ಸಂವಿಧಾನ ರಕ್ಷಣೆಗಾಗಿ ಎಂತಹದೇ ಹೋರಾಟಕ್ಕೂ ಸಿದ್ದ: ಪ್ರೊ. ಕೆ.ಎಸ್.ಭಗವಾನ್

Update: 2021-01-18 14:43 GMT

ಮೈಸೂರು,ಜ.17: ನಮ್ಮ ದೇಶದ ಸಂವಿಧಾನ ರಕ್ಷಣೆಗಾಗಿ ಎಂತಹದೇ ಹೋರಾಟಕ್ಕೂ ನಾನು ಸಿದ್ದ ಎಂದು ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಹೇಳಿದರು.

ಅಶೋಕಪುರಂ ಅಭಿಮಾನಿಗಳ ಬಳಗ, ಅಶೋಕಪುರಂ ವಿವಿಧ ದಲಿತ ಸಂಘಟನೆಗಳು ಮತ್ತು ಪ್ರಗತಿಪರ ಸಂಘಟನೆಗಳ ವತಿಯಿಂದ ರವಿವಾರ ಡಾ.ಬಿ. ಆರ್. ಅಂಬೇಡ್ಕರ್ ಉದ್ಯಾನವನದಲ್ಲಿ ನಡೆದ “ಸಂವಿಧಾನ ಉಳಿವಿಗಾಗಿ ಜಾಗೃತಿ ಅಭಿಯಾನ”ಕ್ಕೆ ಚಾಲನೆ ನೀಡಿ ಮಾತನಾಡಿದರು.

ಹಿಂದೆ ವೈದಿಕಶಾಹಿಯಿಂದಾಗಿ ದಲಿತರು ಮತ್ತು ಹಿಂದುಳಿದವರು ಅಕ್ಷರಶಃ ಪಶುಗಳಂತೆ ಜೀವಿಸಿದರು. ಇವರ ಉನ್ನತಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚಿಸಿದರು. ಇಂತಹ ಸಂವಿಧಾನವನ್ನು ಉಳಿಸಿಕೊಳ್ಳಲು ಎಲ್ಲರೂ ಪಣತೊಡಬೇಕು ಎಂದು ಹೇಳಿದರು.
ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ, ಇಂದು ದೇಶದ ಸಂವಿಧಾನ ಅಪಾಯದಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಬಂಡವಾಳ ಶಾಹಿಗಳ ಪರವಾಗಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಕಾನೂನುಗಳನ್ನು ತಿದ್ದುಪಡಿ ಮಾಡಲಾಗುತ್ತಿದೆ. ಕೋಮುವಾದಿಗಳು ಬಡವರ ಆಶಯಗಳಿಗೆ ವಿರುದ್ಧವಾಗಿ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದ ಅವರು, ಪರಿಸ್ಥಿತಿ ಹೀಗೆ ಮುಂದುವರಿದರೆ ಜನರೇ ದಂಗೆ ಏಳುವ ಕಾಲ ಬರಬಹುದು ಎಂದು ಎಚ್ಚರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News