ಜ.15ರಿಂದ ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್, ಡಿಪ್ಲೋಮ ಆಫ್‍ಲೈನ್ ತರಗತಿ: ಅಶ್ವತ್ಥನಾರಾಯಣ

Update: 2021-01-11 12:47 GMT

ಬೆಂಗಳೂರು, ಜ.11: ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್ ಮತ್ತು ಡಿಪ್ಲೋಮ ತರಗತಿಗಳ ಎಲ್ಲ ವರ್ಷಗಳ ವಿದ್ಯಾರ್ಥಿಗಳಿಗೆ ಆಫ್‍ಲೈನ್ ತರಗತಿಗಳನ್ನು ಜ.15ರಿಂದ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದರು.

ಸೋಮವಾರ ವಿಕಾಸಸೌಧದಲ್ಲಿನ ತಮ್ಮ ಕಚೇರಿಯಲ್ಲಿ ಈ ಸಂಬಂಧ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಅಂತಿಮ ವರ್ಷದ ಆಫ್‍ಲೈನ್ ತರಗತಿಗಳು ಈಗಾಗಲೆ ಆರಂಭವಾಗಿ ಯಶಸ್ವಿಯಾಗಿ ನಡೆಯುತ್ತಿವೆ. ಉಳಿದಂತೆ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳು ತಮಗೂ ನೇರ ತರಗತಿಗಳನ್ನು ಆರಂಭಿಸುವಂತೆ ಒತ್ತಾಯ ಮಾಡುತ್ತಿದ್ದರು. ಅದರಂತೆ, ಈ ತಿಂಗಳಿನಿಂದಲೇ ತರಗತಿಗಳನ್ನು ಆರಂಭ ಮಾಡುತ್ತಿದ್ದೇವೆ ಎಂದರು.

ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರಥಮ, ದ್ವಿತೀಯ ಹಾಗೂ ಮೂರನೆ ವರ್ಷದ ಆಫ್‍ಲೈನ್ ತರಗತಿಗಳು ಕೂಡ ಇದೇ ದಿನ ಆರಂಭವಾಗುತ್ತಿವೆ. ಇದರ ಜತೆಗೆ, ತರಗತಿಗಳು ಆರಂಭವಾಗುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್‍ಗಳನ್ನು ತೆರೆಯಲಾಗುತ್ತಿದೆ. ಕಾಲೇಜುಗಳ ಬಸ್ ವ್ಯವಸ್ಥೆಯೂ ಪುನಾರಂಭವಾಗುತ್ತಿದೆ. ಕೋವಿಡ್ ಮಾರ್ಗಸೂಚಿಯಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಕಾಲೇಜುಗಳಲ್ಲಿ ಕೋವಿಡ್ ತಪಾಸಣೆ, ಸ್ಯಾನಿಟೈಸ್ ವ್ಯವಸ್ಥೆ, ಸುರಕ್ಷಿತ ಅಂತರ ಪಾಲನೆ ಸೇರಿದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳೂ ಇರುತ್ತವೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಬಸ್ ಪಾಸ್ ಬಗ್ಗೆಯೂ ಕ್ರಮ: ಈಗಾಗಲೇ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗುವಂತೆ ಬಸ್ ಪಾಸ್‍ಗಳನ್ನು ತ್ವರಿತವಾಗಿ ವಿತರಿಸುವಂತೆ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಸಾರಿಗೆ ಇಲಾಖೆಯು ಒಪ್ಪಿದ್ದು, ಆಯಾ ಕಾಲೇಜುಗಳು ತಮ್ಮ ವ್ಯಾಪ್ತಿಯಲ್ಲಿರುವ ಸಾರಿಗೆ ವಿಭಾಗೀಯ ಕಚೇರಿಗಳ ಅಧಿಕಾರಿಗಳ ಜತೆ ಸಂಪರ್ಕ ಸಾಧಿಸಿ ಆದಷ್ಟು ಬೇಗ ಬಸ್‍ಪಾಸ್‍ಗಳ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ ಎಂದು ಅಶ್ವತ್ಥನಾರಾಯಣ ಹೇಳಿದರು.

ಎನ್‍ಸಿಸಿ ಮತ್ತು ಎನ್ನೆಸೆಸ್ ತರಬೇತಿಗೂ ಅವಕಾಶ ನೀಡಲಾಗಿದೆ. ಎನ್‍ಸಿಸಿ ಕೂಡ ಪರೀಕ್ಷೆಗಳನ್ನು ಆಯೋಜಿಸಬೇಕಾಗಿದ್ದು ಇದಕ್ಕಾಗಿ ಅಲ್ಪಾವಧಿಯ ಶಿಬಿರಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಬಿ-ಸರ್ಟಿಫಿಕೇಟ್ ಪರೀಕ್ಷೆಗೆ ಮೂರು ದಿನಗಳ ಹಾಗೂ ಸಿ-ಸರ್ಟಿಫಿಕೇಟ್ ಪರೀಕ್ಷೆಗೆ ಐದು ದಿನಗಳ ಶಿಬಿರ ನಡೆಸುವುದಕ್ಕೂ ಅವಕಾಶ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಪ್ರತ್ಯೇಕ ಎಸ್‍ಒಪಿ: ಪೂರ್ಣ ಪ್ರಮಾಣದಲ್ಲಿ ಹಾಸ್ಟೆಲ್‍ಗಳನ್ನು ತೆರೆಯಲು ನಿರ್ಧರಿಸಲಾಗಿದ್ದು, ಅದಕ್ಕಾಗಿ ಪ್ರತ್ಯೇಕ ಮಾರ್ಗಸೂಚಿ(ಎಸ್‍ಒಪಿ) ಸಿದ್ಧಪಡಿಸುವಂತೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳನ್ನು ಕೋರಲಾಗಿದೆ. ಕಾಲೇಜುಗಳಲ್ಲಿ ಗ್ರಂಥಾಲಯ, ಕ್ಯಾಂಟೀನ್, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆ, ಕ್ರೀಡಾಕೂಟ ಆಯೋಜನೆಗೂ ಎಸ್‍ಒಪಿಯನ್ನು ಸಿದ್ಧಪಡಿಸಲಾಗಿದೆ ಎಂದು ಅವರು ತಿಳಿಸಿದರು.

ಪರೀಕ್ಷೆ ವೇಳಾಪಟ್ಟಿ ಶೀಘ್ರ: ಅಂತಿಮವಾಗಿ, ಏಕಕಾಲಕ್ಕೆ ಎಲ್ಲೆಡೆ ಆಫ್‍ಲೈನ್‍ನಲ್ಲಿಯೆ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಈಗಾಗಲೆ ರಾಜ್ಯದ ಎಲ್ಲ ಸರಕಾರಿ-ಖಾಸಗಿ ವಲಯದ ವಿವಿಗಳ ಕುಲಪತಿಗಳ ಜತೆ ಸಮಾಲೋಚನೆ ನಡೆಸಲಾಗಿದೆ. ಆದಷ್ಟು ಬೇಗ ಪರೀಕ್ಷೆ ದಿನದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್, ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೆದ್ ಅಖ್ತರ್, ಹಿಂದುಳಿದ ವರ್ಗಗಳ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ರವಿಕುಮಾರ್ ಸುರಪುರ್, ಹಿಂದುಳಿದ ವರ್ಗಗಳ ಇಲಾಖೆ ಆಯುಕ್ತ ವಸಂತ ಕುಮಾರ್ ಮುಂತಾದ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News