ಕೆಜಿ-ಡಿಜೆ ಹಳ್ಳಿ ಪ್ರಕರಣ: ಅಮಾಯಕರ ಬಿಡುಗಡೆಗೆ ಆಗ್ರಹಿಸಿ ಜ.22ರಂದು ಬೆಂಗಳೂರು ಸ್ವಯಂಪ್ರೇರಿತ ಬಂದ್‍ಗೆ ಕರೆ

Update: 2021-01-16 15:46 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.16: ಡಿಜೆ-ಕೆಜಿ ಹಳ್ಳಿ ಗಲಭೆಯಲ್ಲಿ ತಪ್ಪಿತಸ್ಥರಲ್ಲದ ಹಾಗೂ ಅಪ್ರಾಪ್ತರ ಮೇಲಿನ ಕಠಿಣ ಕಾನೂನುಗಳನ್ನು ವಜಾಗೊಳಿಸುವಂತೆ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜ.22ರಂದು ರಾಜಧಾನಿ ಬೆಂಗಳೂರಿನಲ್ಲಿ ಸ್ವಯಂಪ್ರೇರಿತ ಬಂದ್‍ಗೆ ಕರೆ ನೀಡಲಾಗಿದೆ ಎಂದು ಕರ್ನಾಟಕ ಮುಸ್ಲಿಮ್ ಮುತ್ತಹಿದಾ ಮಹಾಝ್ ತಿಳಿಸಿದೆ.

ಶನಿವಾರ ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕರ್ನಾಟಕ ಮುತ್ತಹಿದಾ ಮಹಾಝ್‍ನ ರಾಜ್ಯ ಸಂಚಾಲಕ ಮಸೂದ್ ಅಬ್ದುಲ್ ಖಾದರ್, ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ನಡೆದ ಘಟನೆ ಖಂಡನೀಯ. ಯಾರು ಸಹ ಕಾನೂನು ಕೈಗೆತ್ತಿಕೊಳ್ಳಬಾರದು. ತಪ್ಪು ಯಾರೇ ಮಾಡಲಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಿ. ಆದರೆ, ಈ ಗಲಭೆ ಪ್ರಕರಣದಲ್ಲಿ ಉದ್ದೇಶಪೂರ್ವಕವಾಗಿಯೇ ಹಲವು ಯುವಕರನ್ನು ಬಂಧಿಸಲಾಗಿದೆ. ಜತೆಗೆ, ಯಾವುದೇ ಆಧಾರ ಇಲ್ಲದಿದ್ದರೂ, ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ಅನ್ವಯ ಮೊಕದ್ದಮೆ ದಾಖಲಿಸಿಕೊಳ್ಳಲಾಗಿದೆ ಎಂದು ಆರೋಪಿಸಿದರು.

ಅಮಾಯರ ಮೇಲಿನ ಮೊಕದ್ದಮೆಗಳನ್ನು ವಾಪಸ್ಸು ಪಡೆಯಬೇಕೆಂದು ಹಲವು ಬಾರಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರೂ, ನಮ್ಮ ಬೇಡಿಕೆಗಳಿಗೆ ಸ್ಪಂದಿಸಿಲ್ಲ. ಹಾಗಾಗಿಯೇ, ಜ.22ರಂದು ಸಾಮೂಹಿಕವಾಗಿ ಸ್ವಯಂಪ್ರೇರಿತ ಬಂದ್‍ಗೆ ಕರೆ ನೀಡಲಾಗಿದೆ. ಆದರೆ, ಅಂದು ಯಾವುದೇ ರೀತಿಯ ಮೆರವಣಿಗೆ, ಪ್ರತಿಭಟನೆಗಳನ್ನು ಹಮ್ಮಿಕೊಂಡಿಲ್ಲ ಎಂದು ಅವರು ವಿವರಿಸಿದರು.

ಬಂದ್ ಹೇಗೆ?: ಜ.22ರಂದು ತಮ್ಮ ಅಂಗಡಿ-ಮುಂಗಟ್ಟುಗಳು ಸೇರಿದಂತೆ ಇನ್ನಿತರೆ ಚಟುವಟಿಕೆಗಳನ್ನು ಬಂದ್ ಮಾಡಿ, ಮನೆಯಲ್ಲಿಯೇ ಇರುವಂತೆ ಈಗಾಗಲೇ ಮಾಹಿತಿ ನೀಡಿದ್ದು, ಉತ್ತಮ ಸ್ಪಂದನೆ ದೊರೆತಿದೆ. ಜತೆಗೆ, ಈ ಬಂದ್‍ಗೆ 18ಕ್ಕೂ ಅಧಿಕ ಸಂಘ-ಸಂಸ್ಥೆಗಳು, ಮಸೀದಿ ಸಮಿತಿಗಳು ಬೆಂಬಲ ಸೂಚಿಸಿವೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News