ಸ್ವಾಮಿ ವಿವೇಕಾನಂದರ ಸ್ಫೂರ್ತಿಯೊಂದಿಗೆ ಸರಕಾರ ಕೆಲಸ ಮಾಡುತ್ತಿದೆ: ಸಿಎಂ ಯಡಿಯೂರಪ್ಪ

Update: 2021-01-12 14:11 GMT

ಬೆಂಗಳೂರು, ಜ.12: ಸ್ವಾಮಿ ವಿವೇಕಾನಂದರ ಚಿಂತನೆ ಮತ್ತು ಸಂದೇಶಗಳ ಪ್ರೇರಣೆಯೊಂದಿಗೆ ನಮ್ಮ ಸರಕಾರ ಕೆಲಸ ಮಾಡುತ್ತಿದೆ. ಶಿಕ್ಷಣವೂ ಸೇರಿದಂತೆ ಎಲ್ಲ ವಿಭಾಗಗಳಲ್ಲೂ ಅವರ ಸ್ಫೂರ್ತಿಯೊಂದಿಗೆ ಮುಂದಿನ ದಿನಗಳಲ್ಲೂ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ 158ನೆ ಜನ್ಮದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯನ ವ್ಯಕ್ತಿತ್ವ ವಿಕಸನಕ್ಕೆ ಶಿಕ್ಷಣದ ಮಹತ್ವವೇನು ಎಂಬುದನ್ನು ಸ್ವಾಮಿ ವಿವೇಕಾನಂದರು ಜಗತ್ತಿಗೆ ಸಾರಿದರು. ಅವರ ಕನಸನ್ನು ಸಾಕಾರಗೊಳಿಸಲು ರಾಜ್ಯ ಸರಕಾರವು ಉನ್ನತ ಶಿಕ್ಷಣ ವಲಯದಲ್ಲಿ ದೂರದೃಷ್ಟಿಯ ಬದಲಾವಣೆಯನ್ನು ತಂದಿದೆ ಎಂದರು.

‘ಶಿಕ್ಷಣವೆಂದರೆ ವ್ಯಕ್ತಿತ್ವ ನಿರ್ಮಾಣ, ವ್ಯಕ್ತಿತ್ವ ನಿರ್ಮಾಣದ ಮೂಲಕ ಚಾರಿತ್ರ್ಯ ನಿರ್ಮಾಣ, ಚಾರಿತ್ರ್ಯ ನಿರ್ಮಾಣದಿಂದ ಮಾತ್ರವೇ ರಾಷ್ಟ್ರನಿರ್ಮಾಣ’ ಎಂಬುದು ಸ್ವಾಮಿ ವಿವೇಕಾನಂದರ ಅಭಿಪ್ರಾಯವಾಗಿತ್ತು. ಅವರ ಕನಸನ್ನು ಸಾಕಾರಗೊಳಿಸಲು ರಾಜ್ಯ ಸರಕಾರದಿಂದ ಉನ್ನತ ಶಿಕ್ಷಣ ವಲಯದಲ್ಲಿ ದೂರದೃಷ್ಟಿಯ ಬದಲಾವಣೆ ತರಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಯುವಕರಲ್ಲಿ ಆಲೋಚನಾ ಶಕ್ತಿ, ಜ್ಞಾನ, ಕೌಶಲ್ಯಾಭಿವೃದ್ಧಿ ಬಗ್ಗೆ ಅರಿವು ಮೂಡಿಸಬೇಕಿದೆ. ನೂತನ ಶಿಕ್ಷಣ ನೀತಿಯಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ ಆಗಲಿದೆ. ಯುವ ಸಮೂಹವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಗುಣಮಟ್ಟದ ಉನ್ನತ ಶಿಕ್ಷಣ ಅತ್ಯವಶ್ಯಕ ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.

ಕೇಂದ್ರ ಸರಕಾರವು ಸುಶಿಕ್ಷಿತ, ಸಮರ್ಥ ಮತ್ತು ಸಮೃದ್ಧ ಭಾರತ ನಿರ್ಮಾಣಕ್ಕಾಗಿ ನೂತನ ಶಿಕ್ಷಣ ನೀತಿಯನ್ನು ಪ್ರಕಟಿಸಿದೆ. ದೇಶದ ಒಟ್ಟು ಜನಸಂಖ್ಯೆಯ ಸರಾಸರಿ ಶೇ.40ರಷ್ಟಿರುವ ಯುವಕರು ರಾಷ್ಟ್ರನಿರ್ಮಾಣ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಅವಕಾಶಗಳನ್ನು ಕಲ್ಪಿಸಲಾಗಿದೆ. ಇದಕ್ಕೆ ಪೂರಕವಾಗಿ ರಾಜ್ಯದ ಶಿಕ್ಷಣ ವ್ಯವಸ್ಥೆಗೆ ಹೊಸ ದಿಕ್ಕು ನೀಡಲಿರುವ ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ತರಲಾಗುತ್ತಿದ್ದು, ಇದರಿಂದ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಸುಧಾರಣೆಯಾಗಲಿದೆ ಎಂದು ಯಡಿಯೂರಪ್ಪ ಹೇಳಿದರು.

ಸರಕಾರಿ ಪದವಿ ಮತ್ತು ಸ್ನಾತಕೋತ್ತರ ಕಾಲೇಜು, ಪಾಲಿಟೆಕ್ನಿಕ್‍ಗಳಿಗೆ ಮೂಲಭೂತ ಸೌಕರ್ಯ ಒದಗಿಸಲು 430 ಕೋಟಿ ರೂ.ಗಳನ್ನು ರಾಜ್ಯ ಸರಕಾರ ಬಿಡುಗಡೆ ಮಾಡಿದೆ. ಹೆಣ್ಣುಮಕ್ಕಳ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡಲು ಸರಕಾರಿ ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳಿಗೆ ಪ್ರವೇಶ ಪಡೆಯುವ ಎಲ್ಲ ಹೆಣ್ಣು ಮಕ್ಕಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.

ಪದವಿ ಪೂರ್ವ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನೀಟ್ ಮತ್ತು ಜೆಇಇ ಸೇರಿದಂತೆ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ, ಉನ್ನತ ವ್ಯಾಸಂಗಕ್ಕೆ ಮತ್ತು ಉದ್ಯೋಗ ಪಡೆಯಲು ಅಗತ್ಯ ತರಬೇತಿ ನೀಡಲಾಗುತ್ತಿದೆ. 155 ಕೋಟಿ ರೂ. ವೆಚ್ಚದಲ್ಲಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ಉಚಿತವಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

430 ಸರಕಾರಿ ಪದವಿ ಕಾಲೇಜುಗಳು, 87 ಸರಕಾರಿ ಪಾಲಿಟೆಕ್ನಿಕ್‍ಗಳು ಹಾಗೂ 14 ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ 35 ಕೋಟಿ ರೂ.ವೆಚ್ಚದಲ್ಲಿ, ನೂತನ ಹಾಗೂ ಹೆಚ್ಚು ಪರಿಣಾಮಕಾರಿ ‘ಡಿಜಿಟಲ್ ಕಲಿಕೆ’ ಯೋಜನೆ ಅನುಷ್ಠಾನಗೊಳಿಸಲಾಗಿದೆ. ರಾಷ್ಟ್ರೀಯ ಉಚ್ಚತರ ಅಭಿಯಾನ(ರೂಸಾ) ಯೋಜನೆಯಡಿ ವಿಶ್ವವಿದ್ಯಾಲಯವಾಗಿ ಉನ್ನತೀಕರಿಸಲು ರಾಜ್ಯದ ಎರಡು ಕಾಲೇಜುಗಳನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ದೇಶದಲ್ಲಿಯೆ ಮೊದಲ ಬಾರಿಗೆ, ಯುವಜನರ ಸಮಗ್ರ ಮಾನಸಿಕ ಆರೋಗ್ಯದ ದೃಷ್ಟಿಯಿಂದ ‘ಯುವ ಸ್ಪಂದನ’ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ. ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕ್ರೀಡಾಂಗಣದಲ್ಲಿ ಯುವ ಸ್ಪಂದನ ಕೇಂದ್ರಗಳ ಸ್ಥಾಪನೆ ಮಾಡಲಾಗಿದ್ದು, ಇದರಿಂದ 20 ಸಾವಿರಕ್ಕೂ ಹೆಚ್ಚು ಯುವಜನರಿಗೆ ಮಾರ್ಗದರ್ಶನ ಮತ್ತು ಕೌನ್ಸಿಲಿಂಗ್ ಪ್ರಯೋಜನ ಪಡೆದಿದ್ದಾರೆ ಎಂದು ಅವರು ಹೇಳಿದರು.

ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ, ಸ್ವಾಮಿ ವಿವೇಕಾನಂದರ ಪ್ರೇರಣೆಯೊಂದಿಗೆ ಉತ್ತಮ ಗುಣಮಟ್ಟದ ಉನ್ನತ ಶಿಕ್ಷಣ ನೀಡುವುದರ ಜತೆಗೆ, ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ 10 ದಶ ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿ ಮಾಡಲಾಗುವುದು ಎಂದರು.

ಕೃಷಿ, ಕೃಷಿ ಮಾರುಕಟ್ಟೆ, ಉನ್ನತ ಶಿಕ್ಷಣ, ಪ್ರಾಥಮಿಕ ಶಿಕ್ಷಣ ಸೇರಿದಂತೆ ಅನೇಕ ಇಲಾಖೆಗಳಲ್ಲಿ ಗಮನಾರ್ಹ ಸುಧಾರಣೆಗಳನ್ನು ಸರಕಾರ ಜಾರಿಗೆ ತಂದಿದೆ. ನನ್ನ ಇಲಾಖೆಗಳ ಮಟ್ಟಿಗೆ ಹೇಳುವುದಾದರೆ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯೋಗ ಮಾರುಕಟ್ಟೆಗೆ ತಕ್ಕಂತೆ ತರಬೇತಿ ನೀಡಿ ಕೌಶಲ್ಯಭರಿತ ಮಾನವ ಸಂಪನ್ಮೂಲವನ್ನು ತಯಾರು ಮಾಡುವ ಕೆಲಸ ಯುದ್ಧೋಪಾದಿಯಲ್ಲಿ ನಡೆಯುತ್ತಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನ, ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ (ಎಲ್‍ಎಂಸ್), ಡಿಜಿಟಲ್ ಕಲಿಕೆಯನ್ನು ಉತ್ತೇಜಿಸಲು ಉನ್ನತ ಶಿಕ್ಷಣ ಪಡೆಯುತ್ತಿರುವ ಸುಮಾರು 1.55 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅತ್ಯುತ್ತಮ ಗುಣಮಟ್ಟದ ಉಚಿತ ಟ್ಯಾಬ್ಲೆಟ್ ಪಿಸಿಗಳನ್ನು ನೀಡುವ ನಿರ್ಧಾರ, ಏಕೀಕೃತ ವಿಶ್ವವಿದ್ಯಾಲಯ ಹಾಗೂ ಕಾಲೇಜು ನಿರ್ವಹಣಾ ಸಿಸ್ಟಂ (ಯುಯುಸಿಎಂಸ್), ಡಿಪ್ಲೋಮ ಪಠ್ಯದ ಆಮೂಲಾಗ್ರ ಬದಲಾವಣೆ, ನಾಲ್ಕು ಹಂತಗಳಲ್ಲಿ ಯುವಕರ ಸಬಲೀಕರಣ, ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಶೇ.34.6ರಷ್ಟಿರುವ ಯುವಜನರ ಕೌಶಲ್ಯಾಭಿವೃದ್ಧಿಗೊಳಿಸುವುದು, 2025ರ ಹೊತ್ತಿಗೆ 15 ಲಕ್ಷ ಯುವಜನರು ಸಂಪೂರ್ಣವಾಗಿ ಕುಶಲಭರಿತರಾಗಿ ಹೊರಹೊಮ್ಮಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸ್ನಾತಕೋತ್ತರ, ಪದವಿ, ಪಾಲಿಟೆಕ್ನಿಕ್, ಇಂಜಿನಿಯರಿಂಗ್, ವೈದ್ಯಕೀಯ, ಜಿಟಿಟಿಸಿ, ಐಟಿಐಗಳಿಂದ 2024-25ರ ಹೊತ್ತಿಗೆ 24 ಲಕ್ಷ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳಿಂದ ಹೊರಬರಲಿದ್ದಾರೆ ಎಂದ ಅವರು, ಇನ್ನು ಬಿಯಾಂಡ್ ಬೆಂಗಳೂರು, ನೂತನ ಐಟಿ ನೀತಿ, ಕರ್ನಾಟಕ ಆವಿಷ್ಕಾರ ಪ್ರಾಧಿಕಾರ, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್, ಎಎಸ್‍ಡಿಎಂ ನೀತಿ, ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿಯಿಂದಾಗಿ ಮುಂದಿನ ವರ್ಷಗಳಲ್ಲಿ ಉದ್ಯೋಗ ಸೃಷ್ಟಿ ದೊಡ್ಡ ಪ್ರಮಾಣದಲ್ಲಿ ಆಗಲಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, 12 ಮಂದಿ ಯವ ಸಾಧಕರಿಗೆ ಸನ್ಮಾನ ಮಾಡಿ ಗೌರವಿಸಿದರು. ಮುಖ್ಯಮಂತ್ರಿಗಳ ಭಾಷಣದ ನಂತರ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಇಲಾಖೆಗಳಲ್ಲಿ ಸ್ವಾಮಿ ವಿವೇಕಾನಂದರ ಪ್ರೇರಣೆಯೊಂದಿಗೆ ಕೈಗೊಂಡಿರುವ ಸುಧಾರಣಾ ಕ್ರಮಗಳ ಪ್ರಾತ್ಯಕ್ಷಿಕೆ ನೀಡಿದರು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್, ಐಟಿಬಿಟಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಯೋಜನೆ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಮತ್ತಿತರರು ಹಾಜರಿದ್ದರು.

ಚರ್ಚಾಗೋಷ್ಠಿ

ರಾಜ್ಯದಲ್ಲಿ 10 ದಶಲಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿ ಮಾಡುವ ನಿಟ್ಟಿನಲ್ಲಿ ಇರುವ ಅವಕಾಶಗಳು-ಸವಾಲುಗಳು ಕುರಿತ ಚರ್ಚಾಗೋಷ್ಠಿ ನಡೆಯಿತು. 1 ಬ್ರಿಡ್ಜ್ ಸಂಸ್ಥೆ ಸಿಇಓ ಮದನ್ ಪದಕಿ ನಡೆಸಿಕೊಟ್ಟ ಈ ಗೋಷ್ಠಿಯಲ್ಲಿ ಕೃಷಿಕಲ್ಪ ಪೌಂಡೇಶನ್‍ನ ಸಿಇಓ ಸಿ.ಎಂ.ಪಾಟೀಲ್, ಬೆಂಗಳೂರಿನ ವೋಲ್ವೋ ಕಂಪನಿ ಸಿಇಓ ಕಮಲ್ ಬಾಲಿ, ವಿಶ್ರಾಂತ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ವಿನಯ್ ಲೂಥ್ರ, ಇಂಡಿ ವಿಲೇಜ್ ಸಿಇಓ ಸ್ಮಿತಾ ಮಾಲಿಪಾಟೀಲ್, ವಯತಿ ವೇವ್ಸ್ ಸಿಇಓ ದೇವಿಕಾ ಕೃಷ್ಣನ್ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News