ಚೀನಾಕ್ಕೆ ಸೆಡ್ಡು ಹೊಡೆಯುವ ಯೋಜನೆಗಳನ್ನು ಅಂದೇ ರೂಪಿಸಿದ್ದೆ: ಮಾಜಿ ಸಿಎಂ ಕುಮಾರಸ್ವಾಮಿ

Update: 2021-01-09 11:33 GMT

ಬೆಂಗಳೂರು, ಜ. 9: ‘ಕೇಂದ್ರ ಸರಕಾರದ ಆತ್ಮನಿರ್ಭರ ಯೋಜನೆ ಅಡಿಯಲ್ಲಿ ಆಟಿಕೆ ಉತ್ಪಾದನಾ ಘಟಕ ಆರಂಭಿಸುತ್ತಿರುವುದಾಗಿ ರಾಜ್ಯ ಸರಕಾರ ಹೇಳುತ್ತಿದೆ. ಆದರೆ, ಕೇಂದ್ರ ಸರಕಾರ ‘ಆತ್ಮನಿರ್ಭರ' ಕಲ್ಪನೆ ಜಾರಿಗೆ ತರುವುದಕ್ಕೂ ಮೊದಲೇ ನನ್ನ ಸರಕಾರ ಸ್ವಾವಲಂಬಿ ಕಲ್ಪನೆಯನ್ನು ಹೊಂದಿತ್ತು. ಅದರ ಭಾಗವಾಗಿಯೇ ಚೀನಾಕ್ಕೆ ಸೆಡ್ಡು ಹೊಡೆಯುವ ಯೋಜನೆಗಳನ್ನು ರೂಪಿಸಿತ್ತು' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಶನಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ನನ್ನ ಸರಕಾರದ ಅವಧಿಯಲ್ಲಿ ಇಂಥ ಹಲವು ಕಾರ್ಯಕ್ರಮಗಳನ್ನು ಕೊಡಲಾಗಿದೆ. ಅವುಗಳಲ್ಲಿ ಈ ನೆಲದ ಸ್ವಾಭಿಮಾನ ಸಾರುವ ಯೋಜನೆಗಳೂ ಇವೆ ಎಂಬುದು ಗಮನಾರ್ಹ. ಅವುಗಳನ್ನು ಮರಳಿ ಜಾರಿಗೆ ತರುವುದರ ಕಡೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಿಂತನೆ ನಡೆಸುವುದು ಅತ್ಯಗತ್ಯ. ನನ್ನ ಯೋಜನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ, ಆದಾಯ ಸಿಗುವ ಅಂಶಗಳು ಪ್ರಧಾನ ಎಂದು ತಿಳಿಸಿದ್ದಾರೆ.

‘7 ಲಕ್ಷ ಕೋಟಿ ರೂ. ಮೊತ್ತದ ಜಾಗತಿಕ ಆಟಿಕೆ ಮಾರುಕಟ್ಟೆಯಲ್ಲಿ ಚೀನಾ ಪ್ರಬಲ ಹಿಡಿತ ಹೊಂದಿದೆ. ಇದರಲ್ಲಿ ಅಲ್ಪಪಾಲು ಕಸಿದರೂ ನಮ್ಮವರಿಗೆ ಉದ್ಯೋಗ ನೀಡಬಹುದು, ಆದಾಯ ಕೊಡಿಸಬಹುದು ಎಂಬುದು ನನ್ನ ಸರಕಾರದ ದೂರದೃಷ್ಟಿಯಾಗಿತ್ತು. ಅದಕ್ಕೆ ಮರು ಚಾಲನೆ ನೀಡುತ್ತಿರುವ, ನನ್ನ ಯೋಜನೆಯನ್ನು ಅನುಸರಿಸುತ್ತಿರುವ ಯಡಿಯೂರಪ್ಪ ಅವರಿಗೆ ಅಭಿನಂದನೆಗಳು.' ಎಂದು ಕುಮಾರಸ್ವಾಮಿ ಹೇಳಿದ್ದಾರೆ.•

‘ಚೀನಾ ಹಿಡಿತದಲ್ಲಿರುವ ಜಾಗತಿಕ ಉತ್ಪಾದನೆ ಮಾರುಕಟ್ಟೆಯಲ್ಲಿ ಭಾರತವೂ ಪಾಲು ಪಡೆಯಬೇಕೆಂಬ ಉದ್ದೇಶದಿಂದ ನಾನು ಮುಖ್ಯಮಂತ್ರಿ ಆಗಿದ್ದಾಗ ‘Compete With China’ರೂಪಿಸಲಾಗಿತ್ತು. ಇದಕ್ಕಾಗಿ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್ ರಚಿಸಿ, 500 ಕೋಟಿ ರೂ.ಹಣ ನೀಡಲಾಗಿತ್ತು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆ ಕ್ಲಸ್ಟರ್ ಗೆ ಇಂದು ಮರು ಚಾಲನೆ ನೀಡುತ್ತಿದ್ದಾರೆ!' ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News