಜಿ ಇತ್ಯರ್ಥವಾಗುವವರೆಗೆ ಸುಗ್ರೀವಾಜ್ಞೆ ಜಾರಿಗೆ ತಡೆ ನೀಡಬೇಕೆಂದು ಮನವಿ ಮಾಡಿದ್ದಾರೆ.
ಅರ್ಜಿದಾರರ ಪರ ವಾದಿಸಿದ ವಕೀಲ ರೆಹಮತ್ ಉಲ್ಲಾ ಕೊತ್ವಾಲ್ ಅವರು, ಅರ್ಜಿಯಲ್ಲಿರುವ ವಿಚಾರಗಳು ಅತ್ಯಂತ ಗಂಭೀರವಾಗಿದ್ದು, ತುರ್ತು ವಿಚಾರಣೆ ನಡೆಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾದ ಏಳು ದಿನಗಳ ಒಳಗೆ ವಿಚಾರಣೆ ನಿಗದಿಯಾಗಲಿದೆ. ಈ ಕೂಡಲೇ ವಿಚಾರಣೆಗೆ ಪರಿಗಣಿಸುವ ತುರ್ತು ಅಗತ್ಯವೇನಿದೆ ಎಂದು ಪ್ರಶ್ನಿಸಿತು.
ಇದಕ್ಕೆ ಉತ್ತರಿಸಿದ ವಕೀಲರು, ರಾಜ್ಯಪಾಲರ ಒಪ್ಪಿಗೆ ಮೇರೆಗೆ ಸರಕಾರ ಮಂಗಳವಾರ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ, ಸಂರಕ್ಷಣಾ ವಿಧೇಯಕಕ್ಕೆ ಸುಗ್ರೀವಾಜ್ಞೆ ಹೊರಡಿಸಿದೆ. ಹೀಗಾಗಿ, ಸಮಾಜದಲ್ಲಿ ಗೊಂದಲ ಹಾಗೂ ಸಂಘರ್ಷ ನಿರ್ಮಾಣವಾಗುವ ಸಾಧ್ಯತೆಯಿದ್ದು, ತುರ್ತಾಗಿ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು. ವಕೀಲರ ವಾದ ಒಪ್ಪದ ಪೀಠ, ಅರ್ಜಿ ಪ್ರಕ್ರಿಯೆಯಂತೆ ವಿಚಾರಣೆಗೆ ಬರಲಿ ಎಂದು ಸೂಚಿಸಿತು.
ಅರ್ಜಿದಾರರ ಮನವಿ ಏನು: ರಾಜ್ಯದಲ್ಲಿ ಎಲ್ಲಾ ವಯಸ್ಸಿನ ಆಕಳು, ಕರು, ಗೂಳಿ, ಎತ್ತು ಹಾಗೂ 13 ವರ್ಷದೊಳಗಿನ ಕೋಣ ಅಥವಾ ಎಮ್ಮೆಗಳ ಹತ್ಯೆಯನ್ನು ನಿಷೇಧಿಸಲು ಸರಕಾರ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020 ರೂಪಿಸಿದೆ. ವಿಧಾನಸಭೆಯಲ್ಲಿ ವಿಧೇಯಕಕ್ಕೆ ಅನುಮೋದನೆ ದೊರೆತಿದೆ. ಆದರೆ, ವಿಧಾನ ಪರಿಷತ್ತಿನಲ್ಲಿ ಅನುಮೋದನೆ ದೊರೆತಿರಲಿಲ್ಲ. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ನಿಯಮ ಜಾರಿ ಮಾಡಲು ರಾಜ್ಯಪಾಲರ ಒಪ್ಪಿಗೆ ಕೋರಿತ್ತು.
ರಾಜ್ಯಪಾಲರು ಒಪ್ಪಿಗೆ ನೀಡಿದ್ದರಿಂದ ಸರಕಾರ ಮಂಗಳವಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿರುವ ಅರ್ಜಿದಾರರು, 1964ರಿಂದ ಕರ್ನಾಟಕದಲ್ಲಿ ಜಾನುವಾರು ಸಂರಕ್ಷಣೆ ಮತ್ತು ಗೋ ಹತ್ಯೆ ತಡೆ ಕಾಯ್ದೆ ಜಾರಿಯಲ್ಲಿದೆ. ಹೀಗಾಗಿ, ಜಾನುವಾರು ರಕ್ಷಣೆ ಹೆಸರಿನಲ್ಲಿ ಸುಗ್ರೀವಾಜ್ಞೆ ಅಗತ್ಯವೇನಿಲ್ಲ. ಬಿಹಾರ ಮತ್ತು ಗುಜರಾತ್ ರಾಜ್ಯಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ, 15 ವರ್ಷ ಮೀರಿದ ಹಸು ಮತ್ತು ಎತ್ತುಗಳನ್ನು ವ್ಯವಸಾಯ, ಹೈನುಗಾರಿಕೆ ಉಪಯೋಗಕ್ಕೆ ಬರುವುದಿಲ್ಲ. ಅಂತಹ ಹಸು ಹಾಗೂ ಎತ್ತುಗಳನ್ನು ಕಸಾಯಿಖಾನೆಗೆ ರೈತರು ಮಾರಾಟ ಮಾಡಬಹುದು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.
ಅಲ್ಲದೇ, ರಾಜ್ಯದ ಈ ಸುಗ್ರೀವಾಜ್ಞೆ ಸಂವಿಧಾನದ ಮೂಲ ತತ್ವ ಹಾಗೂ ಆಶಯಗಳಿಗೆ ವಿರುದ್ಧವಾಗಿದೆ. ಮುಸ್ಲಿಮರು, ದಲಿತರು ಮತ್ತು ಇತರೆ ಅಲ್ಪಸಂಖ್ಯಾತರ ಆಹಾರದ ಹಕ್ಕನ್ನು ಕಸಿದುಕೊಳ್ಳಲಿದೆ. ವಿಧಾನಪರಿಷತ್ತಿನಲ್ಲಿ ಅಂಗೀಕಾರ ದೊರೆಯದೇ ಹೋದರೂ ಸರಕಾರ ಸುಗ್ರೀವಾಜ್ಞೆ ಹೊರಡಿಸಿರುವುದು ಏಕಪಕ್ಷೀಯ ಮತ್ತು ತಾರತಮ್ಯದಿಂದ ಕೂಡಿದೆ. ಸಂವಿಧಾನದ ಆಶಯ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಮಾಡುವ ಸುಗ್ರೀವಾಜ್ಞೆಯನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.