ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಕಾರು ಅಪಘಾತ: ಪತ್ನಿ, ಆಪ್ತ ಕಾರ್ಯದರ್ಶಿ ಮೃತ್ಯು

Update: 2021-01-11 17:50 GMT

ಅಂಕೋಲಾ, ಜ.11: ಕೇಂದ್ರ ಆಯುಷ್ ಇಲಾಖೆಯ ಸಚಿವ ಶ್ರೀಪಾದ್ ನಾಯಕ್ ಅವರ ಕಾರು ಪಲ್ಟಿಯಾಗಿ ಸಚಿವರ ಪತ್ನಿ ಹಾಗೂ ಆಪ್ತ ಕಾರ್ಯದರ್ಶಿ ಮೃತಪಟ್ಟ ಘಟನೆ ಅಂಕೋಲಾ ತಾಲೂಕಿನ ಹಿಲ್ಲೂರು ಹೊಸಕಂಬಿ ಬಳಿ ಸೋಮವಾರ ರಾತ್ರಿ ಸಂಭವಿಸಿದ್ದು, ಸಚಿವ ಶ್ರೀಪಾದ್ ನಾಯಕ್ ಗಂಭೀರ ಗಾಯಗೊಂಡಿದ್ದಾರೆ.

ಗೋವಾದಿಂದ ಯಲ್ಲಾಪುರಕ್ಕೆ ಪತ್ನಿಯೊಂದಿಗೆ ಬಂದಿದ್ದ ಅವರು, ಯಲ್ಲಾಪುರದ ಪ್ರಸಿದ್ಧ ಬಿಕ್ಕು ಗುಡಿಗಾರ ಕಲಾ ಕೇಂದ್ರಕ್ಕೆ ಸಂಜೆ ಭೇಟಿ ನೀಡಿ ಕೇಂದ್ರದ ಕಾರ್ಯವೈಖರಿಯನ್ನು ವೀಕ್ಷಿಸಿ, ರಾತ್ರಿ ಗೋಕರ್ಣಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿದ್ದು, ಸಚಿವ ಶ್ರೀಪಾದ್ ನಾಯಕ್ ಅವರು ಗಂಭೀರ ಗಾಯಗೊಂಡಿದ್ದಾರೆ. ಅವರಿಗೆ ಅಂಕೋಲಾದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಗೋವಾದ ಆಸ್ಪತ್ರೆಗೆ ಸಾಗಿಸಲಾಗಿದೆ.

ದುರ್ಘಟನೆಯಲ್ಲಿ ಸಚಿವರ ಪತ್ನಿ ವಿಜಯಾ ಹಾಗೂ ಸಚಿವರ ಆಪ್ತ ಕಾರ್ಯದರ್ಶಿ ದೀಪಕ್ ರಾಮದಾದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತದ ವೇಳೆ ಸಚಿವರ ಜೊತೆ ಕಾರು ಚಾಲಕ ಸೇರಿ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಅಂಕೋಲಾ ಬಳಿ ನಡೆದ ರಸ್ತೆ ಅಪಘಾತದಲ್ಲಿ ಕೇಂದ್ರ ಆಯುಷ್ ಖಾತೆ ಸಚಿವ ಶ್ರೀಪಾದ ನಾಯಕ್ ಅವರ ಪತ್ನಿ ಶ್ರೀಮತಿ ವಿಜಯಾ ನಾಯಕ್ ಅವರು ನಿಧನ ಹೊಂದಿರುವ ಘಟನೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. 

ಶ್ರೀಮತಿ ವಿಜಯಾ ನಾಯಕ್ ಅವರ ನಿಧನ ಅತ್ಯಂತ ದುರದೃಷ್ಟಕರ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಈ ಆಘಾತವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರು ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಗಾಯಗೊಂಡಿರುವ ಸಚಿವ ಶ್ರೀ ನಾಯಕ್ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದ್ದಾರೆ. ಸಚಿವರಿಗೆ ಎಲ್ಲ ಅಗತ್ಯ ನೆರವು ನೀಡುವ ಬಗ್ಗೆ ಜಿಲ್ಲಾಡಳಿತ ಹಾಗೂ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News