ಮಂತ್ರಿಮಂಡಲ ವಿಸ್ತರಣೆಗೆ ಮುಹೂರ್ತ ನಿಗದಿ: ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ ?

Update: 2021-01-11 14:18 GMT

ಬೆಂಗಳೂರು, ಜ.11: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ವರಿಷ್ಠರು ಕೊನೆಗೂ ಒಪ್ಪಿಗೆ ಸೂಚಿಸಿದ್ದಾರೆ. ಜ.13 ಅಥವಾ ಜ.14ರಂದು ನೂತನ ಸಚಿವರು ಮಂತ್ರಿ ಮಂಡಲಕ್ಕೆ ಸೇರ್ಪಡೆಯಾಗಲಿದ್ದು, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ದಿನಗಣನೆ ಆರಂಭವಾಗಿದೆ.

ಪರಿಷತ್ ಸದಸ್ಯರಾದ ಆರ್.ಶಂಕರ್, ಎಂ.ಟಿ.ಬಿ.ನಾಗರಾಜ್, ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರೀ ಬಹುಮತದಿಂದ ಆಯ್ಕೆಯಾದ ಮುನಿರತ್ನ, ಬೆಳಗಾವಿಯ ಹುಕ್ಕೇರಿ ಕ್ಷೇತ್ರದ ಶಾಸಕ ಉಮೇಶ್ ಕತ್ತಿ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಳ ಕ್ಷೇತ್ರದ ಹಿರಿಯ ಶಾಸಕ ಎಸ್.ಎಂ.ಅಂಗಾರ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸೇರಿದಂತೆ ಒಟ್ಟು 7 ಮಂದಿ ನೂತನವಾಗಿ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಗೊತ್ತಾಗಿದೆ.

ಈ ಮಧ್ಯೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ‘ಮೂಲ ಕಾರಣಕರ್ತ' ಎಂದು ಹೇಳಲಾಗುತ್ತಿರುವ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ, ವಿಧಾನಸಭೆಯಲ್ಲಿ ಸರಕಾರದ ಮುಖ್ಯಸಚೇತಕ ಆಗಿರುವ ಕಾರ್ಕಳ ಕ್ಷೇತ್ರದ ಶಾಸಕ ವಿ.ಸುನೀಲ್ ಕುಮಾರ್, ಸಿಎಂ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಹನ್ನೆರಡಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳಿದ್ದು, ಯಾರಿಗೆ ಸಚಿವ ಸ್ಥಾನ ದೊರೆಯಲಿದೆ ಎಂಬುದು ಕುತೂಹಲ ಸೃಷ್ಟಿಸಿದೆ.

ಈ ನಡುವೆ ನಿರೀಕ್ಷಿತ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸುವಲ್ಲಿ ವಿಫಲವಾಗಿರುವ ಕೆಲ ಸಚಿವರನ್ನು ಸಂಪುಟದಿಂದ ಕೈಬಿಟ್ಟು ಆ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಲು ವರಿಷ್ಠರು ಉದ್ದೇಶಿಸಿದ್ದಾರೆಂದು ಹೇಳಲಾಗುತ್ತಿದೆ. ಇದೇ ವೇಳೆ ಕೆಲ ಸಚಿವರ ಖಾತೆಗಳನ್ನು ಅದಲು-ಬದಲು ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಪಕ್ಷದ ಮುಖಂಡರು ಇಚ್ಛಿಸಿದ್ದಾರೆಂದು ತಿಳಿದು ಬಂದಿದೆ.

‘ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರಚನೆಯೋ' ಎಂಬುದು ಇನ್ನೂ ನಿಗೂಢವಾಗಿದ್ದು, ವರಿಷ್ಠರ ಸೂಚನೆಯ ಮೇಲೆಯೇ ಸಂಪುಟ ಸೇರ್ಪಡೆಯಾಗಲಿರುವ ಸಚಿವ ಸ್ಥಾನ ಆಕಾಂಕ್ಷಿಗಳ ಮತ್ತು ಸಚಿವ ಸಂಪುಟದಲ್ಲಿರುವ ಮಂತ್ರಿಗಳ ಭವಿಷ್ಯ ಅಡಗಿದೆ.

ಏಳು ಮಂದಿ ಮಂತ್ರಿ ಮಂಡಲಕ್ಕೆ: ಸಚಿವ ಸಂಪುಟ ವಿಸ್ತರಣೆಗೆ ಪಕ್ಷದ ವರಿಷ್ಠರು ಹಸಿರು ನಿಶಾನೆ ತೋರಿಸಿದ್ದು, ಇದೇ ತಿಂಗಳ 13 ಅಥವಾ 14ಕ್ಕೆ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜರುಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ, ಕರ್ನಾಟಕ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಜ.13 ಅಥವಾ 14ಕ್ಕೆ ರಾಜ್ಯಕ್ಕೆ ಆಗಮಿಸಲಿದ್ದು, ಅವರು ರಾಜ್ಯಕ್ಕೇ ಭೇಟಿ ನೀಡುವುದು ಅಧಿಕೃತಗೊಂಡ ಕೂಡಲೇ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಮಯ ನಿಗದಿಪಡಿಸಲಾಗುವುದು ಎಂದು ಹೇಳಿದರು.

ನೂತನವಾಗಿ ಸಚಿವ ಸಂಪುಟಕ್ಕೆ ಏಳು ಮಂದಿ ಸೇರ್ಪಡೆಗೆ ಪಕ್ಷದ ವರಿಷ್ಠರು ಅನುಮತಿ ನೀಡಿದ್ದಾರೆ. ಆದರೆ, ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬ ಬಗ್ಗೆ ಇನ್ನೂ ಗೊತ್ತಿಲ್ಲ. ಮುಂದೆ ಎಲ್ಲವೂ ನಿಮಗೆ ತಿಳಿಯಲಿದೆ ಎಂದು ಯಡಿಯೂರಪ್ಪ ಸ್ಪಷ್ಟ ಉತ್ತರ ನೀಡಲು ನಿರಾಕರಿಸಿದರು.

ರವಿವಾರ(ಜ.10) ಹೊಸದಿಲ್ಲಿಗೆ ತೆರಳಿದ್ದ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ, ಕರ್ನಾಟಕ ರಾಜ್ಯ ಉಸ್ತುವಾರಿ ಅರುಣ್ ಶಾ ಅವರನ್ನು ಖುದ್ದು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದರು.

ಬೆಳಗಾವಿ ಲೋಕಸಭಾ ಕ್ಷೇತ್ರ, ರಾಯಚೂರು ಜಿಲ್ಲೆಯ ಮಸ್ಕಿ ಮತ್ತು ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರಗಳ ಉಪಚುನಾವಣಾ ಅಭ್ಯರ್ಥಿಗಳ ಆಯ್ಕೆ, ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆ ಸಹಿತ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತುಕತೆ ನಡೆಸಿದ್ದರು.

ಈ ಸಂದರ್ಭದಲ್ಲಿ ಮಂತ್ರಿ ಮಂಡಲ ವಿಸ್ತರಣೆಗೆ ಬಿಜೆಪಿ ವರಿಷ್ಠರು ಸಮ್ಮತಿ ಸೂಚಿಸಿದ್ದರು. ಹೈಕಮಾಂಡ್ ಸಂಪುಟ ವಿಸ್ತರಣೆಗೆ ಒಪ್ಪಿಗೆ ನೀಡಿದ ಬೆನ್ನಲ್ಲೇ ರಾಜ್ಯ ಬಿಜೆಪಿ ವಲಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಸಚಿವ ಸಂಪುಟಕ್ಕೆ ಸೇರಲು ಆಕಾಂಕ್ಷಿಗಳು ತೀವ್ರ ರೀತಿಯಲ್ಲಿ ಲಾಬಿಯನ್ನು ನಡೆಸಿದ್ದಾರೆ.

ಸಂಭಾವ್ಯ ಸಚಿವರು:

ಆರ್.ಶಂಕರ್

ಎಂ.ಟಿ.ಬಿ.ನಾಗರಾಜ್

ಮುನಿರತ್ನ

ಉಮೇಶ್ ಕತ್ತಿ

ಎಸ್.ಎಂ.ಅಂಗಾರ

ಆರ್.ಪೂರ್ಣಿಮಾ

ಸಿ.ಪಿ.ಯೋಗೇಶ್ವರ್

ಅರವಿಂದ ಲಿಂಬಾವಳಿ

ವಿ.ಸುನೀಲ್ ಕುಮಾರ್

ಎಂ.ಪಿ.ರೇಣುಕಾಚಾರ್ಯ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News