ಯಾರೇನೇ ಆರೋಪ ಮಾಡಿದರು ತಲೆ ಕೆಡಿಸಿಕೊಳ್ಳುವುದಿಲ್ಲ: ಯಡಿಯೂರಪ್ಪ
ದಾವಣಗೆರೆ, ಜ.14: ನನ್ನ ಇತಿಮಿತಿಯೊಳಗೆ ಏಳು ಜನರಿಗೆ ಸಚಿವ ಸ್ಥಾನ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ದಾವಣಗೆರೆಯ ಜಿಎಂಐಟಿ ಕಾಲೇಜು ಆವರಣದಲ್ಲಿರುವ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ತರಿಂದ ಹನ್ನೆರಡು ಜನ ಮಂತ್ರಿ ಸ್ಥಾನ ಸಿಗಲಿಲ್ಲ ಎಂದು ಅಸಮಾಧಾನಗೊಂಡಿದ್ದಾರೆ. ಜೊತೆಗೆ ಸಚಿವ ಸ್ಥಾನ ವಂಚಿತರು ಇಲ್ಲಸಲ್ಲದ ಹೇಳಿಕೆ ನೀಡುವುದನ್ನು ಬಿಟ್ಟು ನನ್ನ ಜೊತೆ ಚರ್ಚೆ ಮಾಡಿ ರಾಜ್ಯದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.
ಕೇಂದ್ರ ನಾಯಕರ ಆಶೀರ್ವಾದ ನನ್ನ ಮೇಲೆ ಇರುವುದರಿಂದ ನಾನು ಯಾರಿಗೂ ಹೆದರಬೇಕಾಗಿಲ್ಲ. ಹಾದಿ, ಬೀದಿಯಲ್ಲಿ ಹೇಳಿಕೆ ನೀಡುವುದು ಯಾರಿಗೂ ಶೋಭೆ ತರುವುದಿಲ್ಲ ಎಂದು ಪರೋಕ್ಷವಾಗಿ ಶಾಸಕ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದರು.
ವರಿಷ್ಠರಿಗೆ ನನ್ನ ಮೇಲೆ ಅಪಾರವಾದ ವಿಶ್ವಾಸವಿದ್ದು, ವರಿಷ್ಠರ ಆಶೀರ್ವಾದದಿಂದಲೇ ಎರಡೂವರೆ ವರ್ಷ ಜನಪರ ಕೆಲಸ ಮಾಡುವ ಮೂಲಕ ಸರ್ಕಾರವನ್ನು ಯಶಸ್ವಿಯಾಗಿ ನಡೆಸಿದ್ದೇನೆ. ಇನ್ನೂ ಎರಡೂವರೆ ವರ್ಷ ರಾಜ್ಯದ ಅಭಿವೃದ್ಧಿ ಕಡೆಗೆ ಹೆಚ್ಚಿನ ಗಮನ ಹರಿಸುತ್ತೇನೆ. ಯಾರು ಏನೇ ನನ್ನ ವಿರುದ್ಧ ಆರೋಪ ಮಾಡಿದರು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.
ರೈತಪರ ಬಜೆಟ್
ಮುಂಬರುವ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ರಾಜ್ಯ ಬಜೆಟ್ ಮಂಡಿಸಲಿದ್ದು, ತಾವು ರೈತಪರ ಬಜೆಟ್ ಮಂಡಿಸಲು ಉತ್ಸುಕನಾಗಿದ್ದೇನೆ.
-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ