ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ, ಜೆಡಿಎಸ್ ಅಧಿಕಾರಕ್ಕೆ ಬರಲ್ಲ: ಸಚಿವ ಈಶ್ವರಪ್ಪ

Update: 2021-01-11 16:44 GMT

ಮೈಸೂರು, ಜ.11: ಮುಖ್ಯಮಂತ್ರಿ ಬದಲಾವಣೆ ಎಂದು ಸುಮ್ಮನೆ ಮಾತನಾಡ್ತಾರೆ. ಇದು ಕೇವಲ ಸೃಷ್ಟಿ ಮಾಡಿರುವುದು ಅಷ್ಟೆ. ಕೇಂದ್ರ ನಾಯಕರು, ಶಾಸಕರು ಯಾರೂ ಹೇಳಿಲ್ಲ. ಇದನ್ನ ಹೇಳುತ್ತಿರುವುದು ಸಿದ್ದರಾಮಯ್ಯನವರು ಒಬ್ಬರೇ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ನಂತರ ಅವರಿಗೆ ಅದರ ಮೇಲೆ ಕಣ್ಣು. ಹಾಗಾಗಿ ಸ್ಥಾನ ಕಳೆದುಕೊಳ್ಳುತ್ತಾರೆ ಎಂದು ಹೇಳಿ ಅಭ್ಯಾಸ ಆಗಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಹತ್ತಾರು ಬಾರಿ ಹೇಳಿದರೆ ಜನ ನಂಬುತ್ತಾರೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ ಇದು ಸುಳ್ಳು. ಕೇವಲ ಮಾಧ್ಯಮಗಳಲ್ಲಿ ಮಾತ್ರ ಬರುತ್ತಿರುವ ಸುದ್ದಿ ಅಷ್ಟೆ ಎಂದು ಸ್ಪಷ್ಟಪಡಿಸಿದರು.

2023ಕ್ಕೆ ಕುಮಾರಸ್ವಾಮಿ ಮತ್ತೆ ಸಿಎಂ ಆಗುತ್ತೇನೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಕೆಲವರು ಹಗಲು ಕನಸು ಕಾಣುತ್ತಿರುತ್ತಾರೆ. ಅದೇ ರೀತಿ ಕುಮಾರಸ್ವಾಮಿ, ಸಿದ್ದರಾಮಯ್ಯ ಹಗಲು ಕನಸು ಕಾಣುತ್ತಿದ್ದಾರೆ. ಸಿದ್ದರಾಮಯ್ಯ ಅವರೆ ನಾನು ಮುಖ್ಯಮಂತ್ರಿ ಆಗುತ್ತೇನೆ ಅಂತಿದ್ದಾರೆ. ಅವರ ಪಕ್ಷದವರು ಯಾರಾದರೂ ಹೇಳಿದ್ದಾರಾ? ಕುಮಾರಸ್ವಾಮಿ ಅವರು ಕೂಡ ಅದೇ ರೀತಿ ಮಾತನಾಡುತ್ತಿದ್ದಾರೆ. ಇವರಿಬ್ಬರದ್ದು ಹಗಲು ಕನಸು. ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ. ಜೆಡಿಎಸ್ ಅಧಿಕಾರಕ್ಕೆ ಬರಲ್ಲ ಎಂದು ಲೇವಡಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News